Siddaramaiah: ಪ್ರಾಸಿಕ್ಯೂಷನ್ಗೆ ಅನುಮತಿ, ಸಿದ್ದರಾಮಯ್ಯಗೆ ಹೈಕಮಾಂಡ್ ಬೆಂಬಲ
ಬೆಂಗಳೂರು, ಆಗಸ್ಟ್ 17: ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಈ ಬೆಳವಣಿಗೆ ಸರ್ಕಾರ ಮತ್ತು ರಾಜಭವನ, ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಲಾಗುತ್ತಿದೆ.
ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ತಕ್ಷಣ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ. ಹೈಕಮಾಂಡ್ ನಾಯಕರು ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಅಭಯವನ್ನು ನೀಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಹೈಕಮಾಂಡ್ ನಿಮ್ಮ ಜೊತೆ ನಿಲ್ಲಲಿದೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಜೊತೆ ಸಭೆಯನ್ನು ನಡೆಸುವ ನಿರೀಕ್ಷೆ ಇದೆ. ಸಚಿವರು ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲಬೇಕು ಎಂದು ಈಗಾಗಲೇ ಹೈಕಮಾಂಡ್ ಸೂಚನೆ ನೀಡಿದೆ.
ರಾಜ್ಯಾದ್ಯಂತ ಹೋರಾಟ: ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ಮೈಸೂರು ಮತ್ತು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ರಾಜಭವನವನ್ನು ದುರುಪಯೋಗ ಮಾಡಿಕೊಂಡು ಸರ್ಕಾರ ಅಸ್ತಿರಗೊಳಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ಸಿಬಿಐ ಅಥವ ಬೇರೆ ಯಾವುದೇ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿ ಖಾಸಗಿ ದೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಆಗಸ್ಟ್ 20ಕ್ಕೆ ಕಾಯ್ದಿರಿಸಿದೆ.
ಈ ಕುರಿತು ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಖಾಸಗಿ ದೂರು ಸಲ್ಲಿಸಿದ್ದಾರೆ. ಈ ಕುರಿತು ಬೆಂಗಳೂರಿನ ಟಿ. ಜೆ. ಅಬ್ರಾಹಂ ಮತ್ತು ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತ ಆಲಂ ಪಾಷ ಸಹ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ರಾಜ್ಯಪಾಲರು ಸಹ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ಕೋರ್ಟ್ ಆದೇಶ ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ತನಿಖೆಗೆ ಸಹಕಾರ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ, 'ಭ್ರಷ್ಟಾಚಾರದ ಕಳಂಕ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹವಾಗಿದ್ದು, ಸಿದ್ದರಾಮಯ್ಯನವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರದರ್ಶಕ ಮತ್ತು ನಿಷ್ಪಕ್ಷವಾತದ ನ್ಯಾಯಾಂಗ ಪ್ರಕ್ರಿಯೆಗೆ ಸಹಕರಿಸಬೇಕು' ಎಂದು ಒತ್ತಾಯಿಸಿದ್ದಾರೆ.











Click it and Unblock the Notifications