ವಿಜಯಪುರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬದ್ಧ: ಗೋವಿಂದ ಕಾರಜೋಳ
ಬೆಂಗಳೂರು, ಸೆ.13: ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಂಗಳವಾರ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ 2006ರಲ್ಲಿ ಪ್ರಾರಂಭವಾಗಿದೆ. 2815 ಎಚ್ಪಿ ಸಾಮರ್ಥ್ಯದ ಒಟ್ಟು 8 ಪಂಪ್ಗಳನ್ನ ಹಾಕಿದ್ದೆವು. ಅದರಲ್ಲಿ 5 ಪಂಪ್ಗಳು 2015/16 ರಲ್ಲಿಯೇ ರಿಪೇರಿಗೆ ಬಂದಿದ್ದವು. 7.75 ಕೋಟಿ ರೂ. ಖರ್ಚು ಮಾಡಿ 7 ಪಂಪ್ಗಳನ್ನ ರಿಪೇರಿ ಮಾಡಿ 5 ವರ್ಷ ಅದೇ ಕಂಪನಿಗಳಿಗೆ ನಿರ್ವಹಣೆಗೆ ನೀಡಿದ್ದೇವೆ. ಈಗಾಗಲೇ 4 ಪಂಪ್ಗಳನ್ನು ಶುರು ಮಾಡಿದ್ದು, 2 ಪಂಪ್ ಈ ತಿಂಗಳಲ್ಲೇ ಮುಗಿಯುತ್ತದೆ. ಒಟ್ಟಾರೆ 7 ಪಂಪ್ಗಳನ್ನು ಶುರು ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
"147 ಕಿಮೀವರೆಗೂ ನೀರು ಬಿಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ, ಅದಕ್ಕೆ ತಾಂತ್ರಿಕ ಸಮಸ್ಯೆಗಳಿವೆ. 97 ಕಿಮೀರವರೆಗೂ ನೀರು ಕೊಡುತ್ತಿದೇವೆ. 42 ಸಾವಿರ ಹೆಕ್ಟೇರ್ನಷ್ಟು ನೀರಾವರಿಯನ್ನು ಮಾಡಿಕೊಡುತ್ತೇವೆ. ಕುಡಿಯುವ ನೀರಿಗಾಗಿಯೇ ಕೊಡುತ್ತಿದೇವೆ. ಸ್ಕಾಡಾ ಗೇಟ್ ಅಳವಡಿಸಬೇಕು ಎಂದಿದ್ದಾರೆ. ಅದನ್ನ ಆಲೋಚನೆ ಮಾಡುತ್ತೇವೆ" ಎಂದು ತಿಳಿಸಿದರು.
"ರೇವಣ್ಣ ಸಿದ್ದೇಶ್ವರ ಏತನೀರಾವರಿ ಯೋಜನೆ ಸಣ್ಣ ಪ್ರಾಜೆಕ್ಟ್ ಅಲ್ಲ ಅದು 3,000 ಕೋಟಿ ರೂ. ಮೌಲ್ಯದ ಯೋಜನೆ. ಈ ಹಿಂದೆ ಬೊಮ್ಮಾಯಿಯವರು ಐದು ವರ್ಷಗಳ ಹಿಂದೆ ನೀರಾವರಿ ಇಲಾಖೆಯ ಮಂತ್ರಿಯಾಗಿದ್ದಾಗಲೂ ಅದೇ ಬೇಡಿಕೆ ಇತ್ತು. ಆದರೆ, ಯಾರು ಮಾಡಿರಲಿಲ್ಲ. ಸಿಎಂ 3,000 ಕೋಟಿ ರೂಪಾಯಿ ಯೋಜನೆಗೆ ಒಪ್ಪಿಗೆ ಕೊಟ್ಟಿದ್ದಾರೆ. ಈಗಾಗಲೇ ಮೊದಲನೇ ಹಂತದ ಕಾಮಗಾರಿಗೆ 770 ಕೋಟಿ ರೂಪಾಯಿಗೆ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಶುರುವಾಗಿದೆ. ಎರಡನೇ ಹಂತದ ಕಾಮಗಾರಿಗೂ ಶೀಘ್ರದಲ್ಲಿ ಟೆಂಡರ್ ಕರೆಯುತ್ತೇವೆ. ರೇವಣ್ಣ ಸಿದ್ದೇಶ್ವರ ಏತನೀರಾವರಿ ಯೋಜನೆಯಿಂದ ಒಂದು ಹುಲ್ಲು ಕಡ್ಡಿ ಬೆಳೆಯದ ವಿಜಯಪುರ ಜಿಲ್ಲೆಯ 57 ಹಳ್ಳಿಗಳಿಗೆ ನೀರಾವರಿಯಾಗುತ್ತದೆ" ಎಂದು ಹೇಳಿದರು.

