ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!
ಬೆಂಗಳೂರು, ಡಿ. 25: ರಾಜ್ಯದ ಸರಕಾರಿ ಪದವಿ, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜ್ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್ ತಿಳಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಡಿಜಿಟಲ್ ಕಲಿಕೆಯನ್ನು ವ್ಯಾಪಕವಾಗಿ ಉತ್ತೇಜಿಸುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ʼಉತ್ತಮ ಆಡಳಿತ ದಿನʼ (ಗುಡ್ ಗವರ್ನೆನ್ಸ್ ಡೇ) ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ʼಉನ್ನತ ಶಿಕ್ಷಣದಲ್ಲಿ ಜಾಗತಿಕ ಮಟ್ಟದ ಸಿದ್ಧತೆʼ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ಇಂಜನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಆನ್ಲೈನ್ ಶಿಕ್ಷಣಕ್ಕೆ ಒತ್ತು
ವಿಚಾರಗೋಷ್ಠಿಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಜಮದಗ್ನಿ ಅವರ ಪ್ರಶ್ನೆಗೆ ಉತ್ತರಿಸಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್ ಅವರು, ಸದ್ಯಕ್ಕೆ ಕೋವಿಡ್ ಕಾರಣಕ್ಕೆ ಆನ್ಲೈನ್ ಶಿಕ್ಷಣ ನಡೆಯುತ್ತಿದೆ. ಇದು ತಾತ್ಕಾಲಿಕ ವ್ಯವಸ್ಥೆ ಮಾತ್ರ. ಕಾಲೇಜುಗಳು ಆರಂಭವಾಗಿಯೇ ಆಗುತ್ತವೆ, ನೇರ ತರಗತಿಗಳೂ ನಡೆಯುತ್ತವೆ. ಆದರೆ, ತಾಂತ್ರಿಕವಾಗಿ ನಮ್ಮ ವಿದ್ಯಾರ್ಥಿಗಳನ್ನು ಜಾಗತಿಕ ಗುಣಮಟ್ಟಕ್ಕೆ ಅಣಿಗೊಳಿಸಲು ಎಲ್ಲ ರೀತಿಯ ಆರ್ಥಿಕ ಸಹಕಾರ ನೀಡಲು ಉನ್ನತ ಶಿಕ್ಷಣ ಇಲಾಖೆ ಉದ್ದೇಶಿಸಿದೆ ಎಂದರು.
ಉಚಿತ ಟ್ಯಾಬ್ಲೆಟ್!
ಪ್ರಸಕ್ತ 2020-21ರ ಶೈಕ್ಷಣಿಕ ವರ್ಷದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರಕಾರಿ ಎಂಜನಿಯರಿಂಗ್ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರಕಾರಿ ಪಾಲಿಟೆಕ್ನಿಕ್ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್ಗಳನ್ನು ನೀಡಲಾಗುತ್ತಿದೆ ಎಂದರು.
155.4 ಕೋಟಿ ರೂ. ವೆಚ್ಚ
ಟ್ಯಾಬ್ಲೆಟ್ಗಳ ಖರೀದಿಗೆ ಒಟ್ಟು 155.4 ಕೋಟಿ ರೂ. ವೆಚ್ಚವಾಗುತ್ತಿದ್ದು, ಪ್ರತಿ ಒಂದು ಟ್ಯಾಬ್ಲೆಟ್ ಅನ್ನು 10,000 ರೂ. ಬೆಲೆಯಂತೆ ಖರೀದಿ ಮಾಡಲಾಗುತ್ತಿದೆ. ಒಂದು ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಗಳು ಪೂರಕವಾಗದಿದ್ದರೆ ಅಡ್ವಾನ್ಸ್ಡ್ ವರ್ಷನ್ ಲ್ಯಾಪ್ಟಾಪ್ ಖರೀದಿಗೆ ಕಾಲೇಜುಗಳ ಮೂಲಕವೇ ಶಿಕ್ಷಣ ಸಾಲಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಪಿ. ಪ್ರದೀಪ್ ತಿಳಿಸಿದರು.
ನೆಟ್ವರ್ಕ್ ಬಗ್ಗೆ ಗಮನ
ಗ್ರಾಮೀಣ ಪ್ರದೇಶದಲ್ಲಿ ಡಿಜಿಟಲ್ ಅಥವಾ ಆನ್ಲೈನ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಂತರ್ಜಾಲ ಸಂಪರ್ಕಕ್ಕೆ ಯಾವುದೇ ಅಡಚಣೆ ಆಗದಂತೆ ಈಗಾಗಲೇ ಎಲ್ಲ ಟೆಲಿಕಾಂ ಕಂಪನಿಗಳ ಜತೆ ಮಾತುಕತೆ ನಡೆಸಿ ಬಹುತೇಕ ಕಡೆ ಸಮಸ್ಯೆಯನ್ನು ನೀಗಿಸಲಾಗಿದೆ. ಸರಕಾರಿ ಸ್ವಾಮ್ಯದ ಪ್ರತೀ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಸಲು ಹಾಗೂ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಹೈ-ಸ್ಪೀಡ್ ಇಂಟರ್ನೆಟ್ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಪ್ರದೀಪ್ ಮಾಹಿತಿ ನೀಡಿದರು. ಈ ಗೋಷ್ಠಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ, ಲ್ಯಾಬ್ ಇನ್ ಆಪ್ನ ಪವನ್ ಶಿಂದೆ ಪಾಲ್ಗೊಂಡಿದ್ದರು.
Recommended Video