ಆಂಬಿಡೆಂಟ್ ಪ್ರಕರಣ ಸಿಐಡಿಗೆ?, ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ
ಬೆಂಗಳೂರು, ನವೆಂಬರ್ 15 : ಆಂಬಿಡೆಂಟ್ ವಂಚನೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸುವ ಸಾಧ್ಯತೆ ಇದೆ. ಸಿಸಿಬಿ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದು, ಹಲವು ವಿವಾದಗಳಿಗೆ ಕಾರಣವಾಗಿದೆ.
ಕರ್ನಾಟಕ ಸರ್ಕಾರ ಆಂಬಿಡೆಂಟ್ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಚಿಂತನೆ ನಡೆಸುತ್ತಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನವದೆಹಲಿ ಪ್ರವಾಸದಲ್ಲಿದ್ದು, ಅವರು ವಾಪಸ್ ಆದ ಬಳಿಕ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ರಾಜಕಾರಣಿಗಳು, ಪತ್ರಕರ್ತರು, ಉದ್ಯಮಿಗಳು ಭಾಗಿಯಾಗಿರುವ ಶಂಕೆ ಇದೆ. ಆದ್ದರಿಂದ, ತನಿಖೆಯನ್ನು ಸಿಸಿಬಿಯಿಂದ ಸಿಐಡಿಗೆ ಹಸ್ತಾಂತರ ಮಾಡುವ ಚಿಂತನೆ ನಡೆದಿದೆ.

ಸಿಐಡಿಯಲ್ಲಿ ಆರ್ಥಿಕ ಅಪರಾಧಗಳನ್ನು ತನಿಖೆ ನಡೆಸಲು ಪ್ರತ್ಯೇಕ ವಿಭಾಗವಿದೆ. ಆದ್ದರಿಂದ, ಸಿಐಡಿಗೆ ಹಸ್ತಾಂತರ ಮಾಡುವ ಕುರಿತು ಆಲೋಚನೆ ನಡೆಸಲಾಗುತ್ತಿದ್ದು, ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ.
ಆಂಬಿಡೆಂಟ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು 6ನೇ ಆರೋಪಿ. ಈಗಾಗಲೇ ಅವರು ಈ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದರು. ಷರತ್ತು ಬದ್ಧ ಜಾಮೀನು ಪಡೆದು ಅವರು ಬುಧವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
'ಕರ್ನಾಟಕದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿದೆ' ಎಂದು ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆಯಾದ ಬಳಿಕ ಆರೋಪ ಮಾಡಿದ್ದರು.
ಜನಾರ್ದನ ರೆಡ್ಡಿ ಆರೋಪದ ಕುರಿತು ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು, 'ಬಿಗ್ ಪೀಪಲ್, ಬಿಗ್ ಟಾಕ್....ಅವರಿಗೆ ಒಳ್ಳೆಯದಾಗಲಿ. ಯಾರು ಏನು ಬೇಕಾದರೂ ಹೇಳಲಿ ನಾನು ಎಲ್ಲವನ್ನು ಪ್ರಸಾದವೆಂದು ಸ್ವೀಕಾರ ಮಾಡುತ್ತೇನೆ' ಎಂದು ವ್ಯಂಗ್ಯವಾಡಿದ್ದಾರೆ.











Click it and Unblock the Notifications