Shiggaon By Election: ವಿಧಾನಸೌಧಕ್ಕೆ ಬೀಗ ಹಾಕಿ, ಹಣದ ಚೀಲ ತಂದು ಚುನಾವಣೆ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ
ಹಾವೇರಿ, ನವೆಂಬರ್ 13: ರಾಜ್ಯ ಸರ್ಕಾರ ಹದಿನೈದು ದಿನದಿಂದ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ತೆಗೆದುಕೊಂಡು ಬಂದು ಚುನಾವಣೆ ಮಾಡಿದ್ದಾರೆ. ಅವರಿಗೆ ಜನರು ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಇಂದು(ಬುಧವಾರ) ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರೊಂದಿಗೆ ಶಿಗ್ಗಾವಿ ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ-1 ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಆರಂಭದಿಂದಲೂ ನೂರಕ್ಕು ನೂರು ಸಾಮಾನ್ಯ ಮತದಾರರು ಬಹಿರಂಗ ಬೆಂಬಲ ವ್ಯಕ್ತ ಪಡಿಸಿದ್ದಾರೆ. ದಿನೇ ದಿನೆ ಹೆಚ್ಚಳವಾಗಿದೆ ಇದೆಲ್ಲದರ ಹಿನ್ನೆಲೆಯಲ್ಲಿ ಭರತ್ ಬೊಮ್ಮಾಯಿ ಬಹಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸರ್ಕಾರ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ಹಿಡಿದುಕೊಂಡು ಬಂದು ಚುನಾವಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಸರ್ಕಾರಿ ಕೆಲಸಗಳನ್ನು ನಿಲ್ಲಿಸಿ ಚುನಾವಣೆ ನಡೆಸಿದ್ದಾರೆ. ಅವರು ತಮ್ಮ ರಾಜಕೀಯ ಅಧಪತನವನ್ನು ಈ ರೀತಿ ತೊರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಕಾಂಗ್ರೆಸ್ ನವರು ನಮ್ಮ ಮೇಲೆ ಮಾಡಿರುವ ಅರೋಪ ಯಾವುದು ಸತ್ಯವಲ್ಲ. ನವೆಂಬರ್ 23 ರಕ್ಕೆ ಅದಕ್ಕೆಲ್ಲ ಉತ್ತರ ಸಿಗುತ್ತದೆ ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ರೌಡಿ ಶೀಟರ್ ಪ್ರಕರಣ ಇನ್ನು ಖುಲಾಸೆಯಾಗಿಲ್ಲ ಎಂದು ಎಸ್ಪಿ ಅವರೇ ಹೇಳಿದ್ದರು. ಅವರೇ ಎರಡು ತಾಸಿನಲ್ಲಿ ಉಲ್ಟಾ ಹೊಡೆದರು. ಗೃಹ ಇಲಾಖೆ ಪೊಲೀಸರನ್ನು ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದರು.
ಈ ಚುನಾವಣೆಯಲ್ಲಿ ಅಲ್ಪ ಸಂಖ್ಯಾತರ ತುಷ್ಟೀಕರಣ ಹೆಚ್ಷಾಗಿದಿಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಗೆ ಸೋಲಿನ ಭಯದಲ್ಲಿ ತುಷ್ಟೀಕರಣ ನಿರಂತರ ಮಾಡುತ್ತ ಬಂದಿದ್ದಾರೆ. ಅವರು ರಾಗದ್ವೇಷ ಇಲ್ಲದೆ ಕೆಲಸ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿದದ್ದರು. ಆದರೆ, ಚುನಾವಣೆ ಗೆಲ್ಲಲು ತುಷ್ಟೀಕರಣ ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹಾಗು ಸಂಸದ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿಗೆ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಪಾರ್ಶ್ವ ಪದ್ಮಾಲಯ ಧಾಮ ಜೈನ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದು, ಚುನಾವಣೆಗಳನ್ನು ಗೆಲ್ಲಲು ಯಾವ ರೀತಿಯ ಅಡ್ಡಮಾರ್ಗವನ್ನಾದರು ಹಿಡಿದು ಆಮಿಷವೊಡ್ಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ಶಿಗ್ಗಾಂವಿ ಮತದಾರರನ್ನು ಸೆಳೆಯುವ ದೃಷ್ಟಿಯಿಂದ ಮಹಿಳೆಯರ ಖಾತೆಗಳಿಗೆ ಗೃಹಲಕ್ಷ್ಮಿ ಹಣ ಜಮೆ ಮಾಡಿ ಮತ ಸೆಳೆಯುವ ಹುನ್ನಾರ ನಡೆಸಿರುವುದು ವರದಿಯಾಗಿದೆ.
ಈ ಹಿಂದೆಯೂ ಲೋಕಸಭಾ ಚುನಾವಣೆಯ ಮುನ್ನಾ ದಿನ ಮೂರು ತಿಂಗಳ ಗೃಹ ಲಕ್ಷ್ಮಿ ಹಣ ಜಮೆ ಮಾಡಿ ಮತ ಸೆಳೆಯಬಹುದೆಂಬ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ಸಿಗರಿಗೆ ನಾಡಿನ ಜನ ತಕ್ಕ ಪಾಠ ಕಲಿಸಿದ್ದರು. ಇದೀಗ ಉಪಚುನಾವಣೆಯಲ್ಲೂ ಅಡ್ಡ ಮಾರ್ಗದ ಮೂಲಕ ಜನರ ಕಿವಿಗೆ ಹೂ ಇಡುವ ಪ್ರಯತ್ನಕ್ಕೆ ಮುಂದಾಗಿರುವ ಭ್ರಷ್ಟ. ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಶಾಸ್ತಿ ಮಾಡಲಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಈ ಕೂಡಲೇ ಚುನಾವಣಾ ಆಯೋಗ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.












Click it and Unblock the Notifications