ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರದ ಮಾರ್ಗಸೂಚಿ!
ಬೆಂಗಳೂರು, ಜುಲೈ 25: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯನ್ನು ಸರ್ಕಾರ ನಿರ್ಬಂಧಿಸಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು, ಮಸೀದಿಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪ್ರಾರ್ಥನೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಪ್ರಾರ್ಥನೆ ಮಾಡಲು ಹಲವು ಸೂಚನೆಗಳನ್ನು ಕೊಡಲಾಗಿದೆ.
Recommended Video
ರಾಜ್ಯದಲ್ಲಿ, ಅದರಲ್ಲೂ ನಗರ ಪ್ರದೇಶಗಳಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಹೆಚ್ಚಿನ ಸಂಖ್ಯೆಯ ಈದ್ಗಾಹ್ಗಳು ಯಾವುದೇ ಮಸೀದಿಯ ಅಥವಾ ಆಡಳಿತ ಮಂಡಳಿಯ ಅಧೀನದಲ್ಲಿ ಇಲ್ಲ. ಹೀಗಾಗಿ ಅಂತಹ ಕಡೆಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಷ್ಟ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಜೊತೆಗೆ ಮಸೀದಿಗಳಲ್ಲಿಯೂ ಪ್ರಾರ್ಥನೆಗೆ ಮೊದಲು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ವೈದ್ಯರು, ಸಂಶೋಧಕರನ್ನು ಮೀರಿಸುತ್ತದೆ ರಾಜಕಾರಣಿಗಳ ಕೊವಿಡ್ ಲಸಿಕೆ!
ಮಸೀದಿಗಳಲ್ಲಿ ಪ್ರಾರ್ಥನೆ
ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಮೊದಲು ಆಡಳಿತ ಮಂಡಳಿಗಳು ಈ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಲಾಗಿದೆ.
* ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ಗಳನ್ನು ಹಾಕಿರಬೇಕು.
* 60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು.
* ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿಗಳ ಅಂತರ ಕಾಯ್ದುಕೊಳ್ಳಬೇಕು.
* ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಬೇಕು.
* ಕೈಗಳನ್ನು ಸೋಪ್ ಅಥವಾ ಸ್ಯಾನಿಟೈಸರ್ನಿಂದ ಶುಚಿಗೊಳಿಸಿಕೊಳ್ಳಬೇಕು.
* ಮಸೀದಿಗಳಲ್ಲಿರುವ ಧಾರ್ಮಿಕ ಗ್ರಂಥಗಳನ್ನು ಮುಟ್ಟುವಂತಿಲ್ಲ.
* ತಮ್ಮ ಮನೆಗಳಿಂದಲೇ ಕಡ್ಡಾಯವಾಗಿ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು.
* ಹಸ್ತಲಾಘವ ಅಥವಾ ಆಲಿಂಗನ ಮಾಡಿಕೊಳ್ಳದಂತೆ ಸೂಚಿಸಬೇಕು.
* ಅಪರಿಚಿತರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದರೆ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು.
ಬ್ಯಾಚ್ಗಳಲ್ಲಿ ಪ್ರಾರ್ಥನೆ
ಈ ಕ್ರಮಗಳನ್ನು ಅನುಸರಿಸುವುದರೊಂದಿಗೆ ಆಯಾ ಮಸೀದಿಗಳಲ್ಲಿ ಒಂದು ಬಾರಿಗೆ 50 ಜನರು ಮಾತ್ರ ಸಾಮೂಹಿಕ ಪ್ರಾರ್ಥನೆ ಮಾಡಲು ಅವಕಾಶ ಕೊಡಲಾಗಿದೆ. ಅಧಿಕ ಜನರು ಬಂದಲ್ಲಿ ಎರಡು ಅಥವಾ ಮೂರು ಬ್ಯಾಚ್ಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಮಾಡಿಕೊಡಲು ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಕ್ಫ್ ಇಲಾಖೆ ಸೂಚಿಸಿದೆ.
ಹಿಲಾಲ್ ಸಮಿತಿ ಘೋಷಣೆ
ಪ್ರಸಕ್ತ ಸಾಲಿನ ಬಕ್ರೀದ್ ಅನ್ನು ರಾಜ್ಯಾದ್ಯಂತ ಆಗಸ್ಟ್ 1 ರಂದು ಆಚರಿಸಲಾಗುತ್ತದೆ ಎಂದು ರಾಜ್ಯದ ಹಿಲಾಲ್ ಸಮಿತಿಯು ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 31 ರಂದು ಬಕ್ರೀದ್ ಆಚರಿಸಲಾಗುತ್ತದೆ ಎಂದು ಸಮಿತಿ ತಿಳಿಸಿದೆ.
ಎರಡೂ ದಿನಗಳಂದು ಈದ್ಗಾಹ್ಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿದೆ.
ನಿರ್ಬಂಧ ಮುಂದುವರೆಸಿ
ಇನ್ನು ಯಾವುದೇ ಮಸೀದಿಯ ಆಡಳಿತ ಮಂಡಳಿಯು ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರದ ಜುಮಾ ಪ್ರಾರ್ಥನೆ ಸಹಿತ ದಿನದ 5 ಹೊತ್ತಿನ ಸಾಮೂಹಿಕ ಪ್ರಾರ್ಥನೆಯನ್ನು ಈಗಾಗಲೇ ನಿರ್ಬಂಧಿಸಿದ್ದಲ್ಲಿ ಅಂತಹ ಮಸೀದಿ ಆಡಳಿತ ಸಮಿತಿಗಳು ಅದನ್ನು ಬಕ್ರೀದ್ ನಮಾಜ್ನಲ್ಲೂ ಮುಂದುವರೆಸಲು ಸೂಚಿಸಲಾಗಿದೆ.
ಮಸೀದಿಗಳನ್ನು ಹೊರತು ಪಡಿಸಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ಜಾಗಗಳಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯನ್ನು ಮಾಡುವಂತಿಲ್ಲ ಎಂದು ನಿರ್ಬಂಧಿಸಲಾಗಿದೆ.