ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ
ಬೆಂಗಳೂರು, ಫೆಬ್ರವರಿ 9; ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ/ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದು ಅಕ್ಷಮ್ಯ ಅಪರಾಧವಾಗುತ್ತದೆ.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿತರಿಸಲಾಗುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಕೂಡಲೇ ತಮ್ಮ ಪಡಿತರ ಚೀಟಿಯನ್ನು ಆಹಾರ ಇಲಾಖೆಗೆ ಸಲ್ಲಿಸಿ ರದ್ದುಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಆರ್ಥಿಕವಾಗಿ ಸದೃಢವಾಗಿರುವವರು ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಿ ಸೇವೆಗಳನ್ನು ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಒಂದು ವೇಳೆ ಆರ್ಥಿಕವಾಗಿ ಸದೃಢರು ಹಾಗೂ ಅಧಿಕಾರಿ/ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಕಾರ್ಡ್ ಹೊಂದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದಲ್ಲಿ ಅಂತಹ ಅಧಿಕಾರಿ/ನೌಕರರ ವಿರುದ್ದ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಿ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.

ಬಿಪಿಎಲ್ ಕಾರ್ಡ್ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಸರ್ಕಾರಿ ನೌಕರರು ಮತ್ತು ಆರ್ಥಿಕ ಸದೃಢರು ಉಪಯೋಗಿಸಿಕೊಳ್ಳುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಲಾಗಿದೆ.
ಯಾರು ಕಾರ್ಡ್ ಪಡೆಯುವಂತಿಲ್ಲ
* ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾ ತೆರಿಗೆ /ವ್ಯಾಟ್ /ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
* ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ (ಏಳುವರೆ ಎಕರೆ) ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
* ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು.
* ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಆದ್ಯತಾ/ PHH (BPL) ಪಡಿತರ ಚೀಟಿ ಪಡೆಯಲು ಅನರ್ಹ ಕುಟುಂಬಗಳಾಗಿರುತ್ತವೆ.












Click it and Unblock the Notifications