ಕೋವಿಡ್ ಪರಿಸ್ಥಿತಿಯಲ್ಲೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಬೆಂಗಳೂರು, ಅಕ್ಟೋಬರ್ 22 : ಕೋವಿಡ್ ಪರಿಸ್ಥಿತಿಯಲ್ಲಿಯೇ ಕನ್ನಡ ರಾಜ್ಯೋತ್ಸವ ಬಂದಿದೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಲಿದೆಯೇ?, ಇಲ್ಲವೇ? ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು.
ಕರ್ನಾಟಕ ಸರ್ಕಾರ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲು ತೀರ್ಮಾನ ಮಾಡಿದೆ. ಆದರೆ, ಪ್ರಶಸ್ತಿ ಪ್ರಧಾನ ಸಮಾರಂಭ 2021ರ ಜನವರಿಯಲ್ಲಿ ನಡೆಯುವ ನಿರೀಕ್ಷೆ ಇದೆ.
ವಿವಿಧ ಕ್ಷೇತ್ರಗಳ ಗಣ್ಯರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡುವುದು ಬೇಡ, ಮುಂದಿನ ವರ್ಷ ನೀಡಬಹುದು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದರು. ಆದ್ದರಿಂದ, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಯಾಗುವುದಿಲ್ಲ ಎಂದು ಅಂದಾಜಿಸಲಾಗಿತ್ತು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು ಮಾತನಾಡಿದ್ದರು. "ಪ್ರಶಸ್ತಿ ನೀಡಬಾರದು ಎಂಬ ಒತ್ತಾಯ ಒಂದು ವರ್ಗದಿಂದ ಕೇಳಿ ಬಂದಿದೆ" ಎಂದು ಹೇಳಿದ್ದರು. ಈಗ ಸರ್ಕಾರ ಪ್ರಶಸ್ತಿ ಪ್ರಕಟಿಸಲು ಒಪ್ಪಿಗೆ ನೀಡಿದೆ.
ಸರ್ಕಾರ ಅಕ್ಟೋಬರ್ ಅಂತ್ಯದಲ್ಲಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಿದರೂ ಜನವರಿ ಅಥವ ಕೋವಿಡ್ ಪರಿಸ್ಥಿತಿ ಕಡಿಮೆ ಆದ ಬಳಿಕ ಪ್ರಶಸ್ತಿ ಪ್ರಧಾನ ನಡೆಯಲಿದೆ. ಒಂದು ವರ್ಷ ಪ್ರಶಸ್ತಿ ಪ್ರಕಟಿಸದಿದ್ದರೆ ಮುಂದಿನ ವರ್ಷ ಹೆಚ್ಚು ಜನರಿಗೆ ಪ್ರಶಸ್ತಿ ನೀಡಬೇಕಾಗುತ್ತದೆ ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ.
ಅಂದಹಾಗೆ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7,82,773. ಒಟ್ಟು ಸಾವಿನ ಸಂಖ್ಯೆ 10,696.












Click it and Unblock the Notifications