ಗೋಕರ್ಣ ದೇಗುಲ ಹಸ್ತಾಂತರ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು, ಆಗಸ್ಟ್ 10: ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವ ಬಗ್ಗೆ 2008ರಲ್ಲಿ ಕರ್ನಾಟಕ ಸರ್ಕಾರ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠವು ಇಂದು(ಆಗಸ್ಟ್ 10) ರದ್ದುಗೊಳಿಸಿದೆ.
2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರವು, ಗೋಕರ್ಣ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಾಲಚಂದ್ರ ದೀಕ್ಷಿತ್ ಮತ್ತು ನರಹರಿ ಕೃಷ್ಣ ಹೆಗಡೆ ಎಂಬುವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು.

ಈ ಪಿಐಎಲ್ನ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಅರ್ಜಿಯನ್ನು ಪುರಸ್ಕರಿಸಿದ್ದು, ಅಂದಿನ ರಾಜ್ಯ ಸರಕಾರದ ಕ್ರಮವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಈಗ ಗೋಕರ್ಣ ಕ್ಷೇತ್ರವು ಧಾರ್ಮಿಕ ದತ್ತಿ ದೇಗುಲವಾಗಿ ಮುಂದುವರಿಯಲಿದೆ.
ಗೋಕರ್ಣ ದೇವಸ್ಥಾನಕ್ಕೆ ತತ್ಕ್ಷಣವೇ ಡಿಸಿ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ರಚನೆಯಾಗಬೇಕು ಎಂದು ಆದೇಶಿಸಿದ್ದು, ಸಮಿತಿಯ ಸಲಹೆಗಾರರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರನ್ನು ನೇಮಿಸಿದೆ.
ಶ್ರೀಕ್ಷೇತ್ರ ಮಠದ ಆಡಳಿತಕ್ಕೆ ಬಂದಮೇಲೆ ದೇವಸ್ಥಾನದ ಸಂಪೂರ್ಣ ಆರ್ಥಿಕ ವ್ಯವಸ್ಥೆಯನ್ನು ಪಾರದರ್ಶಕ ಮಾಡಲಾಗಿದೆ. ಇಲ್ಲಿ ಬರುವ ಪ್ರತಿ ಪೈಸೆಯೂ ಕೂಡ ಅತ್ಯಂತ ಪಾರದರ್ಶಕವಾಗಿ ನಿರ್ವಹಿಸಲ್ಪಡುತ್ತದೆ ಎಂದು ಮಠ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ, ಈ ಬಗ್ಗೆ ಪರ ವಿರೋಧ ಚರ್ಚೆಗಳು ಮುಂದುವರೆದಿದೆ.












Click it and Unblock the Notifications