ಸರ್ಕಾರಿ ಭೂಮಿ ಒತ್ತುವರಿ ತೆರವು: ಅಧಿಕಾರಿಗಳ ವಿರುದ್ಧ ಕೋರ್ಟ್ ಕಿಡಿ
ಬೆಂಗಳೂರು, ಸೆಪ್ಟೆಂಬರ್ 12; ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ಆ ಜಾಗದಲ್ಲಿ ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತೆರವುಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಮತ್ತೆ ಕಿಡಿ ಕಾರಿದೆ. ಅಲ್ಲದೆ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು, ಇಲ್ಲವಾದರೆ ಏನೂ ಪ್ರಯೋಜನವಿಲ್ಲ ಎಂದು ಕೋರ್ಟ್ ನಿರ್ದೇಶನ ನೀಡಿದೆ.
ಒತ್ತುವರಿ ತೆರವು ಸಂಬಂಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರ್ಲೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಆದೇಶ ಮಾಡಿತು. ಸರಕಾರ ಮತ್ತು ಬೆಂಗಳೂರು ಜಿಲ್ಲಾಧಿಕಾರಿಗೆ ಕ್ರಮ ಕೈಗೊಂಡಿರುವ ಬಗ್ಗೆ 4 ವಾರಗಳಲ್ಲಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ. ದಯಾನಂದ್, ವಿಶೇಷ ಭೂಸ್ವಾಧೀನ ಅಧಿಕಾರಿ ವಿಚಾರಣೆ ವೇಳೆ ಖುದ್ದು ಹಾಜರಿದ್ದರು.

ಒತ್ತುವರಿದಾರರಿಗೆ ನೋಟಿಸ್ ಜಾರಿ: ಸರ್ಕಾರಿ ವಕೀಲರು ಕಳೆದ ಬಾರಿ ವಿಚಾರಣೆ ವೇಳೆ ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ 1.09 ಎಕರೆ ಸರಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಕಟ್ಟಡದ ಮಾಲೀಕರಿಗೆ ನಿಯಮದಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ನೋಟಿಸ್ ನೀಡಲಾಗಿದೆ. ಆ ಕುರಿತು ಇನ್ನೂ ಪ್ರತಿವಾದಿಗಳು ಉತ್ತರ ನೀಡಿಲ್ಲ. ಪ್ರಕರಣದ ಎಲ್ಲ ಮಾಹಿತಿಯನ್ನು ವರದಿಯ ರೂಪದಲ್ಲಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ನ್ಯಾಯಾಲಯ ಕೆಲ ಕಾಲ ವಾದ ಆಲಿಸಿದ ನಂತರ, ಅಧಿಕಾರಿಗಳೇ ಇದಕ್ಕೆ ಕಾರಣ. ಅಧಿಕಾರಿಗಳ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು. ಒಂದೆಡೆ ಒತ್ತುವರಿ ತೆರವು ಕಾರ್ಯ ಮಾಡುವ ಜತೆಗೆ ತಪ್ಪಿತಸ್ಥ ಅಧಿಕಾರಿಗಳು ಯಾರೆಂದು ಗುರುತಿಸಿ ಅವರಿಂದ ದಂಡ ವಸೂಲು ಮಾಡಲು ಸರಕಾರ ಮುಂದಾಗಬೇಕು. ಇಲ್ಲವಾದರೆ ಇಂತಹ ಪ್ರಕರಣಗಳು ಮರುಕಳಿಸುತ್ತಲೇ ಇರುತ್ತವೆ ಎಂದು ಹೇಳಿತು.
ಸರಕಾರಿ ಭೂಮಿ ದುರುಪಯೋಗವಾಗುವುದನ್ನು ತಡೆಯಬೇಕು. ಇಂತಹ ಪ್ರಕರಣಗಳಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ, ಹಾಗಾಗಿ ಸರಕಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಾಗಲೇಬೇಕು ಎಂದು ಹೇಳಿದ ನ್ಯಾಯಾಲಯ, ಅದೇ ರೀತಿ ಯಾರು ಸರಕಾರಿ ಭೂಮಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿರುತ್ತಾರೋ ಅಂತಹ ಮಾಲೀಕರು ಅಥವಾ ಆ ಕಟ್ಟಡಗಳ ವಾಸಿಗಳು ಕ್ರಮದಿಂದ ತಪ್ಪಿಸಿಕೊಳ್ಳಬಾರದು. ಅವರಿಗೆ ನೋಟಿಸ್ ನೀಡಿ ಕಾನೂನು ರೀತಿ ಕ್ರಮ ಜರುಗಿಬಸಬೇಕು ಎಂದು ಸೂಚನೆ ನೀಡಿತು.
ಈ ಪ್ರಕರಣ ಒಂದು ಸಣ್ಣ ಉದಾಹರಣೆಯಷ್ಟೇ ಇಂತಹ ನೂರಾರು ಪ್ರಕರಣಗಳಿದ್ದು, ಹಾಗಾಗಿ ಸರ್ಕಾರಿ ಯಂತ್ರ ಈ ವಿಚಾರದ ಬಗ್ಗೆ ಗಂಭೀರ ಗಮನಹರಿಸಿ ಕ್ರಮ ಕೈಗೊಂಡು ನ್ಯಾಯಾಲಯ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿತು.












Click it and Unblock the Notifications