ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಸರ್ಕಾರದ ಕೊವಿಡ್-19 ಮಾರ್ಗಸೂಚಿ
ಬೆಂಗಳೂರು, ಅಕ್ಟೋಬರ್ 30: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 3ನೇ ಅಲೆ ಮತ್ತು ರೂಪಾಂತರ ವೈರಸ್ ಭೀತಿ ನಡುವೆ ದೀಪಾವಳಿ ಆಚರಣೆಗೆ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
ಶನಿವಾರ ಅಧಿಕೃತವಾಗಿ ಬಿಡುಗಡೆಗೊಳಿಸಿರುವ ಕೊವಿಡ್-19 ಮಾರ್ಗಸೂಚಿಗಳಲ್ಲಿ ಯಾವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂಬುದರ ಬಗ್ಗೆ ವಿವರಿಸಲಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಪಟಾಕಿಗಳ ಮಾರಾಟ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಮಾರ್ಗಸೂಚಿ:
* ಸರ್ವೋಚ್ಛ ನ್ಯಾಯಾಲಯ ನಿರ್ದೇಶನಗಳಲ್ಲಿ ಅನುಮತಿಸಲಾದ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ, ಹಚ್ಚುವಂತಿಲ್ಲ.
* ಸಂಬಂಧಪಟ್ಟ ಇಲಾಖೆ ಮತ್ತು ಪ್ರಾಧಿಕಾರದಿಂದ ಪರವಾನಗಿ ಪಡೆದಿರುವ ವ್ಯಾಪಾರಿಗಳು ಸಹ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡತಕ್ಕದ್ದು.
* ನವೆಂಬರ್ 1 ರಿಂದ 10ರವರೆಗೂ ಮಾತ್ರ ಹಸಿರು ಪಟಾಕಿಗಳ ಮಳಿಗೆಗಳನ್ನು ತೆರೆಯತಕ್ಕದ್ದು.
* ಪರವಾನಗಿದಾರರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಪ್ರಾಧಿಕಾರಗಳಿಂದ ನೀಡಿರುವ ಪರವಾನಗಿಯಲ್ಲಿ ಉಲ್ಲೇಖಿಸಿದ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಹಸಿರು ಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳಗಳಲ್ಲಿ ಹಾಗೂ ದಿನಾಂಕಗಳಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯುವಂತಿಲ್ಲ.
* ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಹಾಗೂ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯುವುದಕ್ಕೆ ಮಾತ್ರ ಸಂಬಂಧಿತ ಅಧಿಕಾರಿಗಳು ಹಾಗೂ ಪ್ರಾಧಿಕಾರಗಳು ಅನುಮತಿ ನೀಡಬೇಕು.
* ಪಟಾಕಿ ಮಳಿಗೆಗಳಲ್ಲಿ ಎರಡೂ ಕಡೆಗಳಿಂದ ಸರಾಗವಾಗಿ ಗಾಳಿ ಆಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆ ನಡುವೆ ಕನಿಷ್ಠ 6 ಮೀಟರ್ ಅಂತರವಿರಬೇಕು.
* ಪ್ರತಿಯೊಂದು ಮಳಿಗೆಯಲ್ಲಿ ಸಂಬಂಧಿಸಿದ ಇಲಾಖೆ ಅಥವಾ ಪ್ರಾಧಿಕಾರವು ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪಡೆದವರು ಕಡ್ಡಾಯವಾಗಿ ಮಳಿಗೆಯಲ್ಲಿ ಹಾಜರಿರಬೇಕು.
* ಹಸಿರು ಪಟಾಕಿ ಮಾರಾಟ ಮಾಡುವ ಪ್ರತಿಯೊಂದು ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತು ಮಾಡುವುದು. ಸಾಮಾಜಿಕ ಅಂತರ ನಿಯಮ ಪಾಲನೆ ಆಗುವಂತೆ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳುವುದು. ಪಟಾಕಿ ಮಾರಾಟ ಮಾಡುವ ವ್ಯಾಪಾರಸ್ಥರು ಹಾಗೂ ಖರೀದಿಗೆ ಆಗಮಿಸುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.
* ಹಸಿರುವ ಪಟಾಕಿ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು
* ಹಸಿರು ಪಟಾಕಿ ಕುರಿತು ಸರ್ಕಾರದ ಆದೇಶ ಸಂಖ್ಯೆ ಆರ್ ಡಿ 465 ಡಿಎನ್ಆರ್ 2020, ದಿನಾಂಕ 12 ನವೆಂಬರ್ 2020ರಂದು ನೀಡಲಾದ ವಿವರಣೆಯನ್ನು ಅನುಸರಿಸುವುದು.
* ಕೊವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಮತ್ತು ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ ಮತ್ತು ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಮತ್ತು ಮಾರ್ಗಸೂಚಿಗಳನ್ನು ಸಹ ಕಟ್ಟುನಿಟ್ಟಾಗಿ ಪಾಲಿಸಬೇಕು.
* ರಾಷ್ಟ್ರೀಯ ನಿರ್ದೇಶಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.