ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಅಧಿಸೂಚನೆ
ಬೆಂಗಳೂರು, ಮಾರ್ಚ್ 23: ವೀರಶೈವ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಶುಕ್ರವಾರ ಸಂಜೆ ಅಧಿಸೂಚನೆ ಹೊರಡಿಸಿದೆ.
ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ(ಬಸವತತ್ವ ಅನುಸರಿಸುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈಗ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಯೋಗ ಅಧಿನಿಯಮ 1994 ಇದರ 50ರನ್ವಯ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ರಾಜ್ಯ ಸರ್ಕಾರಕ್ಕೆ ಮಾಡಿರುವ ಶಿಫಾರಸ್ಸನ್ನು ಪರಿಗಣಿಸಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಅಧಿನಿಯಮ 1992 ಇದರ ಪ್ರಕರಣ 2 (ಸಿ) ದಡಿಯಲ್ಲಿ ಕೇಂದ್ರ ಸರ್ಕಾರವು ಲಿಂಗಾಯತ ಮತ್ತು ಬಸವ ತತ್ವಗಳನ್ನು ನಂಬುವ ವೀರಶೈವ ಲಿಂಗಾಯತ ಎಂದು ಮಾನ್ಯತೆ ನೀಡಿ ಅಧಿನಿಯಮದಲ್ಲಿ ಗೊತ್ತುಪಡಿಸುವ ದಿನಾಂಕದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧಿನಿಯಮ 1994 ಇದರ ಪ್ರಕರಣ 2ರ (ಡಿ) ಖಂಡದಲ್ಲಿನ ಅಧಿಕಾರನ್ನು ಚಲಾಯಿಸಿ, ರಾಜ್ಯ ಸರ್ಕಾರವು ಪ್ರಸ್ತುತ ಇರುವ ಧಾರ್ಮಿಕ ಅಲ್ಪಸಂಖ್ಯಾತರ ಮೀಸಲಾತಿ ಸೌಲಭ್ಯಗಳನ್ನು ಒಳಗೊಂಡಂತೆ ಹಕ್ಕು ಹಾಗೂ ಅಸಕ್ತಿಗಳಿಗೆ ಧಕ್ಕೆ ಬಾರದ ಷರತ್ತಿಗೊಳಪಟ್ಟು ಲಿಂಗಾಯತ ಮತ್ತು ಬಸವ ತತ್ವಗಳನ್ನು ನಂಬುವ ವೀರಶೈವ ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು ಎಂಬ ಮಾನ್ಯತೆ ಮಾಡಿ ಅಧಿಸೂಚಿಸಿದೆ.
ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ, ಸಿಗುವುದು ಅನುಮಾನ!
ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಲಿಂಗಾಯತ ಮತ್ತು ವೀರಶೈವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಒಳಗೊಂಡ ಮೀಸಲು ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಹಕ್ಕು ಆಸ್ತಿಗಳಿಗೆ ಧಕ್ಕೆ ಬಾರದಂತೆ ಸೌಲಭ್ಯ ಕಲ್ಪಿಸಲಾಗುವುದು. ಕೇಂದ್ರ ಸರ್ಕಾರ ಮಾನ್ಯತೆ ನೀಡಿದ ದಿನದಿಂದ ಈ ಅಧಿಸೂಚನೆಗೆ ಮಾನ್ಯತೆ ಬರಲಿದೆ.