ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲದೆ ಅಂಕಗಳ ನಿಗದಿ ಹೇಗೆ? ಇಲ್ಲಿದೆ ಸರ್ಕಾರದ ಆದೇಶದ ವಿವರ!
ಬೆಂಗಳೂರು, ಜು. 05: ಇತಿಹಾಸದಲ್ಲಿಯೇ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಭವಿಷ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ ಫಲಿತಾಂಶ ಅತ್ಯಂತ ನಿರ್ಣಾಯಕ. ಹೀಗಾಗಿ ಯಾವ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ರಾಜ್ಯ ಶಿಕ್ಷಣ ಇಲಾಖೆ ಪ್ರಕಟಿಸಲಿದೆ ಎಂಬುದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದ ಕುರಿತು ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.
ಈ ಸಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 'ಕೋವಿಡ್ ಬ್ಯಾಚ್' ವಿದ್ಯಾರ್ಥಿಗಳು ಎಂಬ ಹೆಸರಿನಿಂದ ಗುರುತಿಸಿಕೊಳ್ಳುವಂತಾಗಬಾರದು ಎಂಬ ಉದ್ದೇಶದಿಂದ ಮೊದಲು ತೀರ್ಮಾನಿಸಲಾಗಿದ್ದ ಗ್ರೇಡ್ ನೀಡುವ ತೀರ್ಮಾನದಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಜೊತೆಗೆ ಒಟ್ಟು 7 ಹಂತಗಳಲ್ಲಿ ಪರಿಶೀಲಿಸಿ ಅಂಕಗಳನ್ನು ನಿಗದಿ ಮಾಡಲು ಮಾರ್ಗಸೂಚಿಯನ್ನು ರೂಪಿಸಲಾಗಿದೆ. ಪುನರಾವರ್ತಿತ ವಿದ್ಯಾರ್ಥಿಗಳನ್ನು ಫಲಿತಾಂಶ ಸೇರಿದಂತೆ ಜೊತೆಗೆ ವಿದ್ಯಾರ್ಥಿಗಳಲ್ಲಿದ್ದ ಹಲವು ಗೊಂದಲಗಳನ್ನು ಶಿಕ್ಷಣ ಇಲಾಖೆ ಪರಿಹರಿಸಿದೆ.
ಜೊತೆಗೆ ಫಲಿತಾಂಶದಿಂದ ತೃಪ್ತರಾಗದ ವಿದ್ಯಾರ್ಥಿಗಳು ಏನು ಮಾಡಬಹುದು ಎಂಬುದನ್ನೂ ಇಲಾಖೆ ತಿಳಿಸಿದೆ. ಸ್ವತಃ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪಿಯು ಫಲಿತಾಂಶದ ಕುರಿತು ಸಂಪೂರ್ಣ ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಶಿಕ್ಷಣ ಇಲಾಖೆ ಹೊರಡಿಸಿರುವ ಸಂಪೂರ್ಣ ಮಾರ್ಗಸೂಚಿ ಮುಂದಿದೆ.
ಅಧಿಕೃತ ಆದೇಶ ಪ್ರಕಟಿಸಿದ ಶಿಕ್ಷಣ ಇಲಾಖೆ
"ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು" ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಸರ್ಕಾರದ ಅಧಿಕೃತ ಆದೇಶ ಪ್ರಕಟಿಸಲಾಗಿದೆ ಎಂದು ಸಚಿವ ಸುರೇಶ್ ಹೇಳಿದ್ದಾರೆ.
ಪರೀಕ್ಷೆ ಇಲ್ಲದೆ ಅಂಕಗಳ ನಿಗದಿ ಹೇಗೆ?
