Government Employee: ಮೇ 15ರಿಂದ ಸರ್ಕಾರಿ ನೌಕರರ ವರ್ಗಾವಣೆ, ಮಾರ್ಗಸೂಚಿ
ಬೆಂಗಳೂರು, ಮೇ 13: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದೆ. 2025ನೇ ಸಾಲಿನಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಮೇ 15 ರಿಂದ ಜೂನ್ 14ರ ತನಕ ಸರ್ಕಾರಿ ನೌಕರರ ವರ್ಗಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಡಲಾಗಿದೆ.
ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ದಿನಾಂಕ ಘೋಷಣೆ ಹಿನ್ನಲೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆಯ ಮಾರ್ಗಸೂಚಿ-2025 ಪ್ರಕಟಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ವೀರಭದ್ರ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1) ಆದೇಶವನ್ನು ಹೊರಡಿಸಿದ್ದಾರೆ.

ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ
* 2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26 ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ/ ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.
* ಸಕ್ಷಮ ಪ್ರಾಧಿಕಾರ ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ. 'ವರ್ಗಾವಣೆ' ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ ಕ್ಷೇತ್ರ ಇಲಾಖೆ/ ಆಯುಕ್ತಾಲಯ/ ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ಥಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.
* ಚಲನವಲನ ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ. ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.
* 'ಗುಂಪು 'ಎ', 'ಬಿ', 'ಸಿ', ಮತ್ತು 'ಡಿ' ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು ಮತ್ತು ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ
* ವರ್ಗಾವಣೆ/ ಚಲನವಲನಗಳನ್ನು ಸಕ್ಷಮ ಪ್ರಾಧಿಕಾರವು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು. ಪ್ರಸಕ್ತ 2025-26ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6 ಅನ್ನು ಮೀರದಂತೆ ದಿನಾಂಕ 15/05/2025 ರಿಂದ ದಿನಾಂಕ 14/06/2025ರ ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು, ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ.
* ಸಕ್ಷಮ ಪ್ರಾಧಿಕಾರವು ವರ್ಗಾವಣೆ/ ಚಲನವಲನ ಮಾಡುವಾಗ ಈ ಅಂಶಗಳನ್ನೂ ಸಹ ಖಚಿತಪಡಿಸಿಕೊಳ್ಳತಕ್ಕದ್ದು. ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂದರ್ಭಗಳಲ್ಲಿ ಯಾವುದೇ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ಥಳ ನಿಯುಕ್ತಿ ನೀಡತಕ್ಕದ್ದು. ಈ ರೀತಿ ಹಲವಾರು ಸರ್ಕಾರಿ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯುವುದರಿಂದ ಸರ್ಕಾರಕ್ಕೆ ಅನವಶ್ಯಕ ಆರ್ಥಿಕ ಹೊರೆಯಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳತಕ್ಕದ್ದು.
* ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಸ್ವರೂಪದ ಆರೋಪಗಳ ಬಗ್ಗೆ ಆತನ ವಿರುದ್ಧ ಇಲಾಖಾ ವಿಚಾರಣೆ/ ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ/ ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಆಡಳಿತಾತ್ಮಕ ಅನುಕೂಲಕ್ಕೆ ಅನುಗುಣವಾದ ಕಾರ್ಯಕಾರಿಯೇತರ ಹುದ್ದೆಗಳಿಗೆ ನೇಮಿಸತಕ್ಕದ್ದು. ಮುಂದುವರೆದು, ಇಲಾಖಾ ವಿಚಾರಣೆ/ ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರರನ್ನು ಅವರು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು.
* ವರ್ಗಾವಣೆಗೊಂಡ ಸರ್ಕಾರಿ ನೌಕರನು ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ದೃಢೀಕರಣ ಪತ್ರದೊಂದಿಗೆ ರಜೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.
* ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶ್ರಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ, ರಜೆ ಮಂಜೂರು ಮಾಡಿದ ನಂತರವೇ ರಜೆ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸತಕ್ಕದ್ದು.












Click it and Unblock the Notifications