Government employee; ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬ
ಬೆಂಗಳೂರು, ಮೇ 17; ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಕರ್ನಾಟಕದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ನೇಮಕ ಮಾಡಿದ್ದ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು 6 ತಿಂಗಳ ಕಾಲ ವಿಸ್ತರಣೆ ಮಾಡಿದೆ.
ಕರ್ನಾಟಕ ಸರ್ಕಾರದ ಆದೇಶದ ಅನ್ವಯ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ದಿನಾಂಕ 19/5/2023ರಿಂದ ಜಾರಿಗೆ ಬರುವಂತೆ 6 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ. ಆದ್ದರಿಂದ ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬವಾಗಲಿದೆ.

15ನೇ ಮೇ 2023ರ ಆದೇಶದಂತೆ ಕರ್ನಾಟಕ 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲು ಅನುಕೂಲವಾಗುವಂತೆ ಆಯೋಗದ ಕಾಲಾವಧಿಯನ್ನು ದಿನಾಂಕ 19/5/2023 ರಿಂದ 6 ತಿಂಗಳವರೆಗೆ ವಿಸ್ತರಿಸಲಾಗಿದೆ.
ವೇತನ ಆಯೋಗದ ಅವಧಿ ವಿಸ್ತರಣೆ; 7ನೇ ವೇತನ ಆಯೋಗ ರಚನೆಗೊಂಡಾಗ ಸರ್ಕಾರಿ ನೌಕರರು ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, ಮಾರ್ಚ್ 29ರಂದು ಕರ್ನಾಟಕ ವಿಧಾನಸಭೆ ಚುನಾವಣೆ 2023ರ ದಿನಾಂಕ ಪ್ರಕಟವಾಯಿತು. ಚುನಾವಣಾ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿತು.

ಈ ಹಿಂದಿನ ಆದೇಶ ಪ್ರಕಾರ ರಾಜ್ಯ 7ನೇ ವೇತನ ಆಯೋಗ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿ, ಮೇ 19ರಂದು ಅಂತಿಮ ವರದಿ ಸಲ್ಲಿಕೆ ಮಾಡಬೇಕಿತ್ತು. ಆದರೆ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಪರಿಣಾಮ ಈಗ ವೇತನ ಆಯೋಗದ ಅವಧಿಯನ್ನು 6 ತಿಂಗಳು ವಿಸ್ತರಣೆ ಮಾಡಲಾಗಿದೆ.
7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರ ಬುಧವಾರ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಆಗ ಸರ್ಕಾರ ಅವರ ಜೊತೆ ಮಾತುಕತೆ ನಡೆಸಿತ್ತು.
ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನವನ್ನು ಘೋಷಣೆ ಮಾಡಿದ್ದರು. ಎನ್ಪಿಎಸ್ ಬೇರೆ-ಬೇರೆ ರಾಜ್ಯಗಳಲ್ಲಿ ಏನು ಆಗಿದೆ ಎಂದು ಎರಡು ತಿಂಗಳಿನಲ್ಲಿ ಎಸಿಎಸ್ ನೇತೃತ್ವದಲ್ಲಿ ವರದಿ ತರಿಸಿಕೊಳ್ಳುತ್ತೇವೆ ಎಂದು ನೌಕರರಿಗೆ ಭರವಸೆ ನೀಡಿದ್ದರು.
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ಆದೇಶ ಪ್ರಕಟಿಸುವಾಗ ದಿನಾಂಕ 19/11/2022ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ.
ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ ಎಂದು ತಿಳಿಸಿದೆ.
7ನೇ ರಾಜ್ಯ ವೇತನ ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷರು. ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ ಸದಸ್ಯರಾಗಿದ್ದಾರೆ. ಮೂಲಸೌಲಭ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಕಾರ್ಯದರ್ಶಿಗಳು. ಆಯೋಗದ ವರದಿ ಜಾರಿಗೆ ಬಂದರೆ ರಾಜ್ಯದ ಸುಮಾರು 6 ಲಕ್ಷ ಸರ್ಕಾರಿ ಅಧಿಕಾರಿ, ನೌಕರರರು. 3.40 ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ ಮತ್ತು ವಿಶ್ವವಿದ್ಯಾಲಯ, ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿಗಳು ಹಾಗೂ 4 ಲಕ್ಷ ನಿವೃತ್ತ ನೌಕರರಿಗೆ ಲಾಭವಾಗಲಿದೆ.












Click it and Unblock the Notifications