7th Pay Commission; ಆಯೋಗದ ಮುಂದೆ ಆತಂಕ ಹೇಳಿದ ಸರ್ಕಾರಿ ನೌಕರರು
ಬೆಂಗಳೂರು, ಫೆಬ್ರವರಿ 02: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಂದೆ ಸರ್ಕಾರಿ ನೌಕರರು 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಕೆ. ಸುಧಾಕರ್ ನೇತೃತ್ವದ ವೇತನ ಆಯೋಗದ ಅವಧಿಯನ್ನು ಮಾರ್ಚ್ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ನೇತೃತ್ವದ ನಿಯೋಗವು ಗುರುವಾರ 7ನೇ ವೇತನ ಆಯೋಗದ ಅಧ್ಯಕ್ಷ, ಸದಸ್ಯರನ್ನು ಭೇಟಿ ಮಾಡಿತು. ಹಲವಾರು ವಿಚಾರಗಳ ಕುರಿತು ವಿವರವಾದ ಚರ್ಚೆಯನ್ನು ನಡೆಸಿತು. ಸರ್ಕಾರಿ ನೌಕರರ ಆತಂಕವನ್ನು ಸಹ ವಿವರಿಸಿತು.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾಹಿತಿ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳಿಂದ ರಾಜ್ಯ 7ನೇ ವೇತನ ಆಯೋಗದ ಅಧ್ಯಕ್ಷರ ಭೇಟಿ ಎಂಬ ವಿಷಯವನ್ನು ಈ ಪ್ರಕಟಣೆ ಒಳಗೊಂಡಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರು ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಅವರನ್ನು ಭೇಟಿ ಮಾಡಿ ಈ ಕೆಳಕಂಡ ಅಂಶಗಳನ್ನು ಆಯೋಗದ ಗಮನಕ್ಕೆ ತರಲಾಯಿತು ಎಂದು ತಿಳಿಸಲಾಗಿದೆ.
ಯಾವ-ಯಾವ ವಿಚಾರಗಳು
* ಈ ಹಿಂದೆ 6ನೇ ವೇತನ ಆಯೋಗದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಮೂರ್ತಿ ಅವರು 8 ತಿಂಗಳ ಅವಧಿಯೊಳಗೆ ಸರ್ಕಾರಕ್ಕೆ ಸಲ್ಲಿಸಿದ 6ನೇ ವೇತನ ಆಯೋಗದ ವರದಿಯನ್ನು ಸ್ವೀಕರಿಸಿದ ಒಂದು ತಿಂಗಳ ಅವಧಿಯಲ್ಲಿ ಅಂದಿನ ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿರುವ ಅಂಶವನ್ನು ಗಮನಕ್ಕೆ ತರಲಾಯಿತು
* ವೇತನ ಆಯೋಗ ರಚನೆಯಾಗಿ 14 ತಿಂಗಳುಗಳಾಗಿದ್ದು, ವರದಿ ಸಲ್ಲಿಸಲು ಈಗಾಗಲೇ ತುಂಬಾ ವಿಳಂಬವಾಗಿರುವ ವಿಷಯವನ್ನು ಹಾಗೂ ವೇತನ ಆಯೋಗದ ಅನುಷ್ಠಾನದ ಬಗ್ಗೆ ನೌಕರರಲ್ಲಿ ಮೂಡಿರುವ ಆತಂಕದ ವಿಷಯವನ್ನು ಈ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
* ಮಾರ್ಚ್ ತಿಂಗಳಿನಿಂದ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರುವುದರಿಂದ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ತೊಡಕಾಗಲಿರುವ ಅಂಶವನ್ನು ಆಯೋಗಕ್ಕೆ ತಿಳಿಸಲಾಯಿತು. ಸರ್ಕಾರ ಮಂಡಿಸಲಿರುವ ಆಯವ್ಯಯಕ್ಕಿಂತ ಮುಂಚಿತವಾಗಿ ಹಾಗೂ ಲೋಕಸಭಾ ಚುನಾವಣೆ ನೀತಿ ಸಂಹಿತೆ ಪ್ರಾರಂಭವಾಗುವುದಕ್ಕಿಂತ ಮೊದಲು 7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ವರದಿಯನ್ನು ಶೀಘ್ರ ಸರ್ಕಾರಕ್ಕೆ ಸಲ್ಲಿಸಲು ಮನವಿ ಮಾಡಲಾಯಿತು.
7ನೇ ವೇತನ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಸರ್ಕಾರಿ ನೌಕರರ ಸಂಘದ ಮನವಿಗೆ ಪೂರಕವಾಗಿ ಸ್ಪಂದಿಸಿ, ವರದಿ ಸಲ್ಲಿಸುವ ಬಗ್ಗೆ ಕ್ರಮವಹಿಸಲಾಗುವುದೆಂದು ತಿಳಿಸಿದ್ದಾರೆ. ವೇತನ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಾದ ರಾಮಮೂರ್ತಿ, ಶ್ರೀಕಾಂತ್ ವನವಳ್ಳಿ, ಸದಸ್ಯ ಕಾರ್ಯದರ್ಶಿಯಾದ ಹೆಬ್ಸಿಬರಾಣಿ ಕೊರ್ಲಾಪಾಟಿ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಆಯೋಗದ ಅವಧಿ ವಿಸ್ತರಣೆ; ಕರ್ನಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. 2023ರ ನವೆಂಬರ್ನಲ್ಲಿ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು 15/3/2024ರ ತನಕ ವಿಸ್ತರಣೆ ಮಾಡಿದೆ.
ಆದರೆ ಆಯೋಗ ಈ ವರದಿ ನೀಡುವ ವೇಳೆಗೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ನಿರೀಕ್ಷೆ ಇದೆ. ಆಗ ವೇತನ ಆಯೋಗದ ವರದಿ ಜಾರಿಗೊಳಿಸುವುದು ಕಷ್ಟ. ಆದ್ದರಿಂದ ನೀತಿ ಸಂಹಿತೆ ಜಾರಿಗೆ ಮೊದಲೇ ವರದಿ ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರು ಬೇಡಿಕೆ ಇಟ್ಟಿದ್ದಾರೆ.
ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿದ್ದಾಗ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿದ್ದರು. ಈ ಕುರಿತು ದಿನಾಂಕ 9/11/2022ರ ಸರ್ಕಾರಿ ಆದೇಶ ಪ್ರಕಟಿಸಲಾಗಿತ್ತು.
2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿತು. 2023ರ ನವೆಂಬರ್ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಸರ್ಕಾರ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿತು.
7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕಾದರೆ ಸರ್ಕಾರಕ್ಕೆ ಆರ್ಥಿಕ ಹೊರೆ ಉಂಟಾಗಲಿದೆ. ಆಯೋಗದ ವರದಿ ಅನ್ವಯ ಸರ್ಕಾರಿ ನೌಕರರ ವೇತನ, ಭತ್ಯೆ ಹೆಚ್ಚಳವಾಗಲಿದೆ. ಇದರಿಂದಾಗಿ ಸುಮಾರು 12 ಸಾವಿರ ಕೋಟಿ ರೂ. ಹೊರೆಯನ್ನು ಸರ್ಕಾರ ಎದುರಿಸಬೇಕಾಗಬಹುದು ಎಂದು ಆರ್ಥಿಕ ತಜ್ಞರು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಫೆಬ್ರವರಿ 16ರಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ನಲ್ಲಿ 7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕಾಗಿಯೇ ಅನುದಾನ ಮೀಸಲಿಡಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.












Click it and Unblock the Notifications