ಚುನಾವಣೆಯಲ್ಲಿ ಸ್ಪರ್ಧೆ, ಹೈಕಮಾಂಡ್ ನಿರ್ಧರಿಸಲಿದೆ: ಗಾಲಿ ರೆಡ್ಡಿ
ಸಕ್ರಿಯ ರಾಜಕೀಯಕ್ಕೆ ಮರಳುವುದು ಖಚಿತ, ಆದರೆ, ಯಾವ ಕ್ಷೇತ್ರದಿಂದ ಮುಂದಿನ ಚುನಾವಣೆ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ: ಗಾಲಿ ಜನಾರ್ದನ ರೆಡ್ಡಿ.
ರಾಯಚೂರು, ಮೇ 22: 'ನನ್ನ ಉಸಿರಿರುವವರೆಗೂ ನಾನು ಬಿಜೆಪಿಯನ್ನು ತೊರೆಯುವುದಿಲ್ಲ, ನಾನು ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿಲ್ಲ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ, ಹೈಕಮಾಂಡ್ ಗೆ ಬಿಟ್ಟಿದ್ದು' ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ನಾನು ನಿರ್ಧರಿಸಿಲ್ಲ. ಈ ಬಗ್ಗೆ ಇಲ್ಲಿ ತನಕ ಬಂದಿರುವ ವರದಿಗಳೆಲ್ಲ ಸತ್ಯಕ್ಕೆ ದೂರವಾಗಿವೆ. ನಾನು ಎಲ್ಲಿಂದ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.
ನಾನು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ, ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸಲು ಸಿದ್ಧ, 2008ರ ಚುನಾವಣೆ ಫಲಿತಾಂಶ ಮರುಕಳಿಸಲಿದ್ದು, ರಾಯಚೂರಿನ ಎರಡು ಕ್ಷೇತ್ರ, ಮಾನ್ವಿ, ಸಿಂಧನೂರು, ಲಿಂಗಸುಗೂರು, ದೇವದುರ್ಗ, ಮಸ್ಕಿ ಸೇರಿದಂತೆ ಎಲ್ಲ ಏಳು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧದ 150 ಕೋಟಿ ರು ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಗೆ ದಾಖಲೆಗಳನ್ನು ಸಲ್ಲಿಸಲು ಮೂರು ವಾರ ಸಮಯ ಕೇಳಿದ್ದೇನೆ. ದಾಖಲೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.