Siddaramaiah: ಪ್ರಾಸಿಕ್ಯೂಷನ್‌ಗೆ ಅನುಮತಿ, ಸಚಿವ ಸಂಪುಟ ಸಭೆ ಕರೆದು ರದ್ದುಗೊಳಿಸಿದ ಸಿಎಂ!

ಬೆಂಗಳೂರು, ಆಗಸ್ಟ್ 17: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸಂಜೆ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದಿದ್ದರು. ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು.

ಶನಿವಾರ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದರು. ಎಲ್ಲಾ ಸಚಿವರು ಬೆಂಗಳೂರಿಗೆ ಆಗಮಿಸಬೇಕು ಎಂದು ಸೂಚನೆ ನೀಡಲಾಗಿತ್ತು. ಬೆಳಗಾವಿ, ವಿಜಯಪುರ, ವಿಜಯನಗರದಲ್ಲಿದ್ದ ಸಚಿವರು ಬೆಂಗಳೂರಿಗೆ ಹೊರಡುವ ತಯಾರಿ ಆರಂಭಿಸಿದ್ದರು.

Governor Issues Sanction For Prosecution CM Siddaramaiah Cancels Cabinet Meeting

ಆದರೆ ಮುಖ್ಯಮಂತ್ರಿಗಳು ವಿಶೇಷ ಸಚಿವ ಸಂಪುಟ ಸಭೆಯನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಎಐಸಿಸಿ ನಾಯಕರ ದೂರವಾಣಿ ಕರೆ ಹಿನ್ನಲೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿಗಳು ರದ್ದುಗೊಳಿಸಿದ್ದಾರೆ.

ಸಿದ್ದರಾಮಯ್ಯ ಸರಣಿ ಸಭೆಗಳು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ಗೃಹ ಕಛೇರಿ ಕೃಷ್ಣಾದಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳು ಸರಣಿ ಸಭೆಯನ್ನು ನಡೆಸುತ್ತಿದ್ದಾರೆ.

ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಭೈರತಿ ಸುರೇಶ್ ಸೇರಿದಂತೆ ಹಲವು ಸಚಿವರು ಗೃಹ ಕಛೇರಿಗೆ ಆಗಮಿಸಿದ್ದಾರೆ. ಇದು ಪ್ರತಿಪಕ್ಷಗಳ ಷಡ್ಯಂತ್ರವಾಗಿದ್ದು, ಕಾನೂನು ಹೋರಾಟದಲ್ಲಿ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಸಚಿವರು ಸಿದ್ದರಾಮಯ್ಯಗೆ ಭರವಸೆ ನೀಡುತ್ತಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, "ಸಾಂವಿಧಾನಿಕ ಹುದ್ದೆಯಲ್ಲಿರುವ ಕರ್ನಾಟಕದ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿ ಭವನ ತಕ್ಷಣವೇ ವಜಾ ಮಾಡಬೇಕು ಎಂದು ಒತ್ತಾಯಿಸುತ್ತೇನೆ" ಎಂದು ಹೇಳಿದ್ದಾರೆ.

"ಮಾನ್ಯ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ" ಎಂದು ಆರೋಪಿಸಿದ್ದಾರೆ.

"ಕಾಂಗ್ರೆಸ್ ಪಕ್ಷ ಇದರ ವಿರುದ್ಧ ರಾಜಕೀಯ ಹೋರಾಟ ಮಾಡುತ್ತದೆ ಎಂದು ಸ್ಪಷ್ಟಪಡಿಸುತ್ತೇನೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ" ಎಂದು ತಿಳಿಸಿದ್ದಾರೆ.

"ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಕುಗ್ಗಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ. ಇತ್ತೀಚೆಗೆ ದೆಹಲಿಗೆ ರಾಜ್ಯಪಾಲರನ್ನು ಕರೆಸಿಕೊಂಡು ಅವರಿಗೆ ಸ್ಪಷ್ಟ ಸೂಚನೆ ನೀಡಿ ಕಳಿಸಿದ್ದಾರೆ ಎಂಬುದು ಗೊತ್ತಾಗುತ್ತಿದೆ. ರಾಜ್ಯದ ಜನತೆ ಇದನ್ನು ಕ್ಷಮಿಸುವದಿಲ್ಲ ಕಾಂಗ್ರೆಸ್ ಪಕ್ಷ ರಾಜ್ಯಪಾಲರ ಪಕ್ಷಪಾತ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಿದೆ. ಜನರ ಬೆಂಬಲ ಸರ್ಕಾರದ ಪರವಾಗಿದೆ" ಎಂದು ಹೇಳಿದ್ದಾರೆ.

"ರಾಜ್ಯಪಾಲರ ಮುಂದೆ ಹಿಂದಿನ ಸರ್ಕಾರದ ಹಲವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಕೋರಿ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲಿ ತರಾತುರಿಯಿಂದ ಕ್ರಮ ಕೈಗೊಳ್ಳಲಾಗಿದೆ ಇದು ರಾಜಕೀಯ ಪ್ರೇರಿತ ಅಲ್ಲದೆ ಮತ್ತೇನು.?. ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಇವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತೇನೆ" ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+