ಗೀತಾ ಶಿವರಾಜ್ ಕುಮಾರ್ ಶುಕ್ರವಾರ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಏಪ್ರಿಲ್ 27; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ನಟ ಸುದೀಪ್ ಸೇರಿ ಹಲವು ನಟ-ನಟಿಯರು ಮೇ 10ರಂದು ನಡೆಯುವ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಈ ಡಾ. ರಾಜ್ಕುಮಾರ್ ಕುಟುಂಬದಿಂದ ರಾಜಕೀಯ ಸುದ್ದಿಯೊಂದು ಬಂದಿದೆ.
ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಸಹೋದರ ಮಧು ಬಂಗಾರಪ್ಪ ಜೊತೆ ರಾಜಕೀಯವಾಗಿ ಗುರುತಿಸಿಕೊಂಡಿದ್ದಾರೆ. 2021ರ ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಆಗಲೇ ಗೀತಾ ಶಿವರಾಜ್ ಕುಮಾರ್ ಸಹ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.
ಗೀತಾ ಶಿವರಾಜ್ ಕುಮಾರ್ ಜೆಡಿಎಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿಯ ಬಿ. ಎಸ್. ಯಡಿಯೂರಪ್ಪ ಎದುರಾಳಿಯಾಗಿ ಕಣಕ್ಕಿಳಿದಿದ್ದರು. 240,636 ಮತಗಳನ್ನು ಪಡೆದು 606,216 ಮತಗಳನ್ನು ಪಡೆದ ಯಡಿಯೂರಪ್ಪ ವಿರುದ್ಧ ಭಾರೀ ಅಂತರದಿಂದ ಸೋಲು ಕಂಡಿದ್ದರು.

ಎಸ್. ಬಂಗಾರಪ್ಪ ಕುಟುಂಬ; ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಕುಟುಂಬದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಈ ಬಾರಿಯ ಚುನಾವಣೆಗೆ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. 2013ರ ಚುನಾವಣೆಯಲ್ಲಿ ಮಧು ಬಂಗಾರಪ್ಪ ಸೊರಬದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಕಂಡಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿಯ ಕುಮಾರ್ ಬಂಗಾರಪ್ಪ ವಿರುದ್ಧ ಸೋಲು ಕಂಡಿದ್ದರು.
ಮಧು ಬಂಗಾರಪ್ಪ ಸಹೋದರ ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ. ಹಾಲಿ ಸೊರಬ ಕ್ಷೇತ್ರದ ಶಾಸಕರು. ಕಾಂಗ್ರೆಸ್ನಲ್ಲಿದ್ದ ಅವರು 2018ರ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸೇರಿದ್ದರು. ಕಳೆದ ಚುನಾವಣೆಯಲ್ಲಿ ಗೆದ್ದಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿಯೂ ಸೊರಬದ ಬಿಜೆಪಿ ಅಭ್ಯರ್ಥಿ.
ಗೀತಾ ಶಿವರಾಜ್ ಕುಮಾರ್ ಮೊದಲಿನಿಂದಲೂ ರಾಜಕೀಯವಾಗಿ ಮಧು ಬಂಗಾರಪ್ಪ ಜೊತೆ ಗುರುತಿಸಿಕೊಂಡಿದ್ದಾರೆ. ಅವರು 2014ರ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಮಧು ಬಂಗಾರಪ್ಪ ಅವರ ಜೊತೆ ಪ್ರಚಾರ ಮಾಡಿದ್ದರು. 2018ರ ಚುನಾವಣೆಯಲ್ಲಿ ಮಧು ಬಂಗಾರಪ್ಪ ಜೆಡಿಎಸ್ ಅಭ್ಯರ್ಥಿಯಾಗಿ ಸೊರಬದಲ್ಲಿ ಕಣದಲ್ಲಿದ್ದಾಗ ಗೀತಾ ಶಿವರಾಜ್ ಕುಮಾರ್ ಸಹ ಚುನಾವಣಾ ಪ್ರಚಾರ ನಡೆಸಿದ್ದರು.
2021ರಲ್ಲಿ ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಮಧು ಬಂಗಾರಪ್ಪ ನಡೆಸಿದ್ದರು. ಆಗ ಗೀತಾ ಶಿವರಾಜ್ ಕುಮಾರ್ ಪಕ್ಷ ಸೇರುವ ಬಗ್ಗೆ ಪ್ರಶ್ನಿಸಲಾಗಿತ್ತು. ಆಗ ಅವರು, "ಅವರು ಸೇರಿದ್ದಾರೆ ಅಂತ ಅಂದುಕೊಳ್ಳಿ" ಎಂದು ಹೇಳಿದ್ದರು.
"ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ಗೆ ಬಂದಿದ್ದಾರೆ ಅಂದುಕೊಳ್ಳಿ" ಎಂದು ಹೇಳಿದ್ದ ಮಧು ಬಂಗಾರಪ್ಪ ಈ ಮೂಲಕ ಗೀತಾ ಶಿವರಾಜ್ ಕುಮಾರ್ ಪಕ್ಷ ಸೇರ್ಪಡೆಯಾಗುವ ಕುರಿತು ಸುಳಿವು ನೀಡಿದ್ದರು. ಈಗ ಅಧಿಕೃತವಾಗಿ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ.
ಸೊರಬ ಕ್ಷೇತ್ರದಲ್ಲಿ ಈ ಬಾರಿಯು ಸಹೋದರರು ಎದುರಾಳಿಗಳು. ಬಿಜೆಪಿಯಿಂದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ನಿಂದ ಮಧು ಬಂಗಾರಪ್ಪ ಅಭ್ಯರ್ಥಿಗಳು. ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಿದ ಬಳಿಕ ಮಧು ಬಂಗಾರಪ್ಪ ಪರವಾಗಿ ಪ್ರಚಾರ ನಡೆಸುವ ನಿರೀಕ್ಷೆ ಇದೆ.












Click it and Unblock the Notifications