ಕರ್ನಾಟಕದ ರೈತರಿಗೆ ಸಿಹಿಸುದ್ದಿ ನೀಡಿದ ಕಂದಾಯ ಸಚಿವರು!
ಯಾದಗಿರಿ: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿದ್ದು, ಬೆಳೆ ಸಮೀಕ್ಷೆಯ ಕುರಿತ ರೈತರ ಸಂಪೂರ್ಣ ಮಾಹಿತಿ ಮುಂದಿನ 10 ದಿನದಲ್ಲಿ ಮುಗಿಸಿ. ಇದರ ಜೊತೆ 'ಫ್ರೂಟ್ಸ್' (Fruits) ತಂತ್ರಾಂಶದಲ್ಲಿ ನಮೂದಿಸಿ, ರೈತರಿಗೆ ನ್ಯಾಯಯುತವಾದ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾದಗಿರಿಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ, ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, 'ರಾಜ್ಯ ಈ ವರ್ಷ ಇತಿಹಾಸ ಕಾಣದ ಬರಕ್ಕೆ ತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ. ಬೆಳೆ ಕೈಸೇರದೆ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ನಾವು ರೈತರ ಪರ ನಿಲ್ಲಬೇಕಿದೆ' ಎಂದು ಸೂಚನೆ ನೀಡಿದ್ದಾರೆ ಕಂದಾಯ ಸಚಿವರು.

ಅಧಿಕಾರಿಗಳು ಯಾದಗಿರಿಯಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೀರಿ. 2015-16ರ ಸಮೀಕ್ಷೆಯ ಪ್ರಕಾರ ಜಿಲ್ಲೆಯಲ್ಲಿ 2.30 ಲಕ್ಷ ರೈತರಿದ್ದಾರೆ. ಆದರೂ ಈಗ ಕೇವಲ 1.80 ಲಕ್ಷ ರೈತರ ಮಾಹಿತಿಯ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಬಾಕಿ ಇರುವ 80 ಸಾವಿರ ರೈತರ ಬೆಳೆ ಮಾಹಿತಿ ಏಕೆ ಮಾಡಿಲ್ಲ? ಎಂದು ಪ್ರಶ್ನಿಸಿದರು.
ರೈತರ ಮಾಹಿತಿ ನಮೂದಿಸಲು ಡೆಡ್ಲೈನ್
'ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈಗಾಗಲೇ ಶೇಕಡಾ 95ರಷ್ಟು ರೈತರ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಆದರೆ, ಯಾದಗಿರಿಯಲ್ಲಿ ಮಾತ್ರ ಶೇ.77 ರಷ್ಟು ಮಾತ್ರ ನಮೂದಿಸಲಾಗಿದೆ. 80 ಸಾವಿರ ರೈತರ ಮಾಹಿತಿ ಅಪ್ಡೇಟ್ ಆಗಿಲ್ಲ. ಅಧಿಕಾರಿಗಳು ಮಾಡುವ ತಪ್ಪಿಗೆ ಸರ್ಕಾರ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಬೇಕಾ? ಎಂದು ತರಾಟೆಗೆ ತೆಗೆದುಕೊಂಡ ಸಚಿವರು, ಮುಂದಿನ 10 ದಿನಗಳಲ್ಲಿ ಶೇ.100 ರಷ್ಟು ರೈತರ ವಿವರವನ್ನು ಇದೇ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಬೇಕು' ಎಂದು ಗಡುವು ನೀಡಿದ್ದಾರೆ ಕಂದಾಯ ಸಚಿವರು.
ಕುಡಿಯುವ ನೀರು ಪೂರೈಸಿ
ಯಾದಗಿರಿ ಭಾಗದಲ್ಲಿ ಎಲ್ಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದರೂ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಈ ವರ್ಷ ಬರಗಾಲ ಎದುರಾಗಿದೆ. ಮುಂದಿನ ಬೇಸಿಗೆಯಲ್ಲಿ ಯಾದಗಿರಿ ಭಾಗದ ಕೆಲವೆಡೆ ಕುಡಿವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ. ಅಧಿಕಾರಿಗಳು ನೀರಿನ ಸಮಸ್ಯೆ ಸರ್ವೆ ನಡೆಸಿ ನೀರಿನ ಸಮಸ್ಯೆ ಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ. ಯಾವ ಭಾಗದಲ್ಲೂ ಸಾರ್ವಜನಿಕರು ನೀರಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಿ, ಈ ಖರ್ಚಿಗೆ ಜಿಲ್ಲಾಧಿಕಾರಿಗಳ ಖಾತೆಯಿಂದ ಎಸ್ಡಿಆರ್ಎಫ್ ಹಣ ಬಳಸಿಕೊಳ್ಳಿ ಎಂದು ಸಚಿವರು ಸಲಹೆ ನೀಡಿದ್ದಾರೆ.

ಅಧಿಕಾರಿಗಳ ಈ ಕಾರ್ಯಕ್ಕೆ ಮೆಚ್ಚುಗೆ!
ಕಳೆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಕರಾರು ಪ್ರಕರಣಗಳ ಇತ್ಯರ್ಥ ವೇಗ ಪಡೆದುಕೊಂಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಗ್ಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಎಸಿ ಕೋರ್ಟ್ಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,710 ಪ್ರಕರಣಗಳು ಇದ್ದವು. ಆದರೆ, ಕಳೆದ ಮೂರೇ ತಿಂಗಳಲ್ಲಿ 20,519 ಪ್ರಕರಣವನ್ನ ಇತ್ಯರ್ಥಪಡಿಸಲಾಗಿದೆ. ತಹಶೀಲ್ದಾರ್ & ಜಿಲ್ಲಾಧಿಕಾರಿ ಕೋರ್ಟ್ನಲ್ಲಿ ಇರುವ ಪ್ರಕರಣಗಳೂ ಸಹ ತ್ವರಿತ ಗತಿಯಲ್ಲಿ ಇತ್ಯರ್ಥವಾಗುತ್ತಿದೆ ಎಂದರು.
ತಕರಾರು ಪ್ರಕರಣ ಕಾರಣಕ್ಕೆ ಸಾರ್ವಜನಿಕರು ಪ್ರತಿದಿನ ಸರ್ಕಾರಿ ಕಚೇರಿಗಳಿಗೆ ಅಲೆಯುವಂತ ಸ್ಥಿತಿ ಇತ್ತು. ಆದರೆ, ಇದೀಗ ಅಧಿಕಾರಿಗಳ ಸೂಚನೆಯಂತೆ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನದಲ್ಲಿ ಸಹ ತ್ವರಿತಗತಿಯಲ್ಲಿ ಈ ಪ್ರಕರಣಗಳನ್ನು ಮುಗಿಸಿ ಜನರಿಗೆ ತುಸು ನೆಮ್ಮದಿ ನೀಡಿ ಎಂದು ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಕಂದಾಯ ಸಚಿವರು.












Click it and Unblock the Notifications