45 ಕೋಟಿ ವೆಚ್ಚದಲ್ಲಿ ಕಾರಂಜಾ ಕಾಲುವೆ ಯೋಜನೆ
ಇನ್ನು, ಕಾರಂಜಾ ಏತನೀರಾವರಿ ಯೋಜನೆಯ ಕಾಲುವೆಯ ಆಧುನೀಕರಣ ಆಗದೇ ಇರುವುದರಿಂದ ರೈತರ ಹೊಲದಲ್ಲಿ ನೀರು ನುಗ್ಗಿ ಬೆಳೆ ಹಾನಿಯಾಗಿದೆ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ಅವರ ಪರವಾಗಿ ಶಾಸಕ ವೆಂಕಟರಾವ್ ನಾಡಗೌಡ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿ, 21 ಕಿಲೋ ಮೀಟರ್ ಮುಖ್ಯ ಕಾಲುವೆಗೆ 1993-94 ರಲ್ಲಿ ಜಭಾದ್ ಸ್ಟೋನ್ಗಳನ್ನು ಹಾಕಿದ್ದರು. ಹೀಗಾಗಿ ನೀರು ಸರಿಯಾಗಿ ಹೋಗುತ್ತಾ ಇರಲಿಲ್ಲ. ಒಟ್ಟು 45 ಕೋಟಿ ರೂಪಾಯಿ ಯೋಜನೆ ಇದಾಗಿದ್ದು, ಈಗಾಗಲೇ 32.5 ಕೋಟಿ ರೂ. ಖರ್ಚು ಮಾಡಲಾಗಿದೆ. ಕೆಲ ತಿಂಗಳಲ್ಲಿ ಬಾಕಿ ಉಳಿದಿರುವುದನ್ನು ಮರುನವೀಕರಣ ಮಾಡಿಸುತ್ತೇವೆ ಎಂದರು.

ಮನೆಗೆ ನೀರು ನುಗ್ಗಿದ್ರೆ 10 ಸಾವಿರ ಪರಿಹಾರ
ಕಾರಂಜಾ ಏತ ನೀರಾವರಿ ಯೋಜನೆಯಿಂದ ಮನೆಗಳಿಗೆ ನೀರು ನುಗ್ಗುತ್ತಿದೆ, ಅವುಗಳನ್ನು ಸ್ಥಳಾಂತರ ಮಾಡಬೇಕು ಎಂಬ ಶಾಸಕ ರಾಜಶೇಖರ್ ಪಾಟೀಲ್ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿ, 1993-94ರಲ್ಲಿ ಆಗಿರುವ ಪ್ರಾಜೆಕ್ಟ್ ಇದು. ಅವತ್ತು ಸರ್ವೆ ಮಾಡಿ ಎಫ್ಆರ್ನಲ್ಲಿ ಬಂದಿರುವುದಕ್ಕೆ ಪರಿಹಾರ ಹಾಗೂ ಸ್ಥಳಾಂತರ ಮಾಡುವ ಕೆಲಸ ಮಾಡಿದ್ದಾರೆ. ಈಗ ಹೆಚ್ಚುವರಿ ನೀರು ಬರುತ್ತಿದೆ ಎಂದು ಹೇಳಿದ್ದಾರೆ. ನೀರು ಹೆಚ್ಚು ಬರುತ್ತಿದ್ದರೇ, ಖಂಡಿತವಾಗಿಯೂ ಸರ್ಕಾರ ಅದನ್ನ ಪರಿಶೀಲನೆ ಮಾಡುತ್ತದೆ. ಮನೆಯೊಳಗೆ ನೀರು ನುಗ್ಗಿದ್ರೆ ಪರಿಹಾರವಾಗಿ 10 ಸಾವಿರ ನೀಡುವಂತೆ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಆ ಗ್ರಾಮ ಪೂರ್ಣ ಸ್ಥಳಾಂತರ ಮಾಡಬೇಕಾದರೆ ಅವತ್ತು ಸರ್ವೇ ಮಾಡಿದ್ದಾರೆ. ಸರ್ವೆ ಮಾಡಿ ನೀರು ಎಲ್ಲಿವರೆಗೂ ಹೋಗಿದೆ ಎನ್ನುವ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ. ಆ ರೀತಿಯಾಗಿ ಗ್ರಾಮಕ್ಕೆ ಗ್ರಾಮವೇ ಮುಳುಗಡೆಯಾಗಿ ಬಿಟ್ಟು ಹೋಗಿರುವ ಪ್ರಸಂಗ ದೇಶದ ಇತಿಹಾಸದಲ್ಲೇ ಇಲ್ಲ. ಮಳೆ ಹೆಚ್ಚಾಗಿರುವುದರಿಂದ ನೀರು ಹೆಚ್ಚಾಗಿ ಬಂದಿರಬಹುದು. ಜಿಲ್ಲಾಧಿಕಾರಿಗಳಿಂದ ವರದಿ ತರಿಸಿ ಪರಿಶೀಲಿಸುತ್ತೇವೆ ಎಂದರು.

ನಾವು ತಾರತಮ್ಯ ಮಾಡುವ ಪ್ರಶ್ನೆ ಇಲ್ಲ!
ಚಳ್ಳಕೆರೆಯ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ವಿಚಾರವಾಗಿ ಶಾಸಕ ರಘುಮೂರ್ತಿ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿ, ಬಜೆಟ್ನಲ್ಲಿ 25 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿರಲಿಲ್ಲ. ಬಜೆಟ್ ಭಾಷಣದಲ್ಲಿ ಘೋಷಣೆ ಆಗಿರುವ ಯೋಜನೆ ಇದು. ನಾವು ತಾರತಮ್ಯ ಮಾಡುವ ಪ್ರಶ್ನೆ ಇಲ್ಲ. ಬ್ರಿಡ್ಜ್ ಕಂ ಬ್ಯಾರೇಜ್ ತಗೊಳ್ಬೇಕು ಎಂಬುದು ನಮಗೂ ಇದೆ. ನಮ್ಮ ಇಲಾಖೆಗೆ ಪ್ರತಿ ವರ್ಷ ಬಜೆಟ್ನಲ್ಲಿ 18 ರಿಂದ 19 ಸಾವಿರ ಕೋಟಿ ಅನುದಾನ ಸಿಗ್ತಾ ಇದೆ. ನಮ್ಮ ಇಲಾಖೆಗೆ ಕಾರ್ಯಭಾರ ಇರುವಂತದ್ದು, 1 ಲಕ್ಷದ 2 ಸಾವಿರ ಕೋಟಿಗಿಂತ ಹೆಚ್ಚಿದೆ. ಪ್ರತಿ ವರ್ಷ ಘೋಷಣೆ ಮಾಡ್ತಾ ಹೋಗಿದಾರೆ, ಪ್ರತಿ ವರ್ಷವೂ ಹೆಚ್ಚಾಗುತ್ತಿದೆ. ಹಾಗಾಗಿ ಅನುದಾನದ ಲಭ್ಯತೆ ಆಧಾರದ ಮೇಲೆ ತೆಗೆದುಕೊಳ್ಳಬೇಕು ಎಂಬ ಉದ್ದೇಶ ಇದೆ. ಯಾವುದೇ ತಾರತಮ್ಯ ಮಾಡಬೇಕು ಎಂಬ ಉದ್ದೇಶ ಇಲ್ಲ ಎಂದರು.

1980 ರಿಂದ ಇಲ್ಲಿಯವರೆಗೂ ನಾಲ್ಕು ಸಲ ಮಾತ್ರ ಭರ್ತಿ
ಚಾಮರಾಜಪೇಟೆಯ ಗುಂಡಾಲ್ ಜಲಾಶಯದ ನಿರ್ವಹಣೆಗೆ ಹೆಚ್ಚಿನ ಅನುದಾನ ಒದಗಿಸುವಂತೆ ಶಾಸಕ ಆರ್ ನರೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಗೋವಿಂದ ಕಾರಜೋಳ ಅವರು, ಗುಂಡಾಲ್ ಜಲಾಶಯ 1980 ರಿಂದ ಇಲ್ಲಿಯವರೆಗೂ ನಾಲ್ಕು ಸಲ ಭರ್ತಿಯಾಗಿದೆ. ಹೀಗಾಗಿ ಕಾಲುವೆಗಳು ದುರಸ್ತಿಯಾಗದೇ ಅವ್ಯವಸ್ಥೆ ಆಗಿರುವುದು ನಿಜ. ಆದರೂ ಕೂಡ ಪ್ರತಿ ವರ್ಷ ಅನುದಾನ ನೀಡಿದ್ದೇವೆ. ಅಷ್ಟು ಸಾಕಾಗುತ್ತಿಲ್ಲ ಎಂದು ಹೇಳಿದ್ದಾರೆ. ಖಂಡಿತವಾಗಿಯೂ 15 ಸಾವಿರ ಎಕರೆಗೆ ನೀರಾವರಿ ಆಗುವಂತಹ ಜಲಾಶಯ ಅದು, ಅದರ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications