Arecanut: ಅಡಿಕೆಯಲ್ಲಿ ಎಲೆ ಚುಕ್ಕಿ, ಹಳದಿ ಎಲೆ ನಿಯಂತ್ರಣಕ್ಕೆ ಸರ್ಕಾರದಿಂದ ಕ್ರಮ: ಚೆಲುವರಾಯಸ್ವಾಮಿ
ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಡಿಕೆ ತೋಟಗಳಿಗೆ ಬಾಧಿಸುವ ಎಲೆ ಚುಕ್ಕಿ ಮತ್ತು ಹಳದಿ ಎಲೆ ರೋಗ ನಿಯಂತ್ರಣಕ್ಕೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದ ಅವರು, ಅಡಿಕೆಯಲ್ಲಿ ಎಲೆಚುಕ್ಕಿ ಮತ್ತು ಹಳದಿ ಎಲೆ ರೋಗದ ಬಗ್ಗೆ ಅಧ್ಯಯನ ನಡೆಸಿ ಹತ್ತು ದಿನದೊಳಗೆ ವರದಿ ಸಲ್ಲಿಸುವಂತೆ ಕೃಷಿ ವಿಜ್ಞಾನಿ ಹಾಗೂ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜಗದೀಶ್ ಅವರಿಗೆ ಸೂಚಿಸಲಾಗಿದೆ ಎಂದು ಚೆಲುವರಾಯಸ್ವಾಮಿ ಹೇಳಿದರು.

ಅಡಿಕೆ ತೋಟಗಳಿಗೆ ತಗುಲಿರುವ ರೋಗಕ್ಕೆ ಪರಿಹಾರ ಕಂಡುಕೊಳ್ಳಲು ವೈಜ್ಞಾನಿಕ ಅಧ್ಯಯನ ನಡೆಸಲಾಗುತ್ತಿದ್ದು, ವರದಿ ಸರಕಾರಕ್ಕೆ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಬೀಜ-ಗೊಬ್ಬರದ ಕೊರತೆ ಇಲ್ಲ
ಕರ್ನಾಟಕದಲ್ಲಿ ಬೀಜ ಮತ್ತು ರಸಗೊಬ್ಬರಗಳ ಕೊರತೆ ಇಲ್ಲ ಎಂದು ಸಚಿವರು ಹೇಳಿದರು. ಕಳಪೆ ಗುಣಮಟ್ಟದ ಬೀಜ ವಿತರಣೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಸಾವಯವ ಕೃಷಿಯನ್ನು ಉತ್ತೇಜಿಸಲು ಪ್ರತಿ ಹೆಕ್ಟೇರ್ಗೆ ರೈತರಿಗೆ 10,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹೆಚ್ಚುವರಿಯಾಗಿ 21 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಗುರುತಿಸಲಾಗಿದೆ. 90 ರಷ್ಟು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಉಳಿದ ತಾಲ್ಲೂಕುಗಳು ಬರಗಾಲದಿಂದ ತತ್ತರಿಸಿದರೆ ಮುಂದಿನ ದಿನಗಳಲ್ಲಿ ಅವುಗಳನ್ನೂ ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಸಚಿವರು ಹೇಳಿದರು.
ರೈತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ. ಸರಕಾರವೂ ಹೈನುಗಾರಿಕೆಗೆ ಬೆಂಬಲ ನೀಡುತ್ತಿದೆ ಎಂದರು.
ರೈತರಿಗೆ ಶಾಪವಾದ ಹಳದಿ ಮತ್ತು ಎಲೆಚುಕ್ಕಿ ರೋಗ
ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅಡಿಕೆ ಬೆಳೆಗಾರರು ಅಡಿಕೆಯನ್ನು ಕಾಡುತ್ತಿರುವ ಹಳದಿ ಮತ್ತು ಎಲೆಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ. ಈ ಭಾಗದಲ್ಲಿ ರೈತರ ಆದಾಯದ ಪ್ರಮುಖ ಮೂಲ ಅಡಿಕೆ ಆಗಿದೆ. ಈಗಾಗಲೇ ದರ ಕುಸಿತ, ನಿರ್ವಹಣೆ ಹೆಚ್ಚಳದಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದು, ಹಳದಿ ಎಲೆ ಮತ್ತು ಎಲೆ ಚುಕ್ಕಿ ರೋಗದಿಂದ ಅಡಿಕೆ ಬೆಳೆ ನಾಶವಾಗುತ್ತಿದ್ದು ಹೆಚ್ಚಿನ ಸಮಸ್ಯೆಗೆ ಕಾರಣವಾಗಿದೆ.
ಸರ್ಕಾರ ಅಡಿಕೆಯನ್ನು ಬಾಧಿಸುತ್ತಿರುವ ಹಳದಿ ಎಲೆ ಮತ್ತು ಎಲೆ ಚುಕ್ಕಿ ರೋಗಕ್ಕೆ ಪರಿಹಾರ ನೀಡಿದರೆ ಈ ಭಾಗದ ಅಡಿಕೆ ಬೆಳೆಗಾರರನ್ನು ಉಳಿಸಬಹುದು, ಆದಷ್ಟು ಬೇಗ ಸರ್ಕಾರ ಈ ಬಗ್ಗೆ ಕೆಲಸ ಮಾಡಲಿ ಎಂದು ರೈತರು ಒತ್ತಾಯಿಸಿದ್ದಾರೆ.












Click it and Unblock the Notifications