ಗಣೇಶ ಹಬ್ಬ ಆಚರಣೆ; ಈ ಅನುಮತಿಗಳನ್ನು ಪಡೆಯುವುದು ಕಡ್ಡಾಯ
ಬೆಂಗಳೂರು, ಆಗಸ್ಟ್ 25: ಸೆಪ್ಟೆಂಬರ್ನಲ್ಲಿ ಗೌರಿ ಹಾಗೂ ಗಣೇಶ ಹಬ್ಬ 2024 ಆಚರಣೆ ಮಾಡಲಾಗುತ್ತದೆ. ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುತ್ತಾರೆ. ಆದ್ದರಿಂದ ಹೀಗೆ ಹಬ್ಬ ಆಚರಿಸುವವರು ಯಾವ-ಯಾವ ಅನುಮತಿಯನ್ನು ಪಡೆಯಬೇಕು ಎಂದು ಮಾಹಿತಿ ನೀಡಲಾಗಿದೆ. ಸೆಪ್ಟೆಂಬರ್ 7ರ ಶನಿವಾರ ಈ ಬಾರಿ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತದೆ.
ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುನ್ನ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಸೂಚಿಸಲಾಗಿದೆ.

ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹ ಬಳಸಬೇಕು ಎಂದು ತಿಳಿಸಲಾಗಿದೆ.
ಯಾವ-ಯಾವ ಅನುಮತಿ: ಗ್ರಾಮ/ ಪಟ್ಟಣ/ ಪುರಸಭೆ/ನಗರಸಭೆ/ ಮಹಾನಗರ ಪಾಲಿಕೆ ಹೀಗೆ ಅನುಮತಿ ಪಡೆಯುವ ಮುನ್ನ ರೂ.100 ಗಳ ಛಾಪಾ ಕಾಗದದ ಮೇಲೆ ಮುಚ್ಚಳಿಕೆಯನ್ನು ಸಲ್ಲಿಸುವುದು ಸರ್ಕಾರದ ಆದೇಶದ ಪ್ರಕಾರ ಕಡ್ಡಾಯವಾಗಿದೆ.
ಇಲ್ಲವಾದಲ್ಲಿ ನಿಯಂತ್ರಣ ಮಂಡಳಿಯ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಆ)ರ ಪ್ರಕಾರ ರೂ.10 ಸಾವಿರ ವರೆಗೂ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲುವಾಸ ವಿಧಿಸುವುದಾಗಿದೆ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಮೂರ್ತಿ ಪ್ರತಿಷ್ಠಾಪಿಸಿ ಕಾರ್ಯಕ್ರಮ ಆಯೋಜಿಸಬೇಕು.
ಗಣಪತಿ ವಿಗ್ರಹಗಳ ವಿಸರ್ಜನೆಗೆ ಸ್ಥಳೀಯ ಆಡಳಿತ ಗುರುತಿಸಿರುವ ಪ್ರದೇಶಗಳನ್ನು ಮಾತ್ರ ಬಳಕೆ ಮಾಡಬೇಕು. ಈ ಸ್ಥಳದಲ್ಲೇ ವಿಗ್ರಹಗಳನ್ನು, ಹೂವು, ಹಣ್ಣುಗಳನ್ನು ಪ್ರತ್ಯೇಕಿಸಿ ಮೂರ್ತಿ ವಿಸರ್ಜಿಸಲು ಸೂಚಿಸಲಾಗಿದೆ.
ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕಾನೂನಿನಂತೆ ಕ್ರಮಕೈಗೊಳ್ಳಲಾಗುತ್ತದೆ. ಕೊನೆ ಹಂತದ ದಾವಂತ ತಪ್ಪಿಸಲು ಈಗಾಗಲೇ ಅನುಮತಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಸ್ಥಳೀಯ ಆಡಳಿತಗಳು ಸೂಚನೆ ನೀಡಿವೆ.
ಬೆಂಗಳೂರು ನಗರದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಪ್ರಕಟಿಸಲಾಗದಿದೆ. ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಿಸಬೇಕು. ಪಿಒಪಿ ಗಣೇಶ ಮೂರ್ತಿ ತಯಾರಿಸುವುದನ್ನು ನಿಷೇಧಿಸಲಾಗಿದೆ. ಮೂರ್ತಿ ತಯಾರಿಕಾ ಘಟಕಗಳಿಗೆ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಗಿದೆ.
ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿರುವುದು ಕಂಡುಬಂದರೆ ವಶಕ್ಕೆ ಪಡೆದು ಅವರಿಗೆ ದಂಡ ವಿಧಿಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಗೌರಿ- ಗಣೇಶ ಹಬ್ಬದ ಅಂಗವಾಗಿ ಈಗಾಗಲೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿವಿಧ ಸಂಘ-ಸಂಸ್ಥೆಗಳು ಮಣ್ಣಿನಿಂದ ನಿರ್ಮಿಸಿದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಜಾಗೃತಿಯನ್ನು ಮೂಡಿಸುತ್ತಿವೆ. ಪಿ.ಓ.ಪಿ.ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡುತ್ತಿವೆ.












Click it and Unblock the Notifications