Breaking: ಜಿಂದಾಲ್ ಕಂಪನಿಗೆ ನೀಡಿದ್ದ ಜಮೀನನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಬೆಂಗಳೂರು, ಮೇ 27: ಜಿಂದಾಲ್ ಕಂಪನಿಗೆ ಈಗಾಗಲೇ ಹಸ್ತಾಂತರ ಮಾಡಿದ್ದ ಜಮೀನನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಳ್ಳಾರಿಯ ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿಯನ್ನು ಮಾರಾಟ ಮಾಡಿತ್ತು, ಆದರೆ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭೂಮಿಯನ್ನು ಹಿಂಪಡೆಯುವ ನಿರ್ಧಾರಕ್ಕೆ ಸರ್ಕಾರ ಬಂದಿದೆ.
ಈ ಸಂಸ್ಥೆಯಿಂದ ರಾಜ್ಯ ಸರ್ಕಾರಕ್ಕೆ 1078 ಕೋಟಿ ರೂ.ಗಳ ರಾಜಧನ ಬರಬೇಕಾಗಿದೆ ಎಂದು ತಿಳಿದುಬಂದಿದೆ, ಈ ಕುರಿತು ಹೈಕೋರ್ಟ್ , ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿಯನ್ನು ರಾಜ್ಯ ಸರ್ಕಾರು ಕೆಲವು ತಿಂಗಳುಗಳ ಹಿಂದಷ್ಟೇ ಹಸ್ತಾಂತರ ಮಾಡಿತ್ತು. ಸರ್ಕಾರಿ ಜಮೀನನ್ನು ಖಾಸಗಿ ಕಂಪನಿಗೆ ನೀಡಿರುವ ಕುರಿತು ಸಾಕಷ್ಟು ವಿರೋಧಗಳು ಕೇಳಿಬಂದಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ನೀಡಿದ್ದ ಜಮೀನನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ.
Recommended Video
ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ ಕಡಿಮೆ ದರದಲ್ಲಿ ಜಮೀನು ಮಾರಾಟ ಮಾಡಿರುವುದಕ್ಕೆ ಪಕ್ಷದಲ್ಲಿ ಸಾಕಷ್ಟು ವಿರೊಧಗಳು ವ್ಯಕ್ತವಾಗಿದ್ದವು. ಅಲ್ಲದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ ಸೇರಿದಂತೆ ಅನೇಕ ಶಾಸಕರು ಕಡಿಮೆ ದರದಲ್ಲಿ ಜಮೀನು ಮಾರಾಟ ಮಾಡಿರುವುದರಿಂದ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಹೇಳಿದ್ದರು.