ವರ್ಷಾಂತ್ಯಕ್ಕೆ ಎಲ್ಲ ಜಿಲ್ಲೆಗಳಲ್ಲೂ ಗೋಶಾಲೆ: ಹೈಕೋರ್ಟ್ಗೆ ಸರ್ಕಾರದ ಪ್ರಮಾಣಪತ್ರ
ಬೆಂಗಳೂರು. ಜೂನ್.17. ಈ ವರ್ಷಾಂತ್ಯದ ವೇಳೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಗೋಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಕಳೆದ ವಾರ ಗೋಶಾಲೆ ಆರಂಭ ವಿಳಂಬಕ್ಕೆ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವ ರಾಜ್ಯ ಸರ್ಕಾರ ಗೋಶಾಲೆಗಳ ಕಾರ್ಯಾರಂಭದ ವೇಳಾಪಟ್ಟಿಯನ್ನೂ ಸಲ್ಲಿಸಿದೆ.
ಗೋಶಾಲೆ ಆರಂಭ ಪಂಚವಾರ್ಷಿಕ ಯೋಜನೆಯೇ- ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ
ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರ ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಹಾಲಿ ಇರುವ ಗೋಶಾಲೆಗಳಿಗೆ ಮೇವು, ನೀರು ಮತ್ತು ಜಾಗ ಒದಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು,
ಹಂತ ಹಂತವಾಗಿ ಕ್ರಮ: ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಪಶುಸಂಗೋಪನಾ ಇಲಾಖೆ 2019ರಲ್ಲಿ ನಡೆಸಿದ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ 77,075 ಬಿಡಾಡಿ ದನಗಳು ಇದ್ದಾವೆ. ಅವುಗಳ ನಿರ್ವಹಣೆಗೆ ರಾಜ್ಯದ ಪ್ರತಿ ಜಿಲ್ಲೆಗೊಂದು ಗೋಶಾಲೆಯನ್ನು ತೆರೆಯಲು ಹಂತ-ಹಂತವಾಗಿ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.
2021-22ನೇ ಸಾಲಿನ ಬಜೆಟ್ನಲ್ಲಿ ಪ್ರತಿ ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಅದಕ್ಕಾಗಿ 15 ಕೋಟಿ ರೂ. ಅನುದಾನ ಸಹ ಮೀಸಲಿಡಲಾಗಿದೆ ಎಂದರು.
ಅಲ್ಲದೆ, ಗೋಶಾಲೆಗಳಿಗೆ ಜಾಗ ಗುರುತಿಸುವುದು, ಅದರ ಸ್ಥಾಪನೆ ಮತ್ತು ನಿರ್ವಹಣೆ, ಅನುದಾನದ ಬಳಕೆಯ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಜಿಲ್ಲಾ ಮಟ್ಟದ ಸಮಿತಿ ಗಳಿಗೆ ವಹಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ವೇಳಾಪಟ್ಟಿಯಂತೆ ಕ್ರಮ: ಸರ್ಕಾರ ಹಾಕಿಕೊಂಡಿರುವ ವೇಳಾಪಟ್ಟಿಯಂತೆ ಚಿಕ್ಕಮಗಳೂರು, ವಿಜಯಪುರ, ಮೈಸೂರು, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಜುಲೈ 15ರೊಳಗೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಕೊಡಗು, ಚಾಮರಾಜನಗರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆಗಸ್ಟ್ 1ರೊಳಗೆ ಮತ್ತು ರಾಯಚೂರು, ಧಾರವಾಡ, ಮಂಡ್ಯ, ಯಾದಗಿರಿ, ರಾಮನಗರ ಜಿಲ್ಲೆಗಳಲ್ಲಿ ಸೆಪ್ಟಂಬರ್ 1ರೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡಲಿವೆ.
ಜೊತೆಗೆ ಗದಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 1ರೊಳಗೆ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಡಿಸೆಂಬರ್ ಅಂತ್ಯದೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡಲಿದ್ದು, ಒಟ್ಟಾರೆ ವರ್ಷದ ಅಂತ್ಯದೊಳಗೆ ಎಲ್ಲಾ 30 ಗೋಶಾಲೆಗಳ ಸ್ಥಾಪನೆ ಪ್ರಕ್ರಿಯೆ ಮುಗಿಯಲಿದೆ ಎಂದು ಸರ್ಕಾರ ತಿಳಿಸಿದೆ.
