ಕೋವಿಡ್ - 19; ಸಾರಿಗೆ ಸಂಸ್ಥೆ ನೌಕರರಿಗೆ ಪರಿಹಾರ ಘೋಷಣೆ
ಬೆಂಗಳೂರು, ಮೇ 18 : ಕರ್ನಾಟಕ ಸರ್ಕಾರ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಿದೆ. ಹಲವು ಷರತ್ತುಗಳ ಜೊತೆಗೆ ಸರ್ಕಾರಿ ಬಸ್ಗಳ ಸಂಚಾರಕ್ಕೆ ಅನುಮತಿ ನೀಡಿದೆ. ಚಾಲಕರು, ನಿರ್ವಾಹಕರು ಮಂಗಳವಾರದಿಂದ ಕೆಲಸ ಆರಂಭಿಸಲಿದ್ದಾರೆ.
ಕೊರೊನಾ ಭೀತಿಯ ನಡುವೆಯೇ ಚಾಲಕರು, ನಿರ್ವಾಹಕರು ಕೆಲಸ ಮಾಡಬೇಕಿದೆ. ಸಾರಿಗೆ ಸಚಿವ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಾರಿಗೆ ಸಂಸ್ಥೆಗಳ ನೌಕರರಿಗೆ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಉದ್ಯೋಗಿಗಳು ಕರ್ತವ್ಯದಲ್ಲಿರುವ ಕೋವಿಡ್ - 19ನಿಂದ ಮೃತಪಟ್ಟರೆ ಪರಿಹಾರ ಸಿಗಲಿದೆ.
'ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಮೇಲಿದ್ದಾಗ ಕೋವಿಡ್ - 19 ಸೋಂಕಿಗೆ ತುತ್ತಾಗಿ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 30 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ" ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರಿಗೆ ಇಲಾಖೆಯಿಂದ ಈ ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ. ಮೇ 19ರಿಂದ ಸಾರಿಗೆ ಸಂಸ್ಥೆಗಳ ಬಸ್ಗಳು ಕಾರ್ಯ ನಿರ್ವಹಣೆ ಮಾಡಲಿದ್ದು, ಈ ಸಂದರ್ಭದಲ್ಲಿ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾರಿಗೆ ಸಂಸ್ಥೆಗಳ ಎಲ್ಲಾ ಚಾಲಕರು, ನಿರ್ವಾಹಕರು ಮತ್ತು ಸಿಬ್ಬಂದಿಗಳು ಗಮನಹರಿಸುವ ಮೂಲಕ ಕೋವಿಡ್ - 19 ರೋಗವನ್ನು ತಡೆಗಟ್ಟಲು ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಪ್ರಯಾಣಿಕರು ಕೂಡಾ ಬಸ್ಗಳಲ್ಲಿ ಸಂಚಾರ ನಡೆಸುವಾಗ ಮಾಸ್ಕ್ ಧರಿಸಬೇಕು. ನಿಲ್ದಾಣಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಈ ಮೂಲಕ ಸರ್ಕಾರದ ಜೊತೆಗೆ ಸಹಕಾರ ನೀಡಬೇಕು ಎಂದು ಸಚಿವರು ಕೋರಿದ್ದಾರೆ.












Click it and Unblock the Notifications