DCM DK Shivakumar: ಸಿಎಂ ಕಚೇರಿಯಲ್ಲಿ ಲಕ್ಷ ಲಕ್ಷ ಆರೋಪ; ಯಾವ ದಂಧೆಯೂ ಇಲ್ಲ: ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು, ಜುಲೈ 04: ಕಾಂಗ್ರೆಸ್ ಸರ್ಕಾರದ ವಿರುದ್ದ ಹೆಚ್ ಡಿ ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪ ಮಾಡಿದ್ದು, ಮುಖ್ಯಮಂತ್ರಿ ಕಚೇರಿಯಲ್ಲಿ 30 ಲಕ್ಷ ನೀಡಬೇಕು ಎಂಬ ಕುಮಾರಸ್ವಾಮಿ ಮಾತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದಿದೆ ಎಂಬ ಬೇಸರದಲ್ಲಿ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ಮಾತುಗಳು ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರ ಆರೋಪ ಸತ್ಯಕ್ಕೆ ದೂರವಾದುದು. ಸರ್ಕಾರದ ಯಾವುದೇ ಕಚೇರಿಯಲ್ಲಿ ಹಣ ಪಡೆದು ಕೆಲಸ ನೀಡಲಾಗುತ್ತಿಲ್ಲ. ಅವರ ಬಳಿ ದಾಖಲೆ ಇದ್ದರೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಿ ತನಿಖೆ ಮಾಡಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದಕ್ಕೆ ಅವಕಾಶವಿದೆ. ಸಿಎಂ ಕಛೇರಿಯಲ್ಲಿ ಯಾವ ಧಂದೆಯೂ ನಡೆಯುತ್ತಿಲ್ಲ. ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ಕಂಪ್ಲೆಂಟ್ ಕೊಡಲಿ, ದಾಖಲೆ ಕೊಟ್ಟು ಕುಮಾರಸ್ವಾಮಿ ಆರೋಪ ಮಾಡಲಿ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಯಡಿಯೂರಪ್ಪ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ಅವರಿಗೆ ಒಳ್ಳೆಯದಾಗ್ಲಿ. ಯಡಿಯೂರಪ್ಪ ಪ್ರತಿಭಟನೆ ಮೂಲಕ ಕಾಂಗ್ರೆಸ್ ಸರ್ಕಾರದ ಯೊಜನೆಗಳನ್ನು ಪ್ರಚಾರ ಮಾಡ್ತಿದ್ದಾರೆ, ಜನರಿಗೆ ಮಾತು ಕೊಟ್ಟಿದೇವೆ ಅದನ್ನು ಜಾರಿ ಮಾಡಿದೇವೆ. ನಾವು ಏನು ಅನಾಹುತ ಮಾಡಿದೀವಿ ಎಂತ ಪ್ರತಿಭಟನೆ ಮಾಡುತ್ತಿದ್ದಾರೆ. ಜನರು ಯಡಿಯೂರಪ್ಪ ಅವರಿಗೆ ರೆಸ್ಟ್ ಕೊಟ್ಟಿದ್ದಾರೆ...ಸದ್ಯ ಅವರು ರೆಸ್ಟ್ ಮಾಡ್ಲಿ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸಿಎಂ ಕಚೇರಿಯಲ್ಲೇ ಲಂಚ; ಕುಮಾರಸ್ವಾಮಿ ಹೇಳಿದ್ದೇನು?
ಕಾಸಿಲ್ಲದೆ ಪೋಸ್ಟ್ ಇಲ್ಲ ಎನ್ನುವುದನ್ನು ಈ ಸರಕಾರ ನೀತಿಯನ್ನಾಗಿ ಮಾಡಿಕೊಂಡಿದೆ. ಸದಾ ಮುಖ್ಯಮಂತ್ರಿ ಹಿಂದೆಮುಂದೆ ಹಾಗೂ ಸಿಎಂ ಕಚೇರಿ ಸುತ್ತಾಮುತ್ತಾ ಸದಾ ಓಡಾಡಿಕೊಂಡಿರುವ ಶಾಸಕರೊಬ್ಬರು ಮುಖ್ಯಮಂತ್ರಿಗೆ ಪತ್ರ ಕೊಟ್ಟರೆ, ಬರೀ ಪತ್ರ ಬೇಡ. 30 ಲಕ್ಷ ರೂ. ಕೊಡಬೇಕು ಎಂದು ಹೇಳ್ತಾರಂತೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸಿಎಂ ಕಚೇರಿಯಲ್ಲಿ ಇರುವ ಮಹಾಶಯರು. ಇದು ಈ ಸರಕಾರದ ಹಣೆಬರಹ. ಸಾಕ್ಷಿ ಇಡೀ ಅಂತಾರೆ. ದುಡ್ಡು ಕೊಟ್ಟೋನು ಸಾಕ್ಷಿ ಇಡ್ತಾನ? ಅವನಿಗೆ ಕೆಲಸ ಆದರೆ ಸಾಕು. ಇವರು ಪರಿಸ್ಥಿತಿಯ ದುರ್ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಾನು ಏನೇ ಮಾತಾಡಿದರೂ ವಿಷಯ ಇದ್ದರೆ ಮಾತ್ರ ಮಾತನಾಡುತ್ತೇನೆ, ಇಲ್ಲವಾದರೆ ಮೌನವಾಗಿ ಇರುತ್ತೇನೆ. ರಾಜ್ಯಪಾಲರ ಭಾಷಣದಲ್ಲಿ ವೀರಾವೇಶ ತೋರುವ ಇವರು, ಅಧಿಕಾರಕ್ಕೆ ಒಂದು ತಿಂಗಳ ಮೇಲಾಯಿತು. ಇದುವರೆಗೆ ಲಂಚಾವತಾರದ ಈ ಸರಕಾರ ಏನು ಕ್ರಮ ಕೈಗೊಂಡಿದೆ. ಜನರಿಗೆ ಹೇಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications