ವಿಜಯಪುರ ಕುಡಿಯುವ ನೀರು ಯೋಜನೆ ಪರಿಷ್ಕರಣೆ, ನಿತ್ಯ 135 ಲೀ. ನೀರು ಪೂರೈಕೆ ಗುರಿ
ವಿಜಯಪುರ, ಆಗಸ್ಟ್ 11: ಆರಂಭದಲ್ಲಿ ಗ್ರಾಮ ಪಂಚಾಯಿತಿಗಳಾಗಿದ್ದು ಸದ್ಯ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೆ ಏರಿರುವ ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾಗಳ ವ್ಯಾಪ್ತಿಯಲ್ಲಿ ನೀರು ಪೂರೈಕೆ ಯೋಜನೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಪ್ರತಿಯೊಬ್ಬರಿಗೂ ದಿನಕ್ಕೆ 135 ಲೀಟರ್ ನೀರು ಒದಗಿಸುವ ಗುರಿ ನಾವು ಹೊಂದಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಗುರುವಾರ ವಿಜಯಪುರ ನಗರ ಮತ್ತು ಬಬಲೇಶ್ವರ, ತಿಕೋಟಾ ಪಟ್ಟಣಗಳ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿ ಈ ಮಾಹಿತಿ ನೀಡಿದರು.

ಸಭೆಯಲ್ಲಿ ಮಾತನಾಡಿದ ಅವರು, ಬಬಲೇಶ್ವರ ಹಾಗೂ ತಿಕೋಟಾಗಳಿಗೆ ಮೊದಲು ಪ್ರತೀ ವ್ಯಕ್ತಿಗೆ ದಿನಕ್ಕೆ 55 ಲೀ. ನೀರು ಒದಗಿಸುವ ಮಾನದಂಡಕ್ಕೆ ಅನುಗುಣವಾಗಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆ ಮಂಜೂರಾಗಿತ್ತು. ಅದಕ್ಕೆ 82 ಕೋಟಿ ರೂಪಾಯಿ ಹಣ ಒದಗಿಸಲಾಗುತ್ತಿತ್ತು. ಆದರೆ ಈಗ ಎರಡೂ ಊರುಗಳು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೆ ಏರಿವೆ. ಆದ್ದರಿಂದ ಕುಡಿಯುವ ನೀರು ಸಬರಾಜು ಯೋಜನೆಗಳ ಮರುವಿನ್ಯಾಸ ಮಾಡಿ ದಿನದ 24 ಗಂಟೆಯು ತಲಾ ಹೆಚ್ಚು ನೀರು ಪೂರೈಸಲಾಗುವುದು ಎಂದು ತಿಳಿಸಿದರು.
52 ಕೋಟಿ ರೂ. ವೆಚ್ಚದಲ್ಲಿ ಸಮಸ್ಯೆ ನಿವಾರಣೆ
ವಿಜಯಪುರ ನಗರಕ್ಕೆ ಕೊಲ್ಹಾರದಿಂದ ನೀರನ್ನು ಹೊತ್ತು ತರುವ 10.74 ಕಿ.ಮೀ. ಉದ್ದದ ಕಾಂಕ್ರೀಟ್ ಪೈಪುಗಳಲ್ಲಿ ಸೋರಿಕೆ ಸಮಸ್ಯೆ ಕಂಡು ಬಂದಿದೆ. ಇಲ್ಲಿ ಉತ್ಕೃಷ್ಟ ದರ್ಜೆಯ ಎಂಎಸ್ ಪೈಪ್ ಹಾಕಬೇಕು. 2018ರಲ್ಲಿ ಇದಕ್ಕೆ 32 ಕೋಟಿ ರೂ. ಮಂಜೂರಾಗಿದ್ದರೂ ಟೆಂಡರ್ ರದ್ದಾಗಿತ್ತು. ಈಗ ಇದನ್ನು ಪರಿಷ್ಕರಿಸಲಾಗಿತ್ತು. 52 ಕೋಟಿ ರೂ. ಅಂದಾಜು ವೆಚ್ಚವಾಗಲಿದೆ ಎಂದು ನಿರ್ಧರಿಸಲಾಗಿದೆ. ಈ ವಿಷಯವನ್ನು ತ್ವರಿತವಾಗಿ ಸಚಿವ ಸಂಪುಟದ ಮುಂದೆ ಮಂಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ವಿಜಯಪುರ ನಗರ ದಿನೇ ದಿನೆ ಬೆಳೆಯುತ್ತಿದೆ. 90 ಕಿ.ಮೀ. ದೂರದ ಆಲಮಟ್ಟಿ ಅಣೆಕಟ್ಟೆಯಿಂದ ನೀರು ಪೂರೈಸಲಾಗುತ್ತಿದೆ. ಇಲ್ಲಿಗೆ ಮುಂದಿನ 50 ವರ್ಷಗಳ ಅಗತ್ಯವನ್ನು ಮನಗಂಡು, ದೂರದೃಷ್ಟಿಯಿಂದ ಕುಡಿಯುವ ನೀರು ಪೂರೈಕೆ ಯೋಜನೆ ರೂಪಿಸಬೇಕಾಗಿದೆ. ಇವೆಲ್ಲವನ್ನೂ ನಗರಾಭಿವೃದ್ಧಿ ಇಲಾಖೆ ಒಪ್ಪಿಕೊಂಡಿದ್ದು, ತ್ವರಿತ ಕ್ರಮ ಕೈಗೊಳ್ಳಲಿದೆ.

ಇನ್ನೂ ವಿಜಯಪುರ ನಗರದಲ್ಲಿ ಸುಗಮ ಓಡಾಟ ಮತ್ತು ಸುರಕ್ಷತೆ ಹಾಗೂ ವಿದ್ಯುತ್ ಉಳಿತಾಯದ ದೃಷ್ಟಿಯಿಂದ ಎಲ್ಇಡಿ ದೀಪಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ. ಈಸಂಬಂಧ ಟೆಂಡರ್ ಗೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಒಪ್ಪಿಗೆ ಸೂಚಿಸಬೇಕು ಎಂದು ಹೇಳಿದರು.
ಒಟ್ಟಾರೆಯಾಗಿ, ಈ ಸಭೆಯಲ್ಲಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅನೇಕ ಯೋಜನೆಗಳ ಪರಿಷ್ಕರಣೆ, ದೂರದೃಷ್ಟಿಯ ಅನುಷ್ಠಾನ ಮತ್ತು ಪರಿಣಾಮಕಾರಿ ಸೇವೆಗಳ ಒದಗಿಸುವಿಕೆ ಕುರಿತು ಅಧಿಕಾರಿಗಳೊಂದಿಗೆ ವಿಶದವಾಗಿ ಚರ್ಚಿಸಲಾಯಿತು ಎಂದರು.
ಸಭೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಆಯುಕ್ತ ಶರತ್, ಗ್ರಾಮೀಣ ಕುಡಿಯುವ ನೀರು ಯೋಜನೆ ಆಯುಕ್ತ ನಾಗೇಂದ್ರ ಪ್ರಸಾದ್, ಮುಖ್ಯ ಎಂಜಿನಿಯರ್ ಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications