ಬೆಂಗಳೂರು: ಬಸ್ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಸರ್ಕಾರದ ವಿರುದ್ಧ ಕಿಡಿ
ಬೆಂಗಳೂರು, ಜನವರಿ 21: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಹೀನಾಯ ಕೃತ್ಯ ಇಂದು ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಂಗಳೂರು ಕೇಂದ್ರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ತಮಿಳುನಾಡಿನಿಂದ ಬೆಂಗಳೂರಿನ ಅಣ್ಣನ ಮನೆಗೆ ಮಹಿಳೆಯೊಬ್ಬರು ಬರುತ್ತಿದ್ದರು. ತಮಿಳುನಾಡಿನಿಂದ ಬಂದಿದ್ದ ಸಂತ್ರಸ್ತ ಮಹಿಳೆ ಕೆ.ಆರ್.ಮಾರುಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು. ಬಸ್ಸಿನ ಬಗ್ಗೆ ಸರಿಯಾದ ಮಾಹಿತಿ ತಿಳಿಯದ ಹಿನ್ನೆಲೆಯಲ್ಲಿ, ಆರೋಪಿಗಳ ಬಳಿ ವಿಚಾರಿಸಿದ್ದಾರೆ. ಬಸ್ ತೋರಿಸುತ್ತೇವೆಂದು ಗೋಡೌನ್ ಸ್ಟ್ರೀಟ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ(ಸೋಮವಾರ) ರಾತ್ರಿ 11.30ರ ಸುಮಾರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದು, ನಂತರ ಆಕೆಯ ಬಳಿಯಿದ್ದ ಮೊಬೈಲ್, ಹಣ, ಚಿನ್ನ ಕದ್ದು ಪರಾರಿಯಾಗಿದ್ದಾರೆ. ಸಂತ್ರಸ್ತ ಮಹಿಳೆಯು ಬೆಂಗಳೂರು ಕೇಂದ್ರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾಳೆ. ಇನ್ನೂ ಈ ಪ್ರಕರಣದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ರಾಜ್ಯ ಸರ್ಕಾರದ ಕುರಿತು ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ರಾಜಧಾನಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ, ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ.
ಒಂದು ಕಡೆ ಅಭಿವೃದ್ಧಿಯೂ ಇಲ್ಲ, ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ, ಕನಿಷ್ಠ ಕಾನೂನು ಸುರಕ್ಷಣೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿ ದುರುಳರನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಒಳಪಡಿಸಲಿ.
ಸರಣಿ ರೂಪದಲ್ಲಿ ನಡೆಯುತ್ತಿರುವ ಕೊಲೆ, ದರೋಡೆ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದ್ದು, ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೆ ಈ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿ ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಭದ್ರತೆಗಾಗಿ ಹೋರಾಡಲಿದೆ.












Click it and Unblock the Notifications