ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವರ್ಗಾವಣೆ, ಜಟಾಪಟಿ
ಬೆಂಗಳೂರು, ನವೆಂಬರ್ 09; ಕರ್ನಾಟಕ ಸರ್ಕಾರ ಹಲವು ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುತ್ತದೆ. ಈಗ ಮಾಡಿರುವ ಒಂದು ವರ್ಗಾವಣೆ ಭಾರೀ ಚರ್ಚೆಗೆ ಕಾರಣವಾಗಿವೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಸಿ. ಎಸ್. ಷಡಾಕ್ಷರಿ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದರು. ಸರ್ಕಾರ ಅವರನ್ನು ಕೋಲಾರದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕ ಹುದ್ದೆಗೆ ವರ್ಗಾವಣೆ ಮಾಡಿದೆ.

ವರ್ಗಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿ. ಎಸ್. ಷಡಾಕ್ಷರಿ, "ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರನ್ನು ವರ್ಗಾವಣೆ ಮಾಡಲಾಗಿದೆ. ಯಾವ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂಬುದು ನನಗೆ ಗೊತ್ತಿಲ್ಲ" ಎಂದು ಹೇಳಿದ್ದಾರೆ.
ಮಧು ಬಂಗಾರಪ್ಪ ಪತ್ರ; 2023ರ ವಿಧಾನಸಭೆ ಚುನಾವಣೆ ಸಮಯದಿಂದಲೂ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಮತ್ತು ಸಿ. ಎಸ್. ಷಡಾಕ್ಷರಿ ನಡುವೆ ಜಟಾಪಟಿ ನಡೆದಿತ್ತು. ಬಹಿರಂಗವಾಗಿ ಇಬ್ಬರೂ ಸಹ ಹೇಳಿಕೆಗಳನ್ನು ನೀಡಿದ್ದರು.
ಈಗ ಚುನಾವಣೆ ಮುಗಿದು ಸೊರಬದಿಂದ ಮಧು ಬಂಗಾರಪ್ಪ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದಾರೆ. ಅಲ್ಲದೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಅವರೇ. ಹಿಂದಿನ ಜಟಾಪಟಿಯೇ ಈ ವರ್ಗಾವಣೆಗೆ ಕಾರಣ ಎಂಬ ಸುದ್ದಿ ಹಬ್ಬಿದೆ.
ಶಿವಮೊಗ್ಗ ನಗರ ತಾಲೂಕಿನ ಅಬ್ಬಲಗೆರೆ ಕೆರೆಯ ಮಣ್ಣನ್ನು ಅಕ್ರಮವಾಗಿ ತೆಗೆದು ಸರ್ಕಾರಕ್ಕೆ ಸುಮಾರು 70 ಲಕ್ಷ ರೂ. ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪ ಸಿ. ಎಸ್. ಷಡಾಕ್ಷರಿ ಅವರ ಮೇಲಿತ್ತು. ಷಡಾಕ್ಷರಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೆಪ್ಟೆಂಬರ್ನಲ್ಲಿ ಪತ್ರವನ್ನು ಬರೆದಿದ್ದರು. ಇದರ ಅನ್ವಯ ವರ್ಗಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮತ್ತೊಂದು ಕಡೆ ಕರ್ನಾಟಕ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಂತೆ ಆಯೋಗದ ಅವಧಿ ದಿನಾಂಕ 18/11/2023ಕ್ಕೆ ಕೊನೆಗೊಳ್ಳುತ್ತಿದ್ದು, ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ, ಆಯೋಗದ ಕಾಲಾವಧಿಯನ್ನು ದಿನಾಂಕ 15/3/2024ರವರೆಗೆ ವಿಸ್ತರಿಸಲಾಗಿದೆ. ಇದರಿಂದಾಗಿ ಸರ್ಕಾರಿ ನೌಕರರು ಅಸಮಾಧಾನಗೊಂಡಿದ್ದಾರೆ. ಆದ್ದರಿಂದ ಸಿ. ಎಸ್. ಷಡಾಕ್ಷರಿ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನೂ ಮಣ್ಣು ಸಾಗಣೆ ಬಗ್ಗೆ ಜಿಲ್ಲಾಧಿಕಾರಿಗಳು ನಡೆಸಿದ ತನಿಖಾ ವರದಿಯಲ್ಲಿ ಸಿ. ಎಸ್. ಷಡಾಕ್ಷರಿ ಮೇಲಿದ್ದ ಆರೋಪವನ್ನು ನಿರಾಕಿಸಲಾಗಿತ್ತು. ಆದರೆ ಈಗ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರನ್ನು ವರ್ಗಾವಣೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮಣ್ಣು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ. ಎಸ್. ಷಡಾಕ್ಷರಿ ಮಾತನಾಡಿ, "ಶಿವಮೊಗ್ಗದ ಮಣ್ಣು ಸಾಗಾಟ ಪ್ರಕರಣದಲ್ಲಿ ತನಗೆ ಯಾವುದೇ ಪಾಲುದಾರಿಕೆ ಇಲ್ಲ. ಇದನ್ನು ಲೋಕಾಯುಕ್ತ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯೂ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದೆ" ಎಂದು ಹೇಳಿದ್ದಾರೆ.
"ಆದರೆ ಸಚಿವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಏಕೆ ಎನ್ನುವ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಸರ್ಕಾರಿ ನೌಕರರ ಪರವಾಗಿ ನನ್ನ ಹೋರಾಟ ಸದಾ ಜಾರಿಯಲ್ಲಿ ಇದ್ದೇ ಇರುತ್ತದೆ" ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರನ್ನು ವರ್ಗಾವಣೆ ಮಾಡಿದ ಉದಾಹರಣೆ ಇದುವರೆಗೂ ಇರಲಿಲ್ಲ. ರಾಜ್ಯದ ಯಾವ ಭಾಗಕ್ಕೆ ಅಧ್ಯಕ್ಷರನ್ನು ವರ್ಗಾವಣೆ ಮಾಡಿದರೂ, ಅವರು ಹುದ್ದೆಯಲ್ಲಿ ಮುಂದುವರಿಯಲು ಅವಕಾಶವಿದೆ. ಯಾವುದೇ ಪದನಾಮದಲ್ಲಿದ್ದರೂ ಪ್ರತಿದಿನ ಕೆಲಸಕ್ಕಾಗಿ ಅವರು ಕಛೇರಿಗೆ ಹೋಗಬೇಕಾದ ಅವಶ್ಯಕತೆಗಳು ಇಲ್ಲ. ಅವರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶವಿದೆ.












Click it and Unblock the Notifications