Government Employee: ಆರೋಗ್ಯ ಸಂಜೀವಿನಿ ಯೋಜನೆ ಅಪ್ಡೇಟ್
ಬೆಂಗಳೂರು, ಏಪ್ರಿಲ್ 22: ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಜಾರಿಗೊಳಿಸುವುದು ಸಹ ಸೇರಿದೆ. ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನದ ಕುರಿತು ಕರ್ನಾಟಕ ಸರ್ಕಾರಿ ನೌಕರರ ಸಂಘ ಹಲವು ಬಾರಿ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದೆ. 7ನೇ ವೇತನ ಆಯೋಗದ ವರದಿ ಜಾರಿ, ಹಳೆ ಪಿಂಚಣಿ ಯೋಜನೆ ಮರು ಸ್ಥಾಪನೆ ಮತ್ತು ಈ ಯೋಜನೆ ಕುರಿತು ಹಲವು ಬಾರಿ ಸರ್ಕಾರದ ಗಮನ ಸೆಳೆಯಲಾಗಿದೆ. ಈಗ ಇದೇ ವಿಚಾರದಲ್ಲಿ ಅಪ್ಡೇಟ್ ಒಂದು ಲಭ್ಯವಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ನೇತೃತ್ವದ ನಿಯೋಗ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನದ ಕುರಿತು ಸುವರ್ಣ ಆರೋಗ್ಯ ಟ್ರಸ್ಟ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸರ್ಕಾರಿ ನೌಕರರ ಮನವಿಗೆ ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅಧಿಕಾರಿಗಳು ಭರವಸೆಯನ್ನು ನೀಡಿದ್ದಾರೆ.
ಕಲಾಪದಲ್ಲಿಯೂ ಚರ್ಚೆ ನಡೆದಿತ್ತು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ವಿಚಾರದ ಕುರಿತು ಸದನಕ್ಕೆ ಮಾಹಿತಿ ನೀಡಿದ್ದರು.
ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯರೊಬ್ಬರು ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಸೇವೆ ಕಲ್ಪಿಸುವ ಯೋಜನೆ ಜಾರಿಯಾಗಿದೆಯೇ?. ಸದರಿ ಯೋಜನೆಯಡಿಯಲ್ಲಿ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಸಿಗುವ ವೈದ್ಯಕೀಯ ಸೇವೆಗಳು ಮತ್ತು ಸೌಲಭ್ಯಗಳ ವಿವರಗಳೇನು? ಎಂದು ಪ್ರಶ್ನಿಸಿದ್ದರು.
ಅಲ್ಲದೇ ಸದರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಉತ್ಕೃಷ್ಟ ವೈದ್ಯಕೀಯ ಸೇವೆ ಸಕಾಲದಲ್ಲಿ ಲಭ್ಯವಾಗುವಂತಾಗಲು ಸರ್ಕಾರ ರೂಪಿಸಿರುವ ನಿಯಮ ಹಾಗೂ ಮಾನದಂಡಗಳೇನು? ಎಂದು ಕೇಳಿದ್ದ ಪ್ರಶ್ನೆಗೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದರು.
ತಮ್ಮ ಉತ್ತರದಲ್ಲಿ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿರುತ್ತದೆ ಎಂದು ಮಾಹಿತಿ ನೀಡಿದ್ದರು.
ಈ ಯೋಜನೆಯಡಿ ಕೇಂದ್ರದ CGHS ವ್ಯವಸ್ಥೆಯಡಿ ಒಳಗೊಂಡಿರುವ ಚಿಕಿತ್ಸಾ ವಿಧಾನಗಳು, ವೈದ್ಯರ ಸಮಾಲೋಚನೆ, ವೈದ್ಯಕೀಯ ತಪಾಸಣೆಗಳು, ಶಸ್ತ್ರಚಿಕಿತ್ಸೆಗಳು, ವೈದ್ಯಕೀಯ ನಿರ್ವಹಣೆ ಮುಂತಾದ ವೈದ್ಯಕೀಯ ಸೇವೆಗಳು ಒಳಗೊಂಡಿರುತ್ತದೆ.
ಈ ಯೋಜನೆಯಡಿಯ ವೈದ್ಯಕೀಯ ಸೇವೆಗಳು ಮತ್ತು ಸೌಲಭ್ಯಗಳನ್ನು ದಿನಾಂಕ 05/09/2022 ರ ಸರ್ಕಾರದ ಆದೇಶದಲ್ಲಿ ವಿವರಿಸಲಾಗಿದೆ. ಅಲ್ಲದೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963ರ ಭಾಗವಾಗಿ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದ್ದರು.
ಅಲ್ಲದೇ ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಕಾಲ ಕಾಲಕ್ಕೆ ಮಾರ್ಗಸೂಚಿಗಳನ್ನು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಣೆ ನೀಡಿದ್ದರು. ಆದರೆ ಈಗ ಲೋಕಸಭೆ ಚುನಾವಣೆ 2024ರ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಯೋಜನೆ ಅನುಷ್ಠಾನದ ಕುರಿತು ಸರ್ಕಾರ ಯಾವುದೇ ಆದೇಶವನ್ನು ಹೊರಡಿಸುವಂತಿಲ್ಲ.
ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರ ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಈ ಸಮ್ಮೇಳನದಲ್ಲಿ ಸರ್ಕಾರಿ ನೌಕರರು ಸರ್ಕಾರದ ಮುಂದೆ ಇಟ್ಟಿದ್ದ ಮೂರು ಪ್ರಮುಖ ಬೇಡಿಕೆಗಳಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಸಹ ಸೇರಿತ್ತು.












Click it and Unblock the Notifications