ಹಿಜಾಬ್ ವಿವಾದದ ಕುರಿತು ಕೋರ್ಟ್ ತೀರ್ಪಿನ ಬಳಿಕ ಮುಂದಿನ ನಿರ್ಧಾರ ಎಂದ ಬಿಸಿ ನಾಗೇಶ್
ಬೆಂಗಳೂರು, ಫೆಬ್ರವರಿ 9: ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ನ್ಯಾಯಾಲಯದ ತೀರ್ಪನ್ನು ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದದ ಕುರಿತು ಮಂಗಳವಾರ ಅಥವಾ ಬುಧವಾರದ ವೇಳೆಗೆ ಹೈಕೋರ್ಟ್ ತೀರ್ಪು ನೀಡಲಿದೆ. ಕೋರ್ಟ್ ಯಾವುದೇ ರೀತಿ ಆದೇಶವನ್ನು ನೀಡಿದರೂ ಅದನ್ನು ಗೌರವಿಸಬೇಕಾಗುತ್ತದೆ. ಕೋರ್ಟ್ ಆದೇಶವನ್ನು ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
ಕರ್ನಾಟಕದಲ್ಲಿ ಹೊತ್ತಿಕೊಂಡಿರುವ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದದ ಕಿಡಿ ರಾಜ್ಯ-ರಾಷ್ಟ್ರದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಯನ್ನು ಹುಟ್ಟು ಹಾಕುತ್ತಿದೆ. ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಮೂರು ದಿನಗಳವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾಂಗ್ರೆಸ್ ಪಿತೂರಿ ಎಂದ ಸಚಿವ ಆರ್ ಅಶೋಕ್:
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸುತ್ತದೆ. ಕೇಸರಿ ಶಾಲು, ಹಿಜಾಬ್ ಅನ್ನು ಹಾಕಿಕೊಳ್ಳುವುದು ಎರಡೂ ತಪ್ಪಾಗುತ್ತದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸುವಲ್ಲಿ ಕಾಂಗ್ರೆಸ್ ಷಡ್ಯಂತ್ರವಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಆರೋಪಿಸಿದ್ದಾರೆ. ಕಾಂಗ್ರೆಸ್ಸಿನ ಒಂದು ವರ್ಗವು ಹಿಜಾಬ್ ವಿವಾದಕ್ಕೆ ಪ್ರೇರೇಪಣೆ ನೀಡುತ್ತಿದ್ದು, ಇನ್ನೊಂದು ವರ್ಗವು ಎರಡೂ ಕಡೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಮೊದಲು ಯಾರ ಪರವಾಗಿದೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಆರ್ ಅಶೋಕ್ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಹುಟ್ಟಿಕೊಂಡ ಹಿಜಾಬ್ ವಿವಾದ:
ಉಡುಪಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ಘಟನೆ ನಂತರ ರಾಜ್ಯದಲ್ಲಿ ವಿವಾದ ಹುಟ್ಟಿಕೊಂಡಿತು. ಕಳೆದ ತಿಂಗಳು ಹುಟ್ಟಿಕೊಂಡ ವಿವಾದ ಮಂಗಳವಾರದ ಹೊತ್ತಿಗೆ ರಾಜ್ಯಾದ್ಯಂತ ಪ್ರತಿಭಟನೆ ಮತ್ತು ಆಕ್ರೋಶದ ಕಿಡಿಯನ್ನು ಹೊತ್ತಿಸಿತು. ಕೆಲವು ಬಲಪಂಥೀಯ ಸಂಘಟನೆಗಳು ಶಾಲಾ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ರಾಜ್ಯದ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ:
ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿನ ಸ್ಥಿತಿಗತಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಾಹಿತಿ ನೀಡಲಾಗಿದೆ. ಹೆಣ್ಣುಮಕ್ಕಳು ವಿದ್ಯೆಗಿಂತ ಧರ್ಮವೇ ಮುಖ್ಯ ಎಂದು ಹಠ ಹಿಡಿದು ಕುಳಿತಿರುವುದನ್ನು ಗಮನಿಸಿದರೆ, ಇದರ ಹಿಂದೆ ಕಾಣದ ಕೈಗಳಿವೆ ಎಂಬ ಅನುಮಾನ ಮೂಡುತ್ತದೆ ಎಂದು ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.












Click it and Unblock the Notifications