ಕಮಿಷನ್ ಹೆಸರಲ್ಲಿ ಖಜಾನೆ ಲೂಟಿ, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ!
ಬೆಂಗಳೂರು, ಅಕ್ಟೋಬರ್ 21: ರಾಜ್ಯದ ಸರ್ಕಾರಿ ಶಾಲೆಗಳಿಗೆ ರಾಜಕಳೆ ನೀಡಬೇಕಾದರೆ ಪೋಷಕರು ಪ್ರತಿ ತಿಂಗಳಿಗೆ 100 ರೂಪಾಯಿ ಹಣವನ್ನು ದೇಣಿಗೆಯಾಗಿ ನೀಡಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ 100 ರೂಪಾಯಿ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸರ್ಕಾರಿ ಶಾಲೆಯ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ ಹಾಕುತ್ತಿರುವ ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು" ಎಂದಿದ್ದಾರೆ.
ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರವೂ ಅನುದಾನವನ್ನು ಬಿಡುಗಡೆ ಮಾಡುತ್ತದೆ. ಇದರ ಜೊತೆಗೆ ಶಾಲೆಗಳ ಸ್ಥಳೀಯ ಅವಶ್ಯಕತೆಯನ್ನು ಪೂರೈಸಲು ಹೆಚ್ಚಿನ ಹಣಕಾಸಿನ ನೆರವು ಅಗತ್ಯವಾಗಿರುತ್ತದೆ. ಅನೇಕ ಸಂದರ್ಭದಲ್ಲಿ ಅನುದಾನ ಇಲ್ಲದೇ ಕೊರತೆಯಾದಲ್ಲಿ ಶಾಲಾಭಿವೃದ್ಧಿ ಸಮಿತಿಯು ತನ್ನ ಕರ್ತವ್ಯವನ್ನು ನಿರ್ವಹಿಸಬೇಕಾಗುತ್ತದೆ ಎಂದಿರುವ ಸರ್ಕಾರ, ಪೋಷಕರು ತಿಂಗಳಿಗೆ 100 ರೂಪಾಯಿ ದೇಣಿಗೆ ನೀಡುವಂತೆ ತಿಳಿಸಿದೆ.
ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ @BJP4Karnataka ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ.
— Siddaramaiah (@siddaramaiah) October 21, 2022
ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..!
ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು. 1/5#SaveStudents pic.twitter.com/1eAq6gV3k6

ವೇದಿಕೆ ಮೇಲೆ ದಮ್ಮು ತಾಕತ್ ಎನ್ನುವವರು ಹಣ ಬಿಡುಗಡೆ ಮಾಡಲಿ!
ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, "ವಿದ್ಯಾರ್ಥಿಗಳಿಗೆ ಹಾಲು, ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಕರ್ನಾಟಕ ಬಿಜೆಪಿ ಸರ್ಕಾರ ಈಗ ಅವರಿಂದ ದುಡ್ಡುಕಿತ್ತುಕೊಳ್ಳಲು ಹೊರಟಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂದುವರಿದು "ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ" ಎಂದು ಸವಾಲು ಹಾಕಿದ್ದಾರೆ.

ಪೋಷಕರಿಂದ ಹಣ ಸಂಗ್ರಹಿಸುವ ಆದೇಶ ಹಿಂಪಡೆಯಿರಿ; ಸಿದ್ದರಾಮಯ್ಯ
"ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು, ಶೂ ಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ" ಎಂದಿದ್ದಾರೆ.
"ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು" ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಕ್ಕಳ ಪೋಷಕರಿಂದ ₹100 ದೇಣಿಗೆ ಸಂಗ್ರಹ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತಿಚೆಗೆ ಇಶಾ ಫೌಂಡೇಶನ್ಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಜಗ್ಗಿ ವಾಸುದೇವ್ ಅವರಿಗೆ ಹಸ್ತಾಂತರಿಸಿದ್ದರು. ಇದನ್ನು ಪ್ರಶ್ನಿಸಿರುವ ಕರ್ನಾಟಕ ಕಾಂಗ್ರೆಸ್ "ಇಶಾ ಫೌಂಡೇಶನ್ಗೆ ₹100 ಕೋಟಿ ಅನುದಾನ ನೀಡಿ ವ್ಯರ್ಥ ಮಾಡುವ ಸರ್ಕಾರ ಮಕ್ಕಳ ಪೋಷಕರಿಂದ ₹100 ಪೀಕಲು ಹೊರಟಿದ್ದೇಕೆ..? ಖಜಾನೆಯ ಗಂಟು ಲೂಟಿಕೊರರಿಗೆ ಮಾತ್ರವೇ..? ಶಾಲೆಗಳ ಅಭಿವೃದ್ಧಿಪಡಿಸುವ ಯೋಗ್ಯತೆ ಸರ್ಕಾರಕ್ಕಿಲ್ಲವೇ? ಶಿಕ್ಷಣ ಹಕ್ಕನ್ನು ಕಸಿಯುವ ಹುನ್ನಾರವಲ್ಲವೇ ಇದು..? ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಆದ್ಯತೆ ಮಕ್ಕಳೊ..? ಲೂಟಿಕೋರರೋ..? ಎಂದು ಚಾಟಿ ಬೀಸಿದೆ.

'ನಮ್ಮ ಶಾಲೆ ನನ್ನ ಕೊಡುಗೆ' ಯೋಜನೆಗೆ ಭಾರೀ ವಿರೋಧ
ರಾಜ್ಯ ಸರ್ಕಾರದ ಆದೇಶಕ್ಕೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಎಲ್ಲಾ ಟ್ವೀಟ್ಗಳಲ್ಲಿ ವಿದ್ಯಾರ್ಥಿಗಳನ್ನು ಉಳಿಸಿ (#SaveStudents) ಎಂಬ ಹ್ಯಾಶ್ಟ್ಯಾಗ್ ಬಳಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಅನಿರೀಕ್ಷಿತವಾಗಿ ಉಂಟಾಗುವ ಸಣ್ಣ ಪ್ರಮಾಣದ ದುರಸ್ತಿ, ಶಾಲಾ ಶುಚಿತ್ವ, ಶಾಲಾ ಶೈಕ್ಷಣಿಕ ಚಟುವಟಿಕೆಗಳು ಸೇರಿದಂತೆ ಇತ್ಯಾದಿ ವೆಚ್ಚಗಳಿಗೆ ಸಹಕಾರಿ ಆಗಲೆಂದು ಶಾಲಾ ಶೈಕ್ಷಣಿಕ ಅಭಿವೃದ್ಧಿಗಾಗಿ 'ನಮ್ಮ ಶಾಲೆ ನನ್ನ ಕೊಡುಗೆ' ಎಂಬ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಕೊಡುಗೆ, ದಾನದ ರೂಪದಲ್ಲಿ ಆರ್ಥಿಕ ಸಹಾಯ ಪಡೆಯಲು ಅನುಮತಿ ನೀಡಲಾಗಿದೆ.












Click it and Unblock the Notifications