ವಿಧಾನ ಪರಿಷತ್ಗೆ ಮೂವರು ಗಣ್ಯರ ನಾಮ ನಿರ್ದೇಶನ
ಬೆಂಗಳೂರು, ಅಕ್ಟೋಬರ್ 30 : ವಿಧಾನ ಪರಿಷತ್ತಿಗೆ ಮೂವರು ಸದಸ್ಯರನ್ನು ನಾಮ ನಿರ್ದೇಶನಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಇಬ್ಬರು ಕಾಂಗ್ರೆಸ್ ಮತ್ತು ಒಬ್ಬರು ಆಂಗ್ಲೋ ಇಂಡಿಯನ್ ಸದಸ್ಯರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಸರ್ಕಾರ ಕಳುಹಿಸಿದ್ದ ನಾಮ ನಿರ್ದೇಶಿತರ ಪಟ್ಟಿಗೆ ಮಂಗಳವಾರ ರಾಜ್ಯಪಾಲ ವಜುಭಾಯಿ ವಾಲಾ ಅವರು ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ನಿಂದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರ ಹೆಸರು ಕೇಳಿಬಂದಿತ್ತು, ಕೊನೆ ಕ್ಷಣದಲ್ಲಿ ಅವರನ್ನು ಕೈ ಬಿಡಲಾಗಿದೆ.
ಸಮಾಜ ಸೇವೆ ಮತ್ತು ಕ್ರೀಡಾ ವಿಭಾಗದಲ್ಲಿ ಮಾಡಿದ ಸಾಧನೆ, ಸೇವೆಯನ್ನು ಪರಿಗಣಿಸಿ ನಾಮ ನಿರ್ದೇಶನ ಮಾಡಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಆದರೆ, ಎರಡು ಸ್ಥಾನಗಳನ್ನು ಜೆಡಿಎಸ್ ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದೆ.
ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಮ ನಿರ್ದೇಶಿತರ ಪಟ್ಟಿಯನ್ನು ಸಿದ್ಧಪಡಿಸಿ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದರು. ರಾಜ್ಯಪಾಲರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ.

ಯು.ಬಿ.ವೆಂಕಟೇಶ್
ಸಮಾಜ ಸೇವೆ ಕ್ಷೇತ್ರದಿಂದ ಹಿರಿಯ ಕಾಂಗ್ರೆಸ್ ನಾಯಕರ ಯು.ಬಿ.ವೆಂಕಟೇಶ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಪ್ತರಾದ ಯು.ಬಿ.ವೆಂಕಟೇಶ್ 2013ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಜಯನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಪ್ರಕಾಶ್ ರಾಥೋಡ್
ಕ್ರೀಡಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪ್ರಕಾಶ್ ರಾಥೋಡ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿದೆ. ಇವರು ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು.

ವಿನಿಶಾ ನಿರೋ ನೇಮಕ
ಆಂಗ್ಲೋ ಇಂಡಿಯನ್ ಕೋಟಾ ದಡಿ ವಿನಿಶಾ ನಿರೋ ಅವರು ವಿಧಾನ ಪರಿಷತ್ಗೆ ನಾಮ ನಿರ್ದೇಶನಗೊಂಡಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ವಿಧಾನ ಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು. ಈಗ ಪರಿಷತ್ಗೆ ನಾಮ ನಿರ್ದೇಶನಗೊಳ್ಳುವ ಮೂಲಕ 2ನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.

ಮೈತ್ರಿ ಅಭ್ಯರ್ಥಿ
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಆಂಗ್ಲೋ ಇಂಡಿಯನ್ ನಾಮ ನಿರ್ದೇಶನ ಮೊದಲು ಕಾಂಗ್ರೆಸ್ ಕೈಯಲ್ಲಿತ್ತು. ಆದರೆ, ಈಗ ಸಮ್ಮಿಶ್ರ ಸರ್ಕಾರ ಬಂದ ಮೇಲೆ ಸ್ಥಾನವನ್ನು ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು.












Click it and Unblock the Notifications