ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಮಹತ್ವದ ಅಪ್ಡೇಟ್ ಕೊಟ್ಟ ಡಿಕೆ ಶಿವಕುಮಾರ್
ಮಂಗಳೂರು, ಏಪ್ರಿಲ್ 21: ಯಾವುದೇ ಕ್ಷಣದಲ್ಲಿಯೂ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಬಹುದು. ಅದಕ್ಕೆ ನೀವು ಸಜ್ಜಾಗಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಕಟ್ಟಡ ಖರೀದಿಗೆ ಮುಂದಾಗಿದ್ದೇವೆ. 25% ಹಣ ನಾನು ಸಹಾಯ ಮಾಡುತ್ತೇನೆ. ಉಳಿದ ಹಣವನ್ನು ನೀವು ಕೊಡಬೇಕು. ಇದು ನಿಮ್ಮ ಆಸ್ತಿ, ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಹೇಳಿದರು.
ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ 100 ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಮುಂದಾಗಿದ್ದು, ಕಾರ್ಯಾಧ್ಯಕ್ಷರುಗಳು ರಾಜ್ಯದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಕರಾವಳಿ ಭಾಗ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ನೀವೆಲ್ಲರೂ ಸೇರಿ ಅನೇಕ ನಾಯಕರನ್ನು ಕೊಟ್ಟಿದ್ದೀರಿ. ಸೋಲು ನಮಗೆ ಪಾಠ ಕಲಿಸಿಕೊಟ್ಟಿದೆ. ಆತ್ಮವಿಶ್ವಾಸ ಕಳೆದುಕೊಳ್ಳುವುದು ಬೇಡ ಎಂದರು.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಕಟ್ಟಡ ಖರೀದಿಗೆ ಮುಂದಾಗಿದ್ದೇವೆ. 25% ಹಣ ನಾನು ಸಹಾಯ ಮಾಡುತ್ತೇನೆ. ಉಳಿದ ಹಣವನ್ನು ನೀವು ಕೊಡಬೇಕು. ಇದು ನಿಮ್ಮ ಆಸ್ತಿ, ನಿಮ್ಮ ಕೈಲಾದ ಸಹಾಯ ಮಾಡಿ. ರಾಜ್ಯದೆಲ್ಲೆಡೆ 100 ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಮುಂದಾಗಿದ್ದು, ಕಾರ್ಯಾಧ್ಯಕ್ಷರುಗಳು ರಾಜ್ಯದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಕರಾವಳಿ ಭಾಗ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ನೀವೆಲ್ಲರೂ ಸೇರಿ ಅನೇಕ ನಾಯಕರನ್ನು ಕೊಟ್ಟಿದ್ದೀರಿ. ಸೋಲು ನಮಗೆ ಪಾಠ ಕಲಿಸಿಕೊಟ್ಟಿದೆ. ಆತ್ಮವಿಶ್ವಾಸ ಕಳೆದುಕೊಳ್ಳುವುದು ಬೇಡ ಎಂದು ಹೇಳಿದರು.
ಮನಮೋಹನ್ ಸಿಂಗ್ ಅವರ 10 ವರ್ಷಗಳ ಯುಪಿಎ ಸರ್ಕಾರದಲ್ಲಿ ಆಹಾರ ಭದ್ರತೆ, ಶೈಕ್ಷಣಿಕ ಹಕ್ಕು, ಉದ್ಯೋಗ ಖಾತರಿ, ಮಾಹಿತಿ ಹಕ್ಕು, ಅರಣ್ಯ ಹಕ್ಕು ಕಾಯ್ದೆ ಮೂಲಕ ಕ್ರಾಂತಿಕಾರಿ ಯೋಜನೆ ತರಲಾಯಿತು. ಆಮೂಲಕ ಕಾಂಗ್ರೆಸ್ ಜನರ ಹೊಟ್ಟೆ ತುಂಬಿಸುವ ಕೆಲಸ ಮಾಡಿದೆ. ಬಿಜೆಪಿ ಇಂತಹ ಯವುದಾದ್ರೂ ಒಂದು ಯೋಜನೆ ನೀಡಿದ್ದಾರಾ? ಈ ಬಗ್ಗೆ ಚರ್ಚೆ ಮಾಡಲು ಸವಾಲು ಹಾಕಿದ್ದೆ ಬಿಜೆಪಿಯವರು ಮುಂದೆ ಬಂದಿಲ್ಲ ಎಂದು ಸವಾಲೆಸೆದರು.