ಪ್ರತೀ ತಾಲ್ಲೂಕಿಗೆ 2 ಗೋಶಾಲೆ, ಗೋ ಸೇವಾ ಆಯೋಗ ರಚನೆ: ಸಚಿವ ಪ್ರಭು ಚೌಹಾಣ್
ಪಂಚವಾರ್ಷಿಕ ಯೋಜನೆಯೇ? ಕಳೆದ ವಿಚಾರಣೆ ವೇಳೆ ನ್ಯಾಯಪೀಠ, ಗೋಶಾಲೆ ಆರಂಭಿಸುವುದು ಪಂಚ ವಾರ್ಷಿಕ ಯೋಜನೆಯೇ? ಎಂದು ಪ್ರಶ್ನಿಸುವ ಮೂಲಕ ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿತ್ತು.
ರಾಜ್ಯದಲ್ಲಿ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದ್ದು, ಆ ಕುರಿತು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರಿ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು.
ರಾಜ್ಯದ ಮೊದಲ ಮಾದರಿ ಗೋಶಾಲೆ ಸ್ಥಾಪನೆಗೆ ಚಿಕ್ಕಬಳ್ಳಾಪುರದಲ್ಲಿ ಚಾಲನೆ
ರಾಜ್ಯ ಸರ್ಕಾರಿ ವಕೀಲರು ಬೆಂಗಳೂರಿನಲ್ಲಿ ಭೂಮಿ ವರ್ಗಾವಣೆ ವಿಚಾರದಲ್ಲಿ ಕೆಲವು ಸಮಸ್ಯೆಗಳಿವೆ. ಇದರಿಂದ ಬೆಂಗಳೂರು ಹೊರತುಪಡಿಸಿ ಉಳಿದ 29 ಕಡೆ ಜಿಲ್ಲೆಗಳಲ್ಲಿ ಗೋಶಾಲೆ ಆರಂಭಿಸಲಾಗುತ್ತಿದೆ. ಆ ಕುರಿತು ಈಗಾಗಲೇ ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದೆ. ನೀರಿನ ಸೌಲಭ್ಯ ಕಲ್ಪಿಸಲು ಹಲವೆಡೆ ಬೋರ್ವೆಲ್ ಕೊರೆಸಲಾಗಿದ್ದು, ಶೆಡ್ ಸಹ ನಿರ್ಮಾಣ ಮಾಡಲಾಗುತ್ತಿದೆ. ಜುಲೈ 15ರ ವೇಳೆಗೆ 5 ಗೋಶಾಲೆ ಕಾರ್ಯಾರಂಭ ಮಾಡಲಿವೆ. ಆಗಸ್ಟ್ 1ರ ವೇಳೆಗೆ ಮತ್ತೆ 10 ಗೋಶಾಲಾ ಆರಂಭವಾಗಲಿವೆ ಎಂದು ವಿವರಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಹಾಗಾದರೆ ಇದು ಪಂಚ ವಾರ್ಷಿಕ ಯೋಜನೆಯೇ? ಎಂದು ಪ್ರಶ್ನಿಸಿತು.
ಅಲ್ಲದೆ, ಗೋಶಾಲೆಗಳನ್ನು ಆರಂಭಿಸಿ ಎಂದು ನ್ಯಾಯಾಲಯ ಆದೇಶ ಮಾಡಿದೆ ವಿನಾ ಬೋರ್ವೆಲ್ ಕೊರೆಸುವುದು ಮತ್ತಿತರ ವಿಚಾರದ ಬಗ್ಗೆ ಹೇಳಿಲ್ಲ. ಯಾವಾಗಿನಿಂದ ಗೋಶಾಲೆಗಳು ಕಾರ್ಯಾರಂಭ ಮಾಡಲಿವೆ ಎಂಬುದನ್ನು ತಿಳಿಸಿ ಎಂದು ಸೂಚಿಸಿದ್ದರು.
Recommended Video