ಕೇಂದ್ರದಲ್ಲಿ ಅಧಿಕಾರ ಇಲ್ಲದೆ 15 ವರ್ಷಗಳಿಂದ ಅನೇಕ ಸವಾಲು ಎದುರಿಸಿದ್ದೇವೆ: ಜಿ ಪರಮೇಶ್ವರ್
ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡು 15 ವರ್ಷಗಳ ಅವಧಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಎಸ್ಐಆರ್ ಕುರಿತು ದೇಶಾದ್ಯಂತ ವಿವಿಧ ಚರ್ಚೆಗಳು ನಡೆದಿದ್ದು, ಅದರ ಸಾಧಕ-ಬಾಧಕಗಳ ಕುರಿತಾಗಿ ಚರ್ಚಿಸಲಾಗಿದೆ. ಇತರೆ ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆಗಳ ಸಂದರ್ಭದಲ್ಲಿ ಉಂಟಾದ ಸವಾಲುಗಳ ಅನುಭವವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದಲ್ಲಿ ಮತದಾರರ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯವಾಗಿದೆ ಎಂದೂ ಅವರು ಹೇಳಿದ್ದಾರೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಎಸ್ಐಆರ್ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯಬೇಕು. ಬಿಎಲ್ಒಗಳು ಮತ್ತು ಸಂಬಂಧಿತ ಅಧಿಕಾರಿಗಳು ಪರಸ್ಪರ ಸಂಪರ್ಕ ಇಟ್ಟುಕೊಂಡು, ಅರ್ಹ ಮತದಾರರ ಹೆಸರು ಅನಗತ್ಯವಾಗಿ ಕೈಬಿಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.
15 ವರ್ಷಗಳಿಂದ ಅಧಿಕಾರ ಇಲ್ಲದೆ ಸವಾಲು
ಇನ್ನು ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡು 15 ವರ್ಷಗಳ ಅವಧಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದೇವೆ. ಕೇಂದ್ರದಿಂದ ಅನುದಾನ ವಿಳಂಬ, ಯೋಜನೆಗಳ ಅನುಷ್ಠಾನದಲ್ಲಿ ತೊಂದರೆ, ಬಡಜನರಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸುವಲ್ಲಿ ಹಲವು ಸಮಸ್ಯೆಗಳನ್ನು ಅನುಭವಿಸಿದ್ದೇವೆ. ಜೆಜೆಎಂ ಯೋಜನೆ ಹಾಗೂ ನರೇಗಾ ಕಾರ್ಯಕ್ರಮಗಳಿಗೂ ಅಗತ್ಯ ಹಣಕಾಸು ನೆರವು ದೊರೆಯದಿರುವ ಪರಿಸ್ಥಿತಿಗಳನ್ನು ಕಂಡಿದ್ದೇವೆ. ಕೇಂದ್ರ ಸರ್ಕಾರದಿಂದ ಸಿಗದ ಬೆಂಬಲ ಮತ್ತು ಸಹಕಾರದ ಕೊರತೆಯು ಅಭಿವೃದ್ಧಿ ಕಾರ್ಯಗಳ ಮೇಲೆ ಬೀರುವ ಪರಿಣಾಮದ ಬಗೆಗಿನ ಅನುಭವ ನಮಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಬಡವರ ಕಲ್ಯಾಣವನ್ನೇ ಪ್ರಮುಖ ಆದ್ಯತೆಯನ್ನಾಗಿರಿಸಿಕೊಂಡಿದೆ. ನಾವು ಜಾರಿಗೆ ತಂದಿರುವ ಜನಪರ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯಬೇಕಾದರೆ 2028ರಲ್ಲಿಯೂ ಮತ್ತೊಮ್ಮೆ ಜನರ ಆಶೀರ್ವಾದ ನಮಗೆ ಬೇಕು. ಇದೇ ಕಾರಣಕ್ಕಾಗಿ ಎಸ್ಐಆರ್ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಕಾರಣಕ್ಕೂ ಮತದಾರರ ಹಕ್ಕಿಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಿ ತಪ್ಪುಗಳು ಕಂಡುಬಂದರೂ ಅವುಗಳ ಮೇಲ್ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಕಚೇರಿ ನಮಗೆ ದೇವಾಲಯವಿದ್ದಂತೆ , ಪಕ್ಷ ತಾಯಿಯಿದ್ದಂತೆ. ಆದ್ದರಿಂದ ಅದರ ಅಭಿವೃದ್ಧಿ ಮತ್ತು ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು. ಅಧ್ಯಕ್ಷನಾಗಿದ್ದ ಅವಧಿಯಲ್ಲಿ ವಿವಿಧ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಸುಮಾರು 13 ಕಟ್ಟಡಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿತ್ತು. ಭಾರತ್ ಜೋಡೋ ಕಟ್ಟಡವನ್ನು ಸುಮಾರು ₹20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರ ಉದ್ಘಾಟನೆಗೂ ಮುನ್ನ ಅಧಿಕಾರದಿಂದ ಹೊರಬಂದಿದ್ದೆ ಎಂದರು.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಅವರ ಶ್ರಮವೂ ಮಹತ್ವದ್ದಾಗಿದೆ. ಕಚೇರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಹಲವು ಚರ್ಚೆಗಳು ನಡೆದಿದ್ದವು. ಶ್ರೀ ಡಿ.ಕೆ. ಶಿವಕುಮಾರ್ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಬೆಳಗಾವಿ ಕಾಂಗ್ರೆಸ್ ಕಚೇರಿಗೆ ಸೂಕ್ತ ಜಾಗ ಪಡೆಯುವ ಅಗತ್ಯವನ್ನು ಒತ್ತಾಯಿಸಿದ್ದರು. ಪ್ರಮುಖ ಸ್ಥಳದಲ್ಲಿದ್ದ ಆ ಜಾಗವನ್ನು ಖರೀದಿಸಲು ₹25 ಲಕ್ಷ ಅನುದಾನ ನೀಡಿ ಅಡಿಗಲ್ಲು ಹಾಕಲಾಗಿತ್ತು ಎಂದು ವಿವರಿಸಿದರು.














Click it and Unblock the Notifications