ಬೂತ್ ಮಟ್ಟದಲ್ಲಿ ಬಿಎಲ್ಎಗಳಾಗಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿಯವರು ಮತದಾರರ ಪಟ್ಟಿಯಲ್ಲಿ ವ್ಯತ್ಯಾಸ ಮಾಡುತ್ತಾರೆ. ಆ ರೀತಿ ಆಗದಂತೆ ಎಚ್ಚರ ವಹಿಸಬೇಕು. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆ ಅಭಿವೃದ್ಧಿಗೂ ಆದ್ಯತೆ ನೀಡುತ್ತಿದ್ದೇವೆ. ಇದಕ್ಕಾಗಿ ನಮ್ಮ ಸರ್ಕಾರ 4 ಲಕ್ಷ ಕೋಟಿಗೂ ಹೆಚ್ಚಿನ ಬಜೆಟ್ ಮಂಡನೆ ಮಾಡಿದೆ. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾವಿರಾರು ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ನಮ್ಮ ಗ್ಯಾರಂಟಿ ಯೋಜನೆಗಳೇ ನಿಮ್ಮ ಪ್ರಮುಖ ಅಸ್ತ್ರ. ಇದರ ಬಗ್ಗೆ ಜನರಿಗೆ ತಿಳಿಸಿ ಅವರ ಮನಗೆಲ್ಲಬೇಕು. ಎಲ್ಲರಿಗೂ ಒಂದೊಂದು ಕಾಲ ಬರುತ್ತದೆ. ಇಲ್ಲಿ ಯಾರೂ ಶಾಶ್ವತವಲ್ಲ. ನೀವು ಆತ್ಮವಿಶ್ವಾಸದಿಂದ ಪಕ್ಷ ಸಂಘಟಿಸಿ. ಕಾರ್ಯಕರ್ತರ ರಕ್ಷಣೆ ಈ ಡಿ.ಕೆ. ಶಿವಕುಮಾರ್ ಮೊದಲ ಕರ್ತವ್ಯ. ನೀವಿದ್ದರೆ ನಾವು. ನೀವಿಲ್ಲದಿದ್ದರೆ ನಾವಿಲ್ಲ. ನೀವೇ ನಮ್ಮ ಪಕ್ಷದ ಆಸ್ತಿ ಎಂದು ತಿಳಿಸಿದರು.
ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳನ್ನು ಗೆಲ್ಲಲಿದೆ. ಆಮೂಲಕ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ ಭೀಮ್ ಹಾಗೂ ಜೈ ಸಂವಿಧಾನ ಸಮಾವೇಶ ಮಾಡಿ, ಗಾಂಧೀಜಿ, ಅಂಬೇಡ್ಕರ್ ತತ್ವ ಸಿದ್ಧಾಂತ ಹಾಗೂ ಸಂವಿಧಾನ ರಕ್ಷಣೆಗೆ ಕರೆ ನೀಡಿದ್ದಾರೆ. ಇವುಗಳನ್ನು ನಾವು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದರು.
ಕೇಂದ್ರ ಬಿಜೆಪಿ ನಾಯಕರು ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದರು. ಎಲ್ಲಾ ಧರ್ಮಗಳನ್ನು ಒಟ್ಟಾಗಿ ಸೇರಿಸಿಕೊಂಡು ಕೆಲಸ ಮಾಡುವುದೇ ಕಾಂಗ್ರೆಸ್ ಸಿದ್ಧಾಂತ. ಇಂದು ಕ್ರೈಸ್ತ ಬಾಂಧವರ ಈಸ್ಟರ್ ಹಬ್ಬ. ಈ ಸಂದರ್ಭದಲ್ಲಿ ಅವರಿಗೆ ಶುಭ ಕೋರುತ್ತೇನೆ. ಸಮರ್ಪಣೆ, ಸಂಕಲ್ಪ, ಸಂಘರ್ಷ ಈ ಮೂರು ಅಂಶಗಳನ್ನು ಕಾಂಗ್ರೆಸ್ ಪಕ್ಷ ನಿಮ್ಮ ಮುಂದೆ ಇಟ್ಟಿದೆ. ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದು, ಎಲ್ಲರಿಗೂ ಅಭಿನಂದಿಸುತ್ತೇನೆ. ಇಲ್ಲಿ ಪ್ರತಿ ಬೂತ್ ನಲ್ಲಿ ಇಬ್ಬರು ಡಿಜಿಟಲ್ ಯೂಥ್ ನೇಮಕ ಮಾಡಲಾಗಿದೆ. ನಿಮ್ಮೆಲ್ಲರಿಗೂ ಅಭಿನಂದನೆಗಳು ಎಂದರು.
ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುದಾಗ ಬಿಜೆಪಿ ನಾಯಕರು ಇದು ಸಾಧ್ಯವೇ ಎಂದು ಪ್ರಶ್ನಿಸಿದರು. ನಾನು ಹಾಗೂ ಸಿದ್ದರಾಮಯ್ಯ ಅವರು ಪ್ರಿಯಾಂಕ ಗಾಂಧಿ ಅವರ ಸಮ್ಮುಖದಲ್ಲಿ ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ನಮ್ಮ ಸರ್ಕಾರ ಬಂದ ನಂತರ 1.21 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. 200 ಯೂನಿಟ್ ವರೆಗೂ ಉಚಿತ ವಿದ್ಯುತ್, 10 ಕೆ.ಜಿ ಅಕ್ಕಿ, ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ಸಿಗುತ್ತಿದೆ ಎಂದು ಹೇಳಿದರು.
ಬಿಜೆಪಿಯವರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಬಿಜೆಪಿಯವರು ನಮಗೆ ನೆರವಾಗಲಿಲ್ಲ, ಕಾಂಗ್ರೆಸ್ ಸರ್ಕಾರ ನೆರವಾಗಿದೆ ಎಂದು ಬಿಜೆಪಿಗೆ ಮತ ಹಾಕಿದ ಮಹಿಳೆಯರು ಭಾವಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲಿ ನಾನು ಸಮೀಕ್ಷೆ ಮಾಡಿಸಿದ್ದು, ಮುಂದಿನ ಚುನಾವಣೆಯಲ್ಲಿ ಈ ಜಿಲ್ಲೆಗಳಿಂದ ಕನಿಷ್ಠ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಬೆಳ್ತಂಗಡಿ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಸಮೀಕ್ಷೆ ವರದಿ ಹೇಳುತ್ತಿದೆ. ಹೀಗಾಗಿ ನೀವು ಈಗಿನಿಂದಲೇ ಜನರ ಹೃದಯ ಗೆಲ್ಲಬೇಕು. ಬಿಜೆಪಿಗೆ ಮತ ಹಾಕಬೇಕು ಎಂದು ಯಾರೂ ಹಠ ಮಾಡಿ ಕೂತಿಲ್ಲ. ಎಲ್ಲರೂ ಪರಿವರ್ತನೆ ಆಗುತ್ತಾರೆ.
ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಚನ್ನಪಟ್ಟಣ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿದರು. ಬಿಜೆಪಿ ಹಾಗೂ ದಳದ ಭದ್ರಕೋಟೆ ಒಡೆದು 136 ಇದ್ದ ನಮ್ಮ ಸಂಖ್ಯಾಬಲ 138 ಆಗಿದೆ. ಇಬ್ಬರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ನಮ್ಮ ಬಲ 140 ಆಗಿದೆ. ಗ್ಯಾರಂಟಿ ಯೋಜನೆ ತೆಗೆಯಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಅಸಾಧ್ಯ. ಸಿದ್ದರಾಮಯ್ಯ ಅವರ ನೇತೃತ್ವದ ನಿಮ್ಮ ಸರ್ಕಾರ ಈ ಯೋಜನೆಗಳಿಗೆ 52 ಸಾವಿರ ಕೋಟಿ ಬಜೆಟ್ ನಲ್ಲಿ ಘೋಷಿಸಿದೆ. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿಗಳು ಸೇರಿ ಕೈ ಗಟ್ಟಿಯಾಯಿತು. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನಾವು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ ಎಂದು ಹೇಳಿದರು.












Click it and Unblock the Notifications