ರಾಜ್ಯದಲ್ಲಿ ಆರು ಹೊಸ ನಗರ ನಿರ್ಮಿಸಲು ಸರ್ಕಾರ ನಿರ್ಧಾರ: ಬಸವರಾಜ ಬೊಮ್ಮಾಯಿ
ಬೆಂಗಳೂರು, ನವೆಂಬರ್ 16: ಬೆಂಗಳೂರಿನ ವ್ಯಾಪ್ತಿ ಒಂದು ಹೊಸ ನಗರ ಸೇರಿದಂತೆ ಕರ್ನಾಟಕದಾದ್ಯಂತ ಒಟ್ಟು ಆರು ಹೊಸ ನಗರ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಇಲ್ಲಿ ಆರಂಭವಾದ ಮೂರು ದಿನಗಳ 25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಬಗ್ಗೆ ಅವರು ಘೋಷಿಸಿದರು. ಪ್ರತಿದಿನ ಸರಾಸರಿ 5,000 ಟೆಕ್ಕಿಗಳು ವೃತ್ತಿಪರ ಕೆಲಸ ಕಾರ್ಯಗಳಿಗಾಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ (ಕೆಐಎ) ನಿಲ್ದಾಣಕ್ಕೆ ಬಂದಿಳಿಯುತ್ತಾರೆ. ನಗರೀಕರಣದಿಂದ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಅಭಿವೃದ್ಧಿಯನ್ನು ವಿಕೇಂದ್ರೀಕರಿಸುವ ಚಿಂತನೆ ನಡೆಸಿದೆ ಎಂದರು.
ಕೆಐಎ ಬಳಿ ಹೊಸ ನಗರ ನಿರ್ಮಾಣ?
ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಶೀಘ್ರದಲ್ಲೇ ಒಟ್ಟು ಆರು ಹೊಸ ನಗರಗಳನ್ನು ನಿರ್ಮಿಸಲಾಗುವುದು. ಕಲಬುರ್ಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ. ಈ ಹೊಸ ನಗರಗಳು ಕರ್ನಾಟಕದ ಆರ್ಥಿಕತೆ ಮತ್ತು ಉತ್ಪಾದಕತೆ ಹೆಚ್ಚಿಸಲು ನೆರವಾಗಲಿವೆ. ಈ ಆರು ಹೊಸ ನಗರಗಳಲ್ಲಿ ಬೆಂಗಳೂರಿನ ಬಳಿ ಒಂದನ್ನು ನಿರ್ಮಿಸಲಾಗುತ್ತಿದೆ. ಇದು ಆದಷ್ಟು ಕೆಐಎಗೆ ಹತ್ತಿರವಿರಲಿದೆ ಎಂದು ಪುನರುಚ್ಚರಿಸಿದರು.

ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ದ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.
ಸ್ಟಾರ್ಟ್ಅಪ್ ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಲಾಗುವುದು. ಪ್ರಧಾನಿಗಳು ಬಿಐಎಎಲ್ ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಪಕ್ಷದಿಂದ ನಡೆದ ಸಮಾರಂಭದಲ್ಲಿ ಮೈಸೂರು ಸುತ್ತಮುತ್ತ ವಿವಿಧ ಉದ್ದೇಶಗಳಿಗೆ ಬಂಡವಾಳ ಹೂಡಿಕೆದಾರರು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಇದರಿಂದ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ತಿಳಿಸಿದರು.












Click it and Unblock the Notifications