ಔರಾದ್ಕರ್ ವರದಿ : ಒಂದು ವಾರದಲ್ಲಿ ಪೊಲೀಸರಿಗೆ ಸಿಹಿ ಸುದ್ದಿ
ಬೆಂಗಳೂರು, ಜೂನ್ 14 : ರಾಘವೇಂದ್ರ ಔರಾದ್ಕರ್ ವರದಿ ಜಾರಿಯ ಕುರಿತು ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ಪೊಲೀಸರಿಗೆ ಒಂದು ವಾರದಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ.
ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಔರಾದ್ಕರ್ ಸಮಿತಿ ವರದಿ ಕುರಿತು ಒಳಾಡಳಿತ ಇಲಾಖೆ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗೃಹ ಸಚಿವ ಎಂ.ಬಿ.ಪಾಟೀಲ್, ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಮುಂತಾದವರು ಉಪಸ್ಥಿತರಿದ್ದರು.
ಪೊಲೀಸ್ ಇಲಾಖೆ, ಕಾರಾಗೃಹಗಳ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ವೇತನ ಶ್ರೇಣಿ ಸಂಬಂಧಿಸಿದಂತೆ ವಿಸ್ತೃತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಹಾಗೂ ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, 'ಔರಾದ್ಕರ್ ವರದಿಯ ಪ್ರಕಾರ ವೇತನ ಹೆಚ್ಚಳದಿಂದ 600 ಕೋಟಿ ಹೊರೆಯಾಗಲಿದೆ. ಒಂದು ವಾರ ಅಥವ 10 ದಿನಗಳಲ್ಲಿ ಈ ಬಗ್ಗೆ ಹಣಕಾಸು ಮತ್ತು ಪೊಲೀಸ್ ಇಲಾಖೆ ಸಭೆ ನಡೆಸಲಿವೆ. ಮುಖ್ಯಮಂತ್ರಿಗಳು ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ' ಎಂದರು.
'ಎರಡೂ ಇಲಾಖೆಗಳ ಸಭೆ ಬಳಿಕ ಒಂದು ತೀರ್ಮಾನ ತೆಗೆದುಕೊಂಡು, ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ಒಂದು ವಾರದ ಬಳಿಕ ಪೊಲೀಸರಿಗೆ ಸಿಹಿ ಸುದ್ದಿ ಸಿಗಲಿದೆ' ಎಂದು ಎಂ.ಬಿ.ಪಾಟೀಲ್ ಹೇಳಿದರು.
ಪೊಲೀಸರು ವೇತನ ಹೆಚ್ಚಳ ಮಾಡುವಂತೆ ಪ್ರತಿಭಟನೆ ನಡೆಸಲು ಮುಂದಾದಾಗ ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ವರದಿ ನೀಡುವಂತೆ ಸೂಚಿಸಿತ್ತು. 2016ರ ಸೆಪ್ಟೆಂಬರ್ 27ರಂದು ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಆದರೆ, ಅದು ಜಾರಿಗೆ ಬಂದಿಲ್ಲ.












Click it and Unblock the Notifications