ಡಿ. 15ರೊಳಗೆ ರಾಜ್ಯದಲ್ಲಿ 438, ಬೆಂಗಳೂರಲ್ಲಿ 243 'ನಮ್ಮ ಕ್ಲಿನಿಕ್'ಗಳು: ಸಚಿವ ಸುಧಾಕರ್
ಬೆಂಗಳೂರು, ಅ. 6: ನವೆಂಬರ್ ಅಂತ್ಯಕ್ಕೆ ಅಥವಾ ಡಿಸೆಂಬರ್ 15ರೊಳಗೆ ರಾಜ್ಯಾದ್ಯಂತ 438 'ನಮ್ಮ ಕ್ಲಿನಿಕ್'ಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಗುರುವಾರ ಈ ಮಾಹಿತಿ ನೀಡಿದರು. ಅವರ ಪ್ರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲೇ 243 ಕ್ಲಿನಿಕ್ಗಳು ಆರಂಭವಾಗಲಿವೆ ಎಂದು ಹೇಳಿದರು.
ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ನಲ್ಲಿರುವ ಪಂಚಮುಖಿ ದೇವಸ್ಥಾನದ ಸಮೀಪ ʼನಮ್ಮ ಕ್ಲಿನಿಕ್' ಮಾದರಿ ರೂಪಿಸಿದ್ದು, ಇದನ್ನು ಸಚಿವರು ವೀಕ್ಷಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯಾದ್ಯಂತ ನಮ್ಮ ಕ್ಲಿನಿಕ್ಗಳ ಆರಂಭಕ್ಕೆ ಸರಕಾರ ಮಾಡಿರುವ ಯೋಜನೆ ಬಗ್ಗೆ ಮಾಹಿತಿ ನೀಡಿದರು, ಹಾಗೆಯೇ, ಒಂದು ಕ್ಲಿನಿಕ್ಗೆ ಒಬ್ಬ ವೈದ್ಯ, ನರ್ಸಿಂಗ್ ಸಿಬ್ಬಂದಿ ಮತ್ತು ಲ್ಯಾಬ್ ಟೆಕ್ನೀಶಿಯನ್ ಹುದ್ದೆಗಳಂತೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.
"ಬಿಬಿಎಂಪಿ ವ್ಯಾಪ್ತಿಯ ಕ್ಲಿನಿಕ್ಗಳಿಗೆ ವೈದ್ಯರ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, 160 ವೈದ್ಯರು ಈಗಾಗಲೇ ನೇಮಕ ಆಗಿದ್ದಾರೆ. ಉಳಿದ ಎಲ್ಲಾ ಸಿಬ್ಬಂದಿ ಹುದ್ದೆ ತುಂಬಿದೆ. ಬಾಕಿ ಉಳಿದ 83 ಕ್ಕೆ ಮತ್ತೆ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ ಹತ್ತು ದಿನಗಳೊಳಗೆ ಇದು ಕೂಡ ಆಗಲಿದೆ" ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದರು.
ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಂತೆಯೇ ಇದು ಕಾರ್ಯ ನಿರ್ವಹಿಸಲಿದೆ. ಪ್ರತಿ ವಾರ್ಡ್ನಲ್ಲಿ ಒಂದು ಕ್ಲಿನಿಕ್ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಹೆಚ್ಚಲಿದೆ ಎಂದು ಸಚಿವರು ನಿರೀಕ್ಷೆ ವ್ಯಕ್ತಪಡಿಸಿದರು.

ನಗರ ಪ್ರದೇಶಗಳಿಗೆ ಕ್ಲಿನಿಕ್ ಹೆಚ್ಚು ಯಾಕೆ?
ಸಚಿವರು ನೀಡಿದ ಮಾಹಿತಿ ಪ್ರಕಾರ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗಲಿವೆ. ಬೆಂಗಳೂರಿನಲ್ಲಿ ಪ್ರತಿಯೊಂದು ವಾರ್ಡ್ಗೂ ಕನಿಷ್ಠ ಒಂದು ಕ್ಲಿನಿಕ್ಗಳು ಇರಲಿವೆ. ಬೇರೆ ನಗರಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಕ್ಲಿನಿಕ್ಗಳು ತಲೆ ಎತ್ತಲಿವೆ. ಇದಕ್ಕೆ ಕಾರಣ, ಜನಸಂಖ್ಯೆಗೆ ಅನುಗುಣವಾಗಿ ಕ್ಲಿನಿಕ್ಗಳ ಸ್ಥಾಪನೆ ಮಾಡುತ್ತಿರುವುದು.
"ಮಾರ್ಗಸೂಚಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಆದರೆ ನಗರ ಪ್ರದೇಶಗಳಲ್ಲಿ ಇದು ಕಡಿಮೆ ಇದೆ. ಆದ್ದರಿಂದಲೇ ಈ ಯೋಜನೆ ರೂಪಿಸಲಾಗಿದೆ... ಹೆಚ್ಚು ಜನರು ಬಂದು ಆರೋಗ್ಯ ತಪಾಸಣೆ, ಚಿಕಿತ್ಸೆಯ ಸೇವೆ ಪಡೆಯಬೇಕು. ಬಿಬಿಎಂಪಿಯಲ್ಲಿ ಈಗ 198 ವಾರ್ಡ್ಗಳಿವೆ. ಮುಂದೆ ವಾರ್ಡ್ಗಳ ಸಂಖ್ಯೆ ಹೆಚ್ಚಾಗಬಹುದು. ಇದಕ್ಕೆ ಪೂರಕವಾಗಿ ವಾರ್ಡ್ಗೆ ಒಂದರಂತೆ ಈಗಲೇ ಹೆಚ್ಚಿನ ಕ್ಲಿನಿಕ್ಗಳನ್ನು ಮಂಜೂರು ಮಾಡಲಾಗಿದೆ" ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ತಿಳಿಸಿದರು.

