Mysore Dasara 2022: ಅದ್ಧೂರಿಯಾಗಿ ಮೈಸೂರು ದಸರಾ ಆಚರಿಸಲು ತೀರ್ಮಾನ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ
ಬೆಂಗಳೂರು, ಜುಲೈ 01: ಈ ಬಾರಿಯ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2022 ರ ಉನ್ನತ ಮಟ್ಟದ ಸಮಿತಿ ಸಭೆ ನಡೆಸಲಾಯಿತು.
ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, "ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು, ವೆಬ್ ಸೈಟ್, ಸಾಮಾಜಿಕ ಮಾಧ್ಯಮಗಳಲ್ಲಿ ಮೈಸೂರು ದಸರಾ ಲಾಂಛನವನ್ನು ಪ್ರಕಟಿಸಬೇಕು. ಮುಂಬೈ, ದೆಹಲಿ ಹಾಗೂ ಚನ್ನೈ ವಿಮಾನ ನಿಲ್ದಾಣಗಳಲ್ಲಿ ಹಾಗೂ ಇತರೆ ಸಾವಾಜನಿಕ ಸ್ಥಳಗಳಲ್ಲಿ ಮೈಸೂರು ದಸರಾ ಕುರಿತು ಪ್ರಚಾರ ಮಾಡಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ," ಎಂದರು.

ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಕುರಿತ ಆದೇಶ:
ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಹಾಗೂ ಖಾಸಗಿ ವಲಯದ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲಾಗುವುದು. ಸರ್ಕಿಟ್ನಲ್ಲಿ ಬೇಲೂರು, ಹಳೇಬೀಡು ಮುಂತಾದ ಪ್ರದೇಶಗಳಿಗೆ ಪ್ರವಾಸದ ಯೋಜನೆ, ಪ್ರಯಾಣ ಹಾಗೂ ವಸತಿ ಎಲ್ಲವೂ ಒಂದೇ ಟಿಕೆಟ್ನಲ್ಲಿ ಸಾಧ್ಯವಾಗಲಿದೆ. ಇದಕ್ಕೆ ವೆಬ್ಸೈಟ್ ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ. ಮೈಸೂರು ದಸರಾಕ್ಕೆ ಇದು ಪೂರಕವಾಗಲಿದೆ ಎಂದರು.
ಪಾರಂಪರಿಕ ಪದ್ದತಿಗಳ ಪುನರಾರಂಭ:
ನಾಡಹಬ್ಬಕ್ಕೆ ಸಂಬಂಧಿಸಿದಂತೆ ಹಿಂದೆ ಅನುಸರಿಸುತ್ತಿದ್ದ ಗಜಪಯಣ ಸೇರಿದಂತೆ ಪಾರಂಪರಿಕ ಪದ್ದತಿಗಳನ್ನು ಪುನಃ ಪ್ರಾರಂಭಿಸಲಾಗುವುದು ಎಂದರು. ಇದರಿಂದ ಸ್ಥಳೀಯ ಹಾಗೂ ಗ್ರಾಮೀಣ ಭಾಗದ ಜನರು ತೊಡಗಿಕೊಂಡಂತಾಗುತ್ತದೆ ಎಂದು ತಿಳಿಸಿದರು.
ದಸರಾ ಹಬ್ಬಕ್ಕೆ 15 ದಿನಗಳ ಮುನ್ನವೇ ವಸ್ತು ಪ್ರದರ್ಶನ ಉದ್ಘಾಟಿಸಲು ಸೂಚಿಸಲಾಗಿದೆ. ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರ ದಸರಾಕ್ಕೆ ತಲಾ 1.00 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ.

ಅನುದಾನ:
ಅರಮನೆ ಆಡಳಿತ ಮಂಡಳಿಯು ಅರಮನೆ ವ್ಯಾಪಿಯೊಳಗಿನ ವೆಚ್ಚವನ್ನು ಭರಿಸಲಿದೆ. ಮೂಡಾ ವತಿಯಿಂದ 10 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಈ ಬಾರಿ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಅನುದಾನ ಬಳಕೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಉಳಿದ ಮೊತ್ತವನ್ನು ಸರ್ಕಾರ ಭರಿಸಲಿದೆ ಎಂದರು.
ಸ್ಥಳೀಯ ಕಲಾವಿದರಿಗೆ ಅವಕಾಶ ನೀಡುವುದರ ಜೊತೆ ಪ್ರತಿನಿತ್ಯ ಒಬ್ಬ ರಾಷ್ಟ್ರಮಟ್ಟದಲ್ಲಿ ಖ್ಯಾತಿಯಳ್ಳ ಕಲಾವಿದರಿಂದ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಅದ್ಧೂರಿ ದಸರಾ:
ಎರಡು ವರ್ಷಗಳಿಂದ ಸಾಂಪ್ರದಾಯಿಕ ಸರಳ ದಸರಾ ಆಚರಿಸಲಾಗಿದೆ. ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸಬೇಕೆಂಬ ಎಲ್ಲರ ಅಭಿಪ್ರಾಯವನ್ನು ಸರ್ಕಾರ ಮನ್ನಿಸಿದೆ. ಸೆಪ್ಟೆಂಬರ್ 26, 2022 ರಂದು ನವರಾತ್ರಿ ನವರಾತ್ರಿ ದಸರಾ ಪ್ರಾರಂಭ. ಅಕ್ಟೋಬರ್ 5 ವಿಜಯದಶಮಿಯಂದು ನಂದಿಧ್ವಜ ಪೂಜೆ, ಪುಷ್ಪಾರ್ಚನೆ, ಏಳು ಮತ್ತು ಎಂಟರಂದು ವೀರಹೊಸಹಳ್ಳಯಿಂದ ಗಜಪಯಣ ಪ್ರಾರಂಭ, ಗಜಪಡೆಯ ನಿರ್ಗಮನದ ಬಗ್ಗೆ ತೀರ್ಮಾನಿಸಲಾಗಿದೆ ಎಂದರು.












Click it and Unblock the Notifications