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳಲ್ಲಿ ಶೇಕಡಾ 45 ರಷ್ಟು ಅಂಕಗಳು ಹಾಗೂ ಪಿಯುಸಿ ಮೊದಲ ವರ್ಷದಲ್ಲಿ ಪಡೆದ ಅಂಕಗಳಲ್ಲಿ ಶೇಕಡಾ 45 ರಷ್ಟು ಅಂಕಗಳನ್ನು ಸೇರಿಸಲಾಗುವುದು. ಅದಕ್ಕೆ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆ ಆಧರಿಸಿ ಕೊಡಲಾಗಿರುವ ಶೇಕಡಾ 10ರಷ್ಟು ಅಂಕಗಳಲ್ಲಿ ಪಡೆದಿರುವ ಅಂಕಗಳನ್ನು ಸೇರಿಸಲಾಗುವುದು. ಜೊತೆಗೆ ಪಿಯುಸಿ ಮೊದಲ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಶೇಕಡಾ 5ರಷ್ಟು ಕೃಪಾಂಕಗಳನ್ನು ಕೊಡಲಾಗುವುದು. ಪ್ರತಿ ವಿಷಯಕ್ಕೂ ಇದೇ ಮಾನದಂಡದ ಮೇಲೆ ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳನ್ನು ನಿಗದಿ ಮಾಡಲು ಸರ್ಕಾರ ಆದೇಶ ಮಾಡಿದೆ.
ಖಾಸಗಿ ಅಭ್ಯರ್ಥಿಗಳು, ಅಂಕಗಳು ತೃಪ್ತಿಯಾಗದಿದ್ದಲ್ಲಿ?
ಒಂದು ವೇಳೆ ವಿದ್ಯಾರ್ಥಿಗಳಿಗೆ ಇಲಾಖೆ ಕೊಡುವ ಅಂಕಗಳು ತೃಪ್ತಿಯಾಗದಿದ್ದಲ್ಲಿ ಮುಂದೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಹಾಗೆ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಲ್ಲಿ ಪರೀಕ್ಷೆಯಲ್ಲಿ ಪಡೆಯುವ ಅಂಕಗಳೇ ಅಂತಿಮವಾಗಿದ್ದು, ಹಿಂದಿನ ಅಂಕಗಳನ್ನು ಪಡೆಯಲು ಅವಕಾಶ ಇರುವುದಿಲ್ಲ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿರುವ ಖಾಸಗಿ ವಿದ್ಯಾರ್ಥಿಗಳ ಅಂಕಗಳನ್ನು ನಿಗದಿ ಮಾಡಲು ಯಾವುದೇ ರೀತಿಯ ದಾಖಲೆಗಳು (ಪ್ರಥಮ ಪಿಯುಸಿ ಅಂಕಗಳು ಇತ್ಯಾದಿ) ಇಲ್ಲದ ಕಾರಣ ಸದರಿ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಕೊಡಲಾಗುತ್ತದೆ. ಖಾಸಗಿ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ ಮುಂದಿನ ವರ್ಷ ಶುಲ್ಕ ರಹಿತವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
Recommended Video
ಪುನರಾವರ್ತಿತ ವಿದ್ಯಾರ್ಥಿಗಳೂ ಪಾಸ್!
ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು ಮತ್ತು ಶೇ. 5ರಷ್ಟು ಕೃಪಾಂಕಗಳನ್ನು ನೀಡಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರ ಕೈಗೊಂಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪುನರಾವರ್ತಿತ ಅಭ್ಯರ್ಥಿಗಳನ್ನೂ ಸಹ ಉತ್ತೀರ್ಣಗೊಳಿಸಬೇಕೆಂದು ಕೆಲವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಪುನರಾವರ್ತಿತ ಅಭ್ಯರ್ಥಿಗಳನ್ನೂ ಈ ವರ್ಷದ ಮಟ್ಟಿಗೆ ಉತ್ತೀರ್ಣಗೊಳಿಸುವ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದು, ಸರ್ಕಾರದ ನಿಲುವನ್ನು ಹೈಕೋರ್ಟ್ ಸಮ್ಮತಿಸಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.