BY Vijayendra: 'ವಿಜಯೇಂದ್ರ ಬದಲಾವಣೆಯ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ....'
ಬೆಂಗಳೂರು, ಡಿಸೆಂಬರ್ 02: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ಪ್ರತಿಕ್ರಿಯಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಮಾಡುತ್ತಿರುವ ಪ್ರಯತ್ನದ ಬಗ್ಗೆ ಪಕ್ಷದ ವರಿಷ್ಠರಿಗೆ ಸಮಾಧಾನ ಇದೆ. ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನವನ್ನು ನಾನು ಮಾಡುತ್ತಿದ್ದೇನೆ. ಯಡಿಯೂರಪ್ಪ ಅವರ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದು, ಬರುವಂಥ ದಿನಗಳಲ್ಲಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.

ಯತ್ನಾಳರನ್ನು ಉಚ್ಚಾಟನೆ ಮಾಡುವಂತೆ ದೆಹಲಿಗೆ ತೆರಳಿ ದೂರು ಕೊಡುತ್ತಿಲ್ಲ; ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ದಿನನಿತ್ಯ ಹಾದಿಯಲ್ಲಿ ಬೀದಿಯಲ್ಲಿ ಮಾತನಾಡುತ್ತಿದ್ದು, ಪತ್ರಿಕೆಗಳಲ್ಲೂ ಬರುತ್ತಿದೆ. ಅವರದೇ ಆದ ರೀತಿಯಲ್ಲಿ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಇದೇ ರೀತಿ ಮುಂದುವರೆದರೆ ಹೇಗೆ ಎಂದು ಕೇಳಿದಾಗ, 'ಬಹಳ ದಿನ ಮುಂದುವರೆಯುತ್ತದೆ ಎಂದು ನನಗೇನೂ ಅನಿಸುತ್ತಿಲ್ಲ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.
ದೆಹಲಿಯಲ್ಲಿ ನಮ್ಮ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮೊನ್ನೆ ನಡೆದ ಉಪ ಚುನಾವಣೆಗಳ ಫಲಿತಾಂಶ, ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಗಮನಕ್ಕೆ ತಂದಿದ್ದೇನೆ. ಕಾರ್ಯಕರ್ತರು ಸಾಕಷ್ಟು ಅಪೇಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ದಿನಬೆಳಗಾದರೆ ಯಡಿಯೂರಪ್ಪರನ್ನು ಟೀಕಿಸುವುದು, ರಾಜ್ಯದ ಅಧ್ಯಕ್ಷರ ಬಗ್ಗೆ ಟೀಕಿಸುವುದು ನಡೆದಿದ್ದು, ಕಾರ್ಯಕರ್ತರಂತೂ ಸಾಕಷ್ಟು ಬೇಸತ್ತಿದ್ದಾರೆ ಎಂದು ತಿಳಿಸಿದರು.
ಈ ನಡವಳಿಕೆಯಿಂದ ಅವರು ಎತ್ತರಕ್ಕೆ ಬೆಳೆಯುವ ಭ್ರಮೆಯಲ್ಲಿದ್ದರೆ ಖಂಡಿತ ಅದು ಸಾಧ್ಯವಿಲ್ಲ. ಕಾರ್ಯಕರ್ತರು ಕೂಡ ಹಿಡಿಶಾಪ ಹಾಕುತ್ತಿದ್ದಾರೆ. ಇದೆಲ್ಲಕ್ಕೂ ಇತಿಶ್ರೀ ಹಾಕಬೇಕೆಂಬ ಅಪೇಕ್ಷೆ ಕಾರ್ಯಕರ್ತರಲ್ಲೂ ಇದೆ. ಯಾರ ಗಮನಕ್ಕೆ ತರಬೇಕೋ ಅದನ್ನು ತಂದಿದ್ದೇನೆ. ನಾನು (ವಿಜಯೇಂದ್ರ) ಏನೂ ಮಾತನಾಡುತ್ತಿಲ್ಲ ಎಂದರೆ, ಅದು ನಮ್ಮ ಅಸಮರ್ಥತೆ ಅಂದುಕೊಂಡರೆ ತಪ್ಪಾಗುತ್ತದೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.
ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಇದರ ನಡುವೆ ರಾಜ್ಯ ಸರಕಾರವು ಸ್ವಾಮೀಜಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ ಎಂದು ಆಕ್ಷೇಪಿಸಿದರು.
ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು. ಆದರೂ ಕೂಡ, ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು. ರಾಜ್ಯ ಸರಕಾರವು ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ. ಮಠಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ. ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ ಎಂದು ಟೀಕಿಸಿದರು. ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ. ಇನ್ನೂ ಯತ್ನಾಳ್ ವಿಚಾರ, ನಕಲಿ ನೋಟಿಸ್ ಎಂಬ ಹೇಳಿಕೆ ಕುರಿತು ಪದೇಪದೇ ಮಾತನಾಡುವುದಿಲ್ಲ. ನೋಟಿಸ್ ಅಸಲಿಯೇ ನಕಲಿಯೇ ಎಂಬುದು ಬರುವ ದಿನಗಳಲ್ಲಿ ಗೊತ್ತಾಗಲಿದೆ ಎಂದು ಹೇಳಿದರು.












Click it and Unblock the Notifications