ಸರ್ಕಾರಿ ಆಸ್ಪತ್ರೆಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 18: ಇನ್ಮುಂದೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಗದ ಮುಕ್ತ ವ್ಯವಸ್ಥೆ ಜಾರಿಯಾಗಲಿದೆ. ಆಸ್ಪತ್ರೆಗಳನ್ನು ಇ-ಆಸ್ಪತ್ರೆಗಳನ್ನಾಗಿ (E-Hospitals) ಮಾಡಲು ರಾಜ್ಯ ಸರ್ಕಾರ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ 40 ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಇ-ಆಸ್ಪತ್ರೆ ಕಾರ್ಯಕ್ರಮ ಆರಂಭಿಸಲಾಗಿತ್ತು. ಇದು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ವಿಸ್ತರಣೆಗೆ ತೀರ್ಮಾನಿಸಲಾಗಿದೆ. ರಾಜ್ಯದ 122 ತಾಲೂಕು ಆಸ್ಪತ್ರೆಗಳು, 50 ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು 3 ಎಂಎಚ್ಸಿಗಳಲ್ಲಿ ಇ-ಆಸ್ಪತ್ರೆ ಕಾರ್ಯಕ್ರಮವನ್ನು ವಿಸ್ತರಿಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.
ತಂದೆಯಿಂದಲೇ ಮಗುವಿನ ಮೇಲೆ ಹಲ್ಲೆ: ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ
ಈ ಯೋಜನೆಯ ಭಾಗವಾಗಿ ದೊಡ್ಡ ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಸರ್ಕಾರಿ ಆಸ್ಪತ್ರೆಗಳ ಆಡಳಿತ ಮತ್ತು ರೋಗಿಯ ಮಾಹಿತಿಯನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡಲಾಗುತ್ತದೆ. ಇದರಿಂದ ಕಾಗದ ಮುಕ್ತ ವ್ಯವಸ್ಥೆ ಜಾರಿ ಆಗುತ್ತದೆ. ಇದಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಸಾಫ್ಟ್ವೇರ್ ಅಭಿವೃದ್ಧಿಪಡಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯದ ವಿವಿದೆಡೆ ಪರಿಶಿಷ್ಟಜಾತಿ ಮತ್ತು ಪಂಗಡಗಳ ಮಕ್ಕಳಿಗಾಗಿ ಅಂಬೇಡ್ಕರ್ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣಕ್ಕೆ 595 ಕೋಟಿ ರು ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿರುವುದು ಸೇರಿದಂತೆ ಇತರ ಕೆಲ ಪ್ರಮುಖ ತೀರ್ಮಾನಗಳನ್ನು ಸೋಮವಾರದ ಸಂಪುಟ ಸಭೆ ತೆಗೆದುಕೊಂಡಿದೆ.