ಡಿಸಿ ತಮ್ಮಣ್ಣ ಭೂ ಕಬಳಿಕೆ, ಇಲಾಖೆ ಅಫಿಡವಿಟ್ಗೆ ಕೋರ್ಟ್ ಬೇಸರ
ಕರ್ನಾಟಕ ಹೈಕೋರ್ಟ್ ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರದ ಭೂಮಿ ಕಬಳಿಕೆ ಪ್ರಕರಣ ಸಂಬಂಧ ಸಲ್ಲಿಸಿರುವ ಅಫಿಡವಿಟ್ಗೆ ಬೇಸರ ವ್ಯಕ್ತಪಡಿಸಿದೆ..
ಬೆಂಗಳೂರು, ಫೆಬ್ರವರಿ 21; ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಮದ್ದೂರು ಜೆಡಿಎಸ್ ಶಾಸಕ ಡಿ. ಸಿ. ತಮ್ಮಣ್ಣ ಮತ್ತಿತರರಿಂದ ಸರ್ಕಾರದ ಭೂಮಿ ಕಬಳಿಕೆ ಪ್ರಕರಣ ಸಂಬಂಧ ಕಂದಾಯ ಇಲಾಖೆಯ ಕಾರ್ಯದರ್ಶಿ ಸಲ್ಲಿಸಿರುವ ಅಫಿಡವಿಟ್ಗೆ ಕರ್ನಾಕಟ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.
ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್. ಆರ್. ಹಿರೇಮಠ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಕುರಿತು ನ್ಯಾಯಮೂರ್ತಿಗಳಾದ ಬಿ. ವೀರಪ್ಪ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಕಂದಾಯ ಇಲಾಖೆ ಕಾರ್ಯದರ್ಶಿ ಅಫಿಡವಿಟ್ನಲ್ಲಿ ಉಲ್ಲೇಖಿಸಿರುವ ವಿಚಾರಗಳು ಮತ್ತು ಅದರಲ್ಲಿನ ಅಂಶಗಳು ಸಮರ್ಪಕವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅರ್ಜಿಯ ವಿಚಾರಣೆ ವೇಳೆ ಹೇಳಿತು.

ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ 7, 8, 9, 10, 16, 17 ಮತ್ತು 79ರ ಸರ್ವೆ ನಂಬರ್ಗಳಲ್ಲಿನ ಜಮೀನು ಪರಿಶೀಲಿಸಿ ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಅವರು ಕೆಲವು ವಿಚಾರಗಳು ಮತ್ತು ವಾಸ್ತವಿಕ ಅಂಶಗಳನ್ನು ದಾಖಲಿಸಿದ್ದಾರೆ ಎಂದು 2023ರ ಫೆಬ್ರವರಿ 6ರಂದು ಕೋರ್ಟ್ಗೆ ಸಲ್ಲಿಸಲಾದ ಅಫಿಡವಿಟ್ನಲ್ಲಿ ತಿಳಿಸಲಾಗಿದೆ.
ಅಲ್ಲದೇ, ಅಫಿಡವಿಟ್ನಲ್ಲಿ ಸರ್ವೆ ನಂಬರ್ 79 ಹೊರತುಪಡಿಸಿ ಕೇವಲ ಆರು ಸರ್ವೆ ನಂಬರ್ಗಳನ್ನು ಮಾತ್ರ ಉಲ್ಲೇಖಿಸಲಾಗಿದೆ. 8, 9, 10, 16 ಮತ್ತು 79ರ ಸರ್ವೆ ನಂಬರ್ಗಳಲ್ಲಿ ಒಟ್ಟು 14 ಎಕರೆ 4 ಗುಂಟೆ ಇದೆ ಎಂದು ಹೇಳಲಾಗಿದೆ.
ಸರ್ಕಾರದ ಭೂಮಿ ಒತ್ತುವರಿ ತೆರವು ಮಾಡುವಂತೆ ತಹಶೀಲ್ದಾರ್ ಒತ್ತುವರಿ ಮಾಡಿಕೊಂಡಿರುವವರಿಗೆ ನೋಟಿಸ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಒತ್ತುವರಿದಾರರು ಉಪವಿಭಾಗಧಿಕಾರಿ ಅವರಿಗೆ ಮೇಲ್ಮನವಿ ಸಲ್ಲಿಸಿದ್ದು, ಇದನ್ನು ವಜಾ ಮಾಡಿ, 14 ಎಕರೆ 4 ಗುಂಟೆ ಜಾಮೀನು ಒತ್ತುವರಿ ಮಾಡಲಾಗಿದೆ. ಉಪವಿಭಾಗಾಧಿಕಾರಿಯ ಆದೇಶವನ್ನು ಜಿಲ್ಲಾಧಿಕಾರಿ ಎತ್ತಿ ಹಿಡಿದಿದ್ದಾರೆ ಎಂದು ಅಫಿಡವಿಟ್ನಲ್ಲಿ ವಿವರಿಸಲಾಗಿದೆ.
ಸರ್ಕಾರದ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿರುವವರು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮಕೈಗೊಳ್ಳಬೇಕು. 4 ತಿಂಗಳಲ್ಲಿ ಈ ಕ್ರಮವಾಗಬೇಕು. ಆನಂತರ 15 ದಿನಗಳಲ್ಲಿ ರಿಜಿಸ್ಟ್ರಾರ್ ಅನುಪಾಲನಾ ವರದಿ ಸಲ್ಲಿಸುವಂತೆ ಲೋಕಾಯುಕ್ತರು 2014ರ ಆಗಸ್ಟ್ 4ರಂದು ಆದೇಶಿಸಿದ್ದರು. ಇದನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಎತ್ತಿ ಹಿಡಿದಿತ್ತು. ಈ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿತ್ತು.












Click it and Unblock the Notifications