Government Employee: ವರ್ಗಾವಣೆ, ಸರ್ಕಾರಿ ನೌಕರರಿಗೆ ಸಿಹಿಸುದ್ದಿ
ಬೆಂಗಳೂರು, ಜೂನ್ 12: ಲೋಕಸಭೆ ಚುನಾವಣೆ ನೀತಿ ಸಂಹಿತೆ ತೆರವಾಗುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಈಡೇರಿಸಲು ಮುಂದಾಗಿದೆ. ಜೂನ್ 13ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.
ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಲೋಕಸಭೆ ಚುನಾವಣೆ 2024ರ ನೀತಿ ಸಂಹಿತೆ ಅಡ್ಡಿಯಾಗಿತ್ತು. ಈಗ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಸರ್ಕಾರ ಹಲವು ಹೊಸ ತೀರ್ಮಾನಗಳನ್ನು ತೆಗೆದುಕೊಳ್ಳಲಿದೆ.

ಸರ್ಕಾರಿ ನೌಕರರು, ಶಾಸಕರು ಸರ್ಕಾರದ ಮೇಲೆ ಸರ್ಕಾರಿ ನೌಕರರ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜೂನ್ 13ರಂದು ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ.
ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿ/ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡಿದೆ. ಇದೇ ಮಾದರಿಯಲ್ಲಿ ಶಿಕ್ಷಣ ಹೊರತುಪಡಿಸಿ ಉಳಿದ ಇಲಾಖೆಗೆಳ ನೌಕರರ ವರ್ಗಾವಣೆಯನ್ನು ಎರಡು ತಿಂಗಳಿನಲ್ಲಿ ಪೂರ್ಣಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಎಷ್ಟು ವರ್ಗಾವಣೆ?; ಕಳೆದ ವರ್ಷ ಕರ್ನಾಟಕ ಸರ್ಕಾರ ಶೇ 6ರಷ್ಟು ಪ್ರಮಾಣದಲ್ಲಿ ವರ್ಗಾವಣೆ ಕೈಗೊಂಡಿತ್ತು. ಈಗ ಶಾಸಕರು, ಸಚಿವರು ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತಿದ್ದಾರೆ. ಶೈಕ್ಷಣಿಕ ಚಟುವಟಿಕೆ ಆರಂಭವಾಗಿರುವ ಹಿನ್ನಲೆಯಲ್ಲಿ ಶಿಕ್ಷಣ ಹೊರತುಪಡಿಸಿ ಇತರೆ ಇಲಾಖೆಗಳ ನೌಕರರ ವರ್ಗಾವಣೆ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಇದೆ.
ಈ ವರ್ಷ ಶೇ 6ಕ್ಕಿಂತಲೂ ಕಡಿಮೆ ಪ್ರಮಾಣದ ವರ್ಗಾವಣೆಯನ್ನು ಸರ್ಕಾರ ಕೈಗೊಳ್ಳಲಿದೆ. ಆದರೆ ಅದಕ್ಕೂ ಮೊದಲು ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಸಚಿವರ ಜೊತೆ ಈ ಕುರಿತು ವಿವರವಾಗಿ ಚರ್ಚಿಸಲಿದ್ದಾರೆ. ಗೃಹ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಈಗಾಗಲೇ ವರ್ಗಾವಣೆ ಮಾಡಲು ತಯಾರಿ ನಡೆದಿದೆ.
ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದರೆ ಇಲಾಖೆಗಳು ಯಾವ ಮಟ್ಟದ ಅಧಿಕಾರಿ/ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಬೇಕು ಎಂದು ಪಟ್ಟಿಯನ್ನು ಮಾಡಿ ದಿನಾಂಕಗಳನ್ನು ಘೋಷಣೆ ಮಾಡಲಿವೆ. ಜುಲೈ ಅಂತ್ಯದಲ್ಲಿ ಎಲ್ಲಾ ಪ್ರಕ್ರಿಯೆ ಮುಗಿಸಿ ಆಡಳಿತ ಯಂತ್ರವನ್ನು ಚುರುಕಾಗಿಸಲು ಸರ್ಕಾರ ಬಯಸಿದೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಈಡೇರಿಕೆಗೆ ಹಿನ್ನಡೆ ಉಂಟು ಮಾಡಿತ್ತು. ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ವರದಿ ಜಾರಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿ, ಆರೋಗ್ಯ ಕರ್ನಾಟಕ ಯೋಜನೆ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರು ಸರ್ಕಾರದ ಮುಂದೆ ಇಟ್ಟಿದ್ದಾರೆ. ಇದರಲ್ಲಿ ವರ್ಗಾವಣೆಯೂ ಸಹ ಸೇರಿದೆ.
2024ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮೊದಲ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದೆ. ದಿನಾಂಕ 13/06/2024ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಈಗಾಗಲೇ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರಿ ನೌಕರರ ವರ್ಗಾವಣೆಗೆ ಚುನಾವಣಾ ಆಯೋಗದ ಒಪ್ಪಿಗೆ ಬೇಕು. ಆದರೆ ಈಗ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದರೆ ಸಾಕು. ಸಭೆಯಲ್ಲಿ ಚರ್ಚಿಸಲು ಹಲವಾರು ವಿಚಾರಗಳಿವೆ. ಯಾವ-ಯಾವ ವಿಚಾರಕ್ಕೆ ಆದ್ಯತೆ ನೀಡಿ ಗುರುವಾರದ ಸಭೆಯಲ್ಲಿ ಒಪ್ಪಿಗೆ ನೀಡಲಾಗುತ್ತದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಒಪ್ಪಿಗೆ ನೀಡಿದರೆ ನೌಕರರ ಬಹುದಿನಗಳ ಬೇಡಿಕೆಗೆ ಮನ್ನಣೆ ನೀಡಿದಂತೆ ಆಗಲಿದೆ.












Click it and Unblock the Notifications