ಮೇಕೆದಾಟು ಯೋಜನೆ ತ್ವರಿತ ಅನುಮೋದನೆಗೆ ಕ್ರಮ ಎಂದ ಸಿಎಂ
ಬೆಂಗಳೂರು, ಮಾರ್ಚ್ 18: ಕರ್ನಾಟಕದ ಮಹತ್ವದ ಮೇಕೆದಾಟು ಯೋಜನೆಗೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಪರಿಸರ ಸಚಿವಾಲಯದಿಂದ ತ್ವರಿತ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ನಡೆದ ವಿಧಾನ ಮಂಡಲದ ಉಭಯ ಸದನಗಳ ಸಭಾ ನಾಯಕರ ಸಭೆಯಲ್ಲಿ ಮೇಕೆದಾಟು ಯೋಜನೆಗೆ ಚಾಲನೆ ನೀಡುವುದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಕುರಿತು ತೀರ್ಮಾನಿಸಲಾಯಿತು. ಅಂತರ ರಾಜ್ಯ ಜಲವಿವಾದಗಳ ಕುರಿತಂತೆ ಉಭಯ ಸದನಗಳ ಸಭಾ ನಾಯಕರ ಜೊತೆಗಿನ ಸಭೆ ನಂತರ ಸಿಎಂ ಈ ವಿಷಯ ತಿಳಿಸಿದರು.
ಮೇಕೆದಾಟು ಯೋಜನೆಗೆ ತಮಿಳುನಾಡು ಜೊತೆ ಮಾತುಕತೆ ಅಗತ್ಯವಿಲ್ಲ: ಕುಮಾರಸ್ವಾಮಿ
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಗಳಲ್ಲಿ ಮೇಕೆದಾಟು ಯೋಜನೆಯ ಕುರಿತು ವಿಸ್ತೃತ ಚರ್ಚೆ ಆಗಿದೆ. ಈ ಕುರಿತು ನಡಾವಳಿಗಳಲ್ಲಿ ದಾಖಲಿಸದೆ ಇರುವುದು ಗಮನಕ್ಕೆ ಬಂದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಜಲಶಕ್ತಿ ಸಚಿವರು ಹಾಗೂ ಪ್ರಾಧಿಕಾರದೊಂದಿಗೆ ಚರ್ಚೆ:
ಕೂಡಲೇ ಜಲಶಕ್ತಿ ಸಚಿವರು ಹಾಗೂ ಪ್ರಾಧಿಕಾರದವರೊಂದಿಗೆ ಚರ್ಚಿಸಿ, ನಡಾವಳಿಗಳಲ್ಲಿ ಚರ್ಚೆಯ ಅಂಶಗಳನ್ನು ದಾಖಲಿಸುವ ಕುರಿತು ಕ್ರಮ ವಹಿಸಲಾಗುವುದು. ಮುಂದಿನ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲು ಹಾಗೂ ಪರಿಸರ ಸಚಿವಾಲಯದ ತೀರುವಳಿ ಪಡೆಯಲು ಕ್ರಮ ವಹಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಅಧಿವೇಶನ ಮುಗಿದ ನಂತರ ದೆಹಲಿಗೆ ಸಿಎಂ:
ಮುಂದಿನ ವಾರ ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಲಿದ್ದು, ಅಧಿವೇಶನ ಮುಗಿದ ತಕ್ಷಣ ತಾವೇ ಸ್ವತಃ ದೆಹಲಿಗೆ ತೆರಳಿ ಕೇಂದ್ರ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇನ್ನು ಮಹಾದಾಯಿ ಯೋಜನೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಬಳಕೆಗಾಗಿ ಯೋಜನೆ ಅನುಷ್ಠಾನಕ್ಕೆ ಪರಿಸರ ಇಲಾಖೆಯ ತೀರುವಳಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಸಿಎಂ ಮಾತು:
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಕುರಿತು ಕೇಂದ್ರ ಸರ್ಕಾರ ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ ಮಧ್ಯಂತರ ಅರ್ಜಿ ವಿಚಾರಣೆಯ ಪೀಠದಿಂದ ಇಬ್ಬರು ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ. ಹೊಸ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಭಾರತ ಸರ್ಕಾರದ ನದಿ ಜೋಡಣೆ ಯೋಜನೆ ಸಂಬಂಧ ರಾಜ್ಯಕ್ಕೆ ಹಂಚಿಕೆಯಾಗುವ ನೀರಿನ ಪ್ರಮಾಣವನ್ನು ಸ್ಪಷ್ಟ ಪಡಿಸುವಂತೆ ಕೇಂದ್ರವನ್ನು ಕೋರಲಾಗಿದೆ. ಈ ಯೋಜನೆ ತಾಂತ್ರಿಕ ವರದಿಯ ಮಾಹಿತಿಯನ್ನು ಒದಗಿಸುವಂತೆ ವಿರೋಧ ಪಕ್ಷಗಳು ಕೋರಿದ್ದು, ವರದಿ ಲಭ್ಯವಾದ ಕೂಡಲೇ ಒದಗಿಸಲಾಗುವುದು ಎಂದು ತಿಳಿಸಿದರು.
Recommended Video