ಪ್ರತ್ಯೇಕ ಲಿಂಗಾಯತ ಧರ್ಮ, ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ
ಬೆಂಗಳೂರು, ಮಾರ್ಚ್ 13: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡುವ ಬಗ್ಗೆ ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ನೀಡಿರುವ ವರದಿ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಚರ್ಚೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಲು ಬುಧವಾರ(ಮಾರ್ಚ್ 14)ದಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರ್ಚಿಸಿ, ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರದಂದು ರಾಯಚೂರಿನಲ್ಲಿ ತಿಳಿಸಿದರು.
ಅಸುಂಡಿ ಕೆರೆ ಸೇರಿದಂತೆ 18 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಕಾಮಗಾರಿಯ ಶಂಕುಸ್ಥಾಪನೆಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ಮಾತನಾಡಿ, ಕಳೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ಅಪೂರ್ಣವಾಗಿದೆ. ಈಗಾಗಲೇ ಸಮಿತಿ ವರದಿ ಕೊಟ್ಟಿದೆ. ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಲಾಗುವುದು ಎಂದರು.
ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ
ಪ್ರತ್ಯೇಕ ಧರ್ಮದ ವಿಚಾರದಲ್ಲಿ ಮುಖ್ಯಮಂತ್ರಿ ನಾಟಕ ಮಾಡುತ್ತಿದ್ದಾರೆ ಎಂದು ವಿಆರ್ಎಲ್ ಸಮೂಹ ಸಂಸ್ಥೆ ಚೇರ್ಮನ್ರಾದ ಡಾ. ವಿಜಯ ಸಂಕೇಶ್ವರ ಅವರು ಆರೋಪಿಸಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಂಕೇಶ್ವರ ಅವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ಆಧಾರರಹಿತ, ರಾಜಕೀಯ ಪ್ರೇರಿತ ಹೇಳಿಕೆ ಎಂದರು.
ವಿಶ್ಲೇಷಣೆ: ಅವರವರ ಭಾವಕ್ಕೆ, ಲಿಂಗಾಯತ ಪ್ರತ್ಯೇಕ ಧರ್ಮ
ನ್ಯಾ.ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಕೇಂದ್ರದ ಶಿಫಾರಸ್ಸಿಗೆ ಕಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹಾಗೂ ಗಣಿ ಸಚಿವ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ ಅವರುಗಳು ಒತ್ತಾಯಿಸಿದ್ದಎ, ವರದಿಯನ್ನು ಶಿಫಾರಸ್ಸಿಗೆ ಕಳುಹಿಸಬಾರದೆಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ತೋಟಗಾರಿಕಾ ಸಚಿವ ಸೋಮಶೇಖರ್ ಅವರುಗಳು ಆಗ್ರಹಿಸಿದ್ದಾರೆ. ಹೀಗಾಗಿ, ಈ ವಿಷಯದಲ್ಲಿ ಗೊಂದಲ ಇನ್ನೂ ಮುಂದುವರೆದಿದೆ.