ಬ್ರೇಕಿಂಗ್: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ
Recommended Video
ಬೆಂಗಳೂರು, ಜುಲೈ 01: ವಿಜಯನಗರ ಶಾಸಕ ಆನಂದ್ ಸಿಂಗ್ ಬೆಳಿಗ್ಗೆ ರಾಜೀನಾಮೆ ನೀಡಿದ ಬೆನ್ನಲ್ಲೆ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗೋಕಾಕ್ ಶಾಸಕರಾಗಿರುವ ರಮೇಶ್ ಜಾರಕಿಹೊಳಿ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕೈಬರಹದಲ್ಲಿ ಬರೆದ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಆದರೆ ರಾಜೀನಾಮೆ ಇನ್ನೂ ಸ್ವೀಕೃತಿಗೊಂಡಿಲ್ಲ.
ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ನಿರೀಕ್ಷಿತವೇ ಆಗಿತ್ತು. ಬಹು ದಿನಗಳಿಂದ ಅವರು ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದರು.
ಸಚಿವ ಸ್ಥಾನ ಕಸಿದುಕೊಂಡಿದ್ದಕ್ಕೆ ಮತ್ತು ಬೆಳಗಾವಿ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಹಸ್ತಕ್ಷೇಪದಿಂದ ತೀವ್ರ ಅಸಮಾಧಾನಗೊಂಡಿದ್ದ ಅವರು ಪಕ್ಷದ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

ರಾಜೀನಾಮೆ ನಿರೀಕ್ಷಿತವೇ ಆಗಿತ್ತು
ಈ ಹಿಂದೆಯೇ ರಾಜೀನಾಮೆ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ಅಂತಿಮವಾಗಿ ಅವರು ತಮ್ಮ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಒಂದೇ ದಿನ ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ
ಒಂದೇ ದಿನ ಇಬ್ಬರು ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪರ್ವ ಮುಂದುವರೆಯುವುದೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ರಾಜೀನಾಮೆ ಅಂಗೀಕಾರವಾಗುತ್ತದೆಯೇ?
ರಮೇಶ್ ಜಾರಕಿಹೊಳಿ ಅವರು ತಮ್ಮ ರಾಜೀನಾಮೆಯನ್ನು ಕೈಬರಹದಲ್ಲಿ ಬರೆದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕಳುಹಿಸಿದ್ದಾರೆ. ಹಾಗಾಗಿ ಈ ರಾಜೀನಾಮೆ ಅಂಗೀಕಾರ ಆಗುತ್ತದೆಯೇ ಇಲ್ಲವೇ ಎನ್ನುವ ಬಗ್ಗೆ ಅನುಮಾನಗಳಿವೆ.

ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾರಾ?
ರಮೇಶ್ ಜಾರಕಿಹೊಳಿ ಅವರು ಉದ್ದೇಶಪೂರ್ವಕವಾಗಿ ಹೀಗೆ ಕೈಬರಹದಲ್ಲಿ ಬರೆದು ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಅದು ಸ್ವೀಕೃತವಾಗುವುದಿಲ್ಲ ಎಂದು ಗೊತ್ತಿರುವ ಕಾರಣಕ್ಕೆ, ಕಾಂಗ್ರೆಸ್ ಮುಖಂಡರ ಮೇಲೆ ಒತ್ತಡ ಹೇರುವ ಸಲುವಾಗಿಯೇ ಈ ತಂತ್ರ ಅನುಸರಿಸಿದ್ದಾರೆ ಎನ್ನಲಾಗುತ್ತಿದೆ.











Click it and Unblock the Notifications