Government Employee: ಅವಧಿ ಪೂರ್ವ, ಮೀರಿದ ವರ್ಗಾವಣೆ ನಿಯಮಗಳು
ಬೆಂಗಳೂರು, ಜೂನ್ 27: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ವರ್ಗಾವಣೆಗೆ ಅನುಮತಿ ನೀಡಿದೆ. ಶೇ 6ರಷ್ಟು ವರ್ಗಾವಣೆ ನಡೆಯಲಿದ್ದು, 15 ದಿನದಲ್ಲಿ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ ಎಂದು ಆದೇಶ ಹೊರಡಿಸಲಾಗಿದೆ. ಅಲ್ಲದೇ ವರ್ಗಾವಣೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ ವೀರಭದ್ರ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ವರ್ಗಾವಣೆ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಈ ಮಾರ್ಗಸೂಚಿಗಳಲ್ಲಿ ಅವಧಿ ಪೂರ್ವ, ಮೀರಿದ ವರ್ಗಾವಣೆ ನಿಯಮಗಳು, ಸಕ್ಷಮ ಪ್ರಾಧಿಕಾರದ ವರ್ಗಾವಣೆಗಳ ನಿಯಮಗಳನ್ನು ಸಹ ಪ್ರಕಟಿಸಲಾಗಿದೆ. ಈ ನಿಯಮಗಳ ವಿವರಗಳು ಇಲ್ಲಿವೆ.
ಅವಧಿ ಪೂರ್ವ/ ಅವಧಿ ಮೀರಿದ ವರ್ಗಾವಣೆಗಳು: ಈ ಕೆಳಕಂಡ ಸಂದರ್ಭಗಳಲ್ಲಿ ಸಕ್ಷಮ ಪ್ರಾಧಿಕಾರವು ಸರ್ಕಾರಿ ನೌಕರನು ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಸೇವಾವಧಿಯನ್ನು ವಿಸ್ತರಿಸಬಹುದು ಅಥವಾ ಕಡಿತಗೊಳಿಸಬಹುದು.
ಒಂದು ಸ್ಥಳದಲ್ಲಿರಬಹುದಾದ ಗರಿಷ್ಠ ಅವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹನಿರುವ ಸರ್ಕಾರಿ ನೌಕರನಿಗೆ ನಿವೃತ್ತನಾಗಲು ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇದ್ದಲ್ಲಿ, ಒಬ್ಬ ಸರ್ಕಾರಿ ನೌಕರನು ವಿಶೇಷ ತಾಂತ್ರಿಕ ವಿದ್ಯಾರ್ಹತೆ ಅಥವಾ ಅನುಭವ ಹೊಂದಿದ್ದು, ಅಂತಹ ನಿರ್ದಿಷ್ಟವಾದ ಹುದ್ದೆಗೆ ತಕ್ಷಣಕ್ಕೆ ನೇಮಿಸಲು ಸೂಕ್ತವಾದ ಬದಲಿ ನೌಕರರು ಲಭ್ಯವಿಲ್ಲದಿದ್ದಲ್ಲಿ, ಕೇಂದ್ರ ಸರ್ಕಾರದ ಯೋಜನೆ ಅಥವಾ ಫ್ಲ್ಯಾಗ್ ಶಿಪ್ ಯೋಜನೆಗಳಲ್ಲಿ ಒಬ್ಬ ಸರ್ಕಾರಿ ನೌಕರನು ಕೆಲಸ ಮಾಡುತ್ತಿದ್ದು, ಆ ಯೋಜನೆಯ ಅನುಷ್ಠಾನಗೊಳಿಸುವಿಕೆಯು ಪ್ರಮುಖ ಹಂತದಲ್ಲಿರುವಾಗ ಆತನ ಸೇವೆಯನ್ನು ಹಿಂಪಡೆದಲ್ಲಿ ಸಕಾಲದಲ್ಲಿ ಆ ಯೋಜನೆಯ ಪೂರ್ಣಗೊಳ್ಳುವಿಕೆಯು ಗಂಭೀರವಾಗಿ ನಿಲ್ಲುವ ಸಂಭವವಿದ್ದಲ್ಲಿ.
ಪತಿ-ಪತ್ನಿಯರಿಬ್ಬರೂ ಸರ್ಕಾರಿ ನೌಕರರಾಗಿದ್ದು, ಇವರಲ್ಲಿ ಒಬ್ಬರು ವರ್ಗಾವಣೆಗೊಂಡಲ್ಲಿ, ಆಗ ಇನ್ನೊಬ್ಬರು ಹಾಲಿಯಿರುವ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು ಪೂರೈಸದಿದ್ದರೂ ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆ ಸ್ಥಳಕ್ಕೆ ಅಥವಾ ಹತ್ತಿರವಿರುವ ಸ್ಥಳಕ್ಕೆ ವರ್ಗಾಯಿಸಲು, ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಆ ಪದಾಧಿಕಾರದ ಅವಧಿ ಮುಗಿಯುವ ತನಕ ವರ್ಗಾಯಿಸಬಾರದು.
ಸರ್ಕಾರಿ ನೌಕರ ಅಥವಾ ಆತನ/ ಆಕೆಯ ಅಥವಾ ಮಕ್ಕಳು ಯಾವುದೇ ಗಂಭೀರ ಅಥವಾ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಒಂದು ಸ್ಥಳದಲ್ಲಿ ಆ ವೈದ್ಯಕೀಯ ಚಿಕಿತ್ಸಾ ಸೌಲಭ್ಯವು ಲಭ್ಯವಿದ್ದು ಈ ಬಗ್ಗೆ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದಲ್ಲಿ ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶ್ರಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ, ರಜೆ ಮಂಜೂರು ಮಾಡಿದ ನಂತರವೇ ರಜೆ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸತಕ್ಕದ್ದು.
ಸಂಬಂಧಿಸಿದ ಸರ್ಕಾರಿ ನೌಕರರು ಒಳರೋಗಿಯಾಗಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ವೈದ್ಯಕೀಯ ಕಾರಣಗಳ ಮೇಲೆ ರಜಾ ಅರ್ಜಿಯನ್ನು ಕಡ್ಡಾಯವಾಗಿ ನಿಗದಿತ ಸೇರಿಕೆ ಕಾಲದೊಳಗೆ (Within the joining time prescribed) ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರುಹಾಜರಿ ಎಂದು ಪರಿಗಣಿಸತಕ್ಕದ್ದು.
ಒಬ್ಬ ಸರ್ಕಾರಿ ನೌಕರನನ್ನು ಸೇವೆಯಿಂದ ಅಮಾನತ್ತಿನಲ್ಲಿಡುವ ಬದಲು ವರ್ಗಾಯಿಸಲು/ ಚಲನವಲನಗೊಳಿಸಲು ಉದ್ದೇಶಿಸಿದಾಗ ಹೊಸ ಕಛೇರಿ/ ಹುದ್ದೆಗಳನ್ನು ಸೃಜಿಸಿದಾಗ ಅಥವಾ ನಿವೃತ್ತಿ, ಬಡ್ತಿ, ರಾಜೀನಾಮೆ, ಹಿಂಬಡ್ತಿ, ವಜಾಗೊಳಿಸುವುದರಿಂದ, ಮರಣದಿಂದ, ಕಡ್ಡಾಯ ನಿವೃತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ತಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ಭವವಾದ ಹುದ್ದೆಗಳನ್ನು ತಕ್ಷಣ ತುಂಬಬೇಕಾದಾಗ.
ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣಗಳಲ್ಲಿ ವರ್ಗಾವಣೆಯು ಅವಶ್ಯವೆನಿಸಿದಲ್ಲಿ ಇಂತಹ ಪ್ರಕರಣಗಳನ್ನು ಚಾಚೂ ತಪ್ಪದೇ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಅವರ ಅನುಮೋದನೆ ಪಡೆದು ವರ್ಗಾವಣೆ ಮಾಡತಕ್ಕದ್ದು.
ಯಾವುದೇ ಸರ್ಕಾರಿ ನೌಕರನ ವಿರುದ್ಧ ಮೇಲ್ನೋಟಕ್ಕೆ ಗಂಭೀರ ಸ್ವರೂಪದ ದೂರು ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪವಿದೆಯೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಲ್ಲಿ ಅಂತಹ ಪ್ರಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣೆ ಪಟ್ಟಿ/ ಚಾರ್ಜ್ಶೀಟ್ ಜಾರಿಯಾಗಿರುವುದು ಅಥವಾ ಸಕ್ಷಮ ನ್ಯಾಯಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ ವರ್ಗಾವಣೆ ಮಾಡತಕ್ಕದ್ದಲ್ಲ.












Click it and Unblock the Notifications