ನಮ್ಮ ಕ್ಲಿನಿಕ್ ಹೇಗಿರುತ್ತೆ?
ಸರ್ಕಾರಿ ಕಟ್ಟಡಗಳಲ್ಲಿ ಅಥವಾ ಬಾಡಿಗೆ ಕಟ್ಟಡಗಳಲ್ಲಿ 1,000-1,200 ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಕ್ಲಿನಿಕ್ ರೂಪಿಸಲಾಗುತ್ತಿದೆ. ಪ್ರತಿ ವರ್ಷ ಸಿಬ್ಬಂದಿಗಾಗಿ 138 ಕೋಟಿ ರೂ. ವೆಚ್ಚವಾಗಲಿದೆ. ನಾನ್ ರಿಕರಿಂಗ್ 17.52 ಕೋಟಿ ರೂ. ಸೇರಿ ಒಟ್ಟು 155 ಕೋಟಿ ರೂ. ವೆಚ್ಚವಾಗಲಿದೆ. ಯೋಗ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ ಮೊದಲಾದವುಗಳ ಕುರಿತು ಕ್ಲಿನಿಕ್ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ಪ್ರತೀ ಕ್ಲಿನಿಕ್ನಲ್ಲೂ ಒಬ್ಬ ವೈದ್ಯ, ಶುಶ್ರೂಷಕರು ಮತ್ತು ಲ್ಯಾಬ್ ಟೆಕ್ನೀಶಿಯನ್ ಇರಲಿದ್ದಾರೆ. ಎಕ್ಸ್ರೇ ಇತ್ಯಾದಿ ಯಂತ್ರೋಪಕರಣಗಳು, ರಕ್ತ ಪರೀಕ್ಷೆಗೆ ಲ್ಯಾಬ್ ಈ ಕ್ಲಿನಿಕ್ನಲ್ಲಿ ಇರಲಿದೆ.

ಏರ್ ಆಂಬುಲೆನ್ಸ್?
"ಕಳೆದ 16 ವರ್ಷದಿಂದ ಜಿವಿಕೆ ಸಂಸ್ಥೆ ಆಂಬ್ಯುಲೆನ್ಸ್ ಸೇವೆ ನೀಡುತ್ತಿದೆ. ಒಪ್ಪಂದದ ಪ್ರಕಾರ ಸಂಸ್ಥೆಯೇ ಸಿಬ್ಬಂದಿಗೆ ವೇತನ ನೀಡಬೇಕು. ಸರ್ಕಾರದಿಂದ ಹಣ ಪಾವತಿ ಮಾಡಲಾಗುತ್ತಿದೆ. ಸಿಬ್ಬಂದಿಗೆ ವೇತನ ನೀಡದಿದ್ದರೆ, ಸಂಸ್ಥೆಯವರು ಹಾಗೂ ಸಿಬ್ಬಂದಿ ಕಡೆಯವರನ್ನು ಕರೆಸಿ ನಾಳೆ ಶುಕ್ರವಾರ ಸಭೆ ನಡೆಸಲಾಗುವುದು. ಈಗಾಗಲೇ ಅಧಿಕಾರಿಗಳು ಚರ್ಚೆ ಮಾಡಿದ್ದು, ಒಂದು ವಾರದಲ್ಲಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಲಾಗಿದೆ. ಈ ಸಮಸ್ಯೆಯಿಂದ ಜನರಿಗೆ ತೊಂದರೆಯಾಗಬಾರದು ಎಂದು ಹೇಳಲಾಗಿದೆ.
"ಆಂಬ್ಯುಲೆನ್ಸ್ ಟೆಂಡರ್ ಅಂತಿಮಗೊಳ್ಳುತ್ತಿದ್ದು, ಎರಡು ತಿಂಗಳೊಳಗೆ ಮುಗಿಯಲಿದೆ. ಬಳಿಕ ಸೇವೆ ನೀಡುವವರು ಯಾರೆಂದು ತೀರ್ಮಾನವಾಗಲಿದೆ. ಹಳೆಯ ಸಂಸ್ಥೆಯಿಂದ 2008 ರಲ್ಲಿ ಸೇವೆ ಆರಂಭಿಸಿತ್ತು. ಆದರೆ ಈ ಸಂಸ್ಥೆಯಿಂದ ನಿರೀಕ್ಷಿತ ಸೇವೆ ದೊರೆಯತ್ತಿಲ್ಲ. ