ಗದಗ-ವಾಡಿ ರೈಲು ಮಾರ್ಗ ಯೋಜನೆ ಕಾಮಗಾರಿ ಆರಂಭ
ಗದಗ, ಅ.18 : ಬಹು ಬೇಡಿಕೆಯ ಗದಗ-ವಾಡಿ ರೈಲ್ವೆ ಮಾರ್ಗ ಯೋಜನೆಯ ಕಾಮಗಾರಿ ಆರಂಭವಾಗಿದೆ. ಒಟ್ಟು 1,922 ಕೋಟಿ ರೂ.ಗಳ ಅಂದಾಜು ವೆಚ್ಚದ ಕಾಮಗಾರಿ ಇದಾಗಿದ್ದು, ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಇದರಿಂದ ಅನುಕೂಲವಾಗಲಿದೆ.
ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆ ಕಾಮಗಾರಿಗೆ ಚಾಲನೆ ನೀಡಿದರು. ಈ ರೈಲು ಮಾರ್ಗ ಯೋಜನೆ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ವರದಾನವಾಗಲಿದೆ.

252.5 ಕಿ.ಮೀ. ಉದ್ದದ ಗದಗ-ವಾಡಿ ರೈಲು ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಕೈಗೊಂಡಿವೆ. ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಮಂತ್ರಾಲ ಶೇ. 50:50 ವೆಚ್ಚ ಹಂಚಿಕೆಯಡಿ ಯೋಜನೆಯನ್ನು ಆರಂಭಿಸಿವೆ. ರಾಜ್ಯ ಸರ್ಕಾರ 961 ಕೋಟಿ ರೂ. ವೆಚ್ಚ ಮಾಡುತ್ತಿದೆ.
ರೈಲು ಮಾರ್ಗಕ್ಕೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರವು ಉಚಿತವಾಗಿ ನೈರುತ್ಯ ರೈಲ್ವೆಗೆ ನೀಡಲಿದೆ. ಕರ್ನಾಟಕ ಸರ್ಕಾರ ಭೂ ಸ್ವಾಧೀನಕ್ಕಾಗಿ 161 ಕೋಟಿ, ಕಾಮಗಾರಿಗಾಗಿ 50.28 ಕೋಟಿಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ.












Click it and Unblock the Notifications