ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಸರಕು ವಾಹನ ಚಾಲಕರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ
ಬೆಂಗಳೂರು, ಮಾರ್ಚ್ 07: ಕೇರಳ ಹಾಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸರಕು ಸಾಗಣೆ ವಾಹನಗಳ ಚಾಲಕರು ಹಾಗೂ ಸಹಾಯಕರು ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆಯ ವರದಿಯನ್ನು ಹೊಂದಿರಲೇಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ, ಹೀಗಾಗಿ ವಿಶೇಷ ಸಮೀಕ್ಷಣಾ ಕ್ರಮಗಳನ್ನು ಈಗಾಗಲೇ ರಾಜ್ಯದಲ್ಲಿ ಕೈಗೊಳ್ಳಲಾಗುತ್ತಿದೆ.
ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಬರುವ ಸಗತ್ಯ ವಸ್ತುಗಳ ಸರಕು ಸಾಗಣೆಯ ವಾಹನಗಳ ಚಾಲಕರು ಹಾಗೂ ಸಹಾಯಕರು 15 ದಿನಗಳಿಗೊಮ್ಮೆ ಆರ್ಟಿ ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು.

ಪರೀಕ್ಷಾ ವರದಿಯನ್ನು ಹೊಂದುವುದು ಕಡ್ಡಾಯವಾಗಿದೆ. ಸದರಿ ಪರೀಕ್ಷೆ ವರದಿಗಳನ್ನು ಹೊಂದಿದವರನ್ನು ಮಾತ್ರವೇ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಇನ್ನುಳಿದಂತೆ, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೋವವಿಡ್ 19 ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವುದೂ ಕೂಡ ಕಡ್ಡಾಯವಾಗಿರಲಿದೆ.
ಹಾಗಾಗಿ ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ದಿನೇ ದಿನೇ ಸಾವಿರಾರು ಪ್ರಕರಣಗಳು ಹೆಚ್ಚುತ್ತಿವೆ. ಒಂದೆಡೆ ದೇಶಾದ್ಯಂತ ಕೊರೊನಾ ಲಸಿಕೆ ಅಭಿಯಾನವು ಕೂಡ ಪ್ರಗತಿಯಿಂದ ಸಾಗಿದೆ.

ಇಂದು ದೇಶದಲ್ಲಿ 18,711 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 14,392 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 100 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 1,12,10,799 ಪ್ರಕರಣಗಳಿವೆ. ಇದುವರೆಗೆ 1,08,68,520 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,84,523 ಸಕ್ರಿಯ ಪ್ರಕರಣಗಳಿವೆ. 1,57,756 ಮಂದಿ ಸಾವನ್ನಪ್ಪಿದ್ದಾರೆ.
ಇದುವರೆಗೆ 2,09,22,344 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 15 ಲಕ್ಷ ಮಂದಿಗೆ ಕೋವಿಡ್ ಲಸಿಕೆ ಹಾಕಲಾಗಿದ್ದು, 14,92,201 ಡೋಸ್ ಲಸಿಕೆಯನ್ನು ನೀಡಲಾಗಿದೆ.












Click it and Unblock the Notifications