ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೆ ಚಿಂತನೆ: ಕೆ.ಎಸ್.ಈಶ್ವರಪ್ಪ
ಬೆಂಗಳೂರು, ಮಾ.8: ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಆದಿಯಾಗಿ ಎಲ್ಲ ಶಾಸಕರ ವೇತನ ಹೆಚ್ಚಳ ಮಾಡಿಕೊಂಡ ಸರ್ಕಾರ ಈಗ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೂ ಮನಸ್ಸು ಮಾಡಿದೆ.
ಈ ಕುರಿತು ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಪ್ರತಿನಿಧಿಗಳ ವೇತನ ಹೆಚ್ಚಳ ಸಂಬಂಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳಿಗೆ ವೇತನ ಹೆಚ್ಚಳ ಮಾಡುವುದಕ್ಕೆ, ಆರೋಗ್ಯ ವಿಮೆ ನೀಡುವುದಕ್ಕೆ ಇಲಾಖೆಯಲ್ಲಿ ಅವಕಾಶ ಇದೆ. ಈಗ ಇರುವ ವೇತನ ಮತ್ತು ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಬಹುದು ಎಂಬುದರ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಕೂಲಂಕಷ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಇಲಾಖೆಯಿಂದ ಒಂದು ಪ್ರಸ್ತಾವನೆ ಸಿದ್ಧಪಡಿಸಿ ಮಾ.14ರಂದು ಸಭೆ ಕರೆದು, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿ ಬಂದಿರುವ ವಿಧಾನ ಪರಿಷತ್ ಸದಸ್ಯರ ಅಭಿಪ್ರಾಯವನ್ನೂ ಪಡೆಯಲಾಗುವುದು. ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವೇತನ ಹೆಚ್ಚಳದ ಬಗ್ಗೆ ಅಂತಿಮಗೊಳಿಸಲಾಗುವುದು ಎಂದು ಈಶ್ವರಪ್ಪ ಹೇಳಿದರು.

ಅಲ್ಲದೆ, ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಿಗೆ ಅಧಿಕಾರಿಗಳ ನಿಯೋಗವೊಂದನ್ನು ಕಳುಹಿಸಲಾಗುವುದು. ಆ ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳಿಗೆ ಸಿಗುತ್ತಿರುವ ವೇತನ ಮತ್ತು ಸವಲತ್ತುಗಳ ಬಗ್ಗೆ ವರದಿ ಪಡೆದು ನಮ್ಮಲ್ಲಿಯೂ ಅದನ್ನು ಎಷ್ಟು ಪ್ರಮಾಣದಲ್ಲಿ ಅಳವಡಿಸಿಕೊಳ್ಳಬಹದು ಎಂಬುದರ ಬಗ್ಗೆ ಆಲೋಚಿಸಲಾಗುವುದು ಎಂದರು.
ಗೌರವಧನ ಹೆಚ್ಚಿಸಲು ದಿನೇಶ್ ಗೂಳಿಗೌಡ ಒತ್ತಾಯ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ನಿಯಮ 330ರ ಅಡಿಯಲ್ಲಿ ಚರ್ಚೆಯಲ್ಲಿ ಭಾಗವಹಿಸಿದ್ದ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಥಳೀಯ ಸಂಸ್ಥೆಗಳ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವಧನ ಹೆಚ್ಚಳ ಮಾಡಬೇಕು. ಈ ಮೂಲಕ ಗೌರವಯುತ ವೇತನ ಅವರಿಗೆ ಸಿಗುವಂತಾಗಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿ ಬರುವವರು ಆರ್ಥಿಕವಾಗಿ ಸ್ಥಿತಿವಂತರಾಗಿರುವುದಿಲ್ಲ. ರೈತರು, ರೈತ ಮಹಿಳೆಯರು, ಪದವೀಧರರು, ಸ್ನಾತಕೋತ್ತರ ಪದವೀಧರರು, ಇಂಜಿನಿಯರಿಂಗ್ ಪದವೀಧರರು, ಎಂಎಸ್ ಡಬ್ಲ್ಯೂ ಮಾಡಿದಂತವರೂ ಇದ್ದಾರೆ. ಇವರಿಗೆ ನೀಡುತ್ತಿರುವ ಗೌರವಧನ ಬಹಳವೇ ಕಡಿಮೆ ಇದೆ. ಇದನ್ನು ಸರಿಪಡಿಸಬೇಕಿದೆ ಎಂದು ಈ ವೇಳೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದರು.
ಶಾಸಕರು, ಸಂಸತ್ ಸದಸ್ಯರು ಹಾಗೂ ಸಚಿವರಿಗೆ ಅವರ ಅವಧಿ ಮುಗಿದ ಮೇಲೂ ಪಿಂಚಣಿ ಲಭಿಸುತ್ತದೆ. ಆದರೆ, ಗ್ರಾಮ ಪಂಚಾಯಿತಿ ಸದಸ್ಯರಿಗೆ ಯಾವುದೇ ರೀತಿಯ ಪಿಂಚಣಿ ಸಹ ಲಭ್ಯವಿರುವುದಿಲ್ಲ. ಈ ಕಾರಣಕ್ಕಾಗಿ ಗೌರವಧನವನ್ನು ಹೆಚ್ಚಳ ಮಾಡಬೇಕು ಎಂದು ನಾನು ಈ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯ ಮಾಡುತ್ತೇನೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದರು.
"ನುಡಿದಂತೆ ನಡೆಯಲು" ಬಿಜೆಪಿಗೆ ಸಲಹೆ
ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಆಡಳಿತದಲ್ಲಿದ್ದ ಬಿಜೆಪಿ ಪಕ್ಷವು ಭರವಸೆಯನ್ನು ನೀಡಿತ್ತು ಇದೀಗ ನಿಮ್ಮದೇ ಸರ್ಕಾರ ಇರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವ ಧನ ಹೆಚ್ಚಳ ಮಾಡುವ ಮೂಲಕ "ನುಡಿದಂತೆ ನಡೆಯಿರಿ" ಎಂದು ನಾನು ಈ ಮೂಲಕ ಒತ್ತಾಯ ಮಾಡುತ್ತೇನೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಸರ್ಕಾರವನ್ನು ಒತ್ತಾಯಿಸಿದರು.
ಅಡಿಷನಲ್ ಬಜೆಟ್ ನಲ್ಲಿ ಘೋಷಿಸಿ - ದಿನೇಶ್ ಗೂಳಿಗೌಡ
ಗ್ರಾಮ ಪಂಚಾಯಿತಿ ಸದಸ್ಯರಿಗೆ ವೇತನ ಹೆಚ್ಚಳ ಮಾಡುವ ಕುರಿತು ಸಭಾನಾಯಕರಿಗೆ ಹಾಗೂ ಸಚಿವರಿಗೆ ಶಕ್ತಿಯನ್ನು ತುಂಬಲು ಸ್ಥಳೀಯ ಸಂಸ್ಥೆಗಳ 25 ಪ್ರತಿನಿಧಿಗಳು ಪಕ್ಷಾತೀತವಾಗಿ ಮಾನ್ಯ ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗಲು ನಾವೆಲ್ಲರೂ ಸಿದ್ಧವಿದ್ದೇವೆ. ಹೀಗಾಗಿ ಈ ವರ್ಷದ ಅಡಿಷನಲ್ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆಯನ್ನು ಮಾಡಬೇಕೆಂದು ನಾನು ಸರ್ಕಾರವನ್ನು ಒತ್ತಾಯ ಮಾಡುತ್ತೇನೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದರು.












Click it and Unblock the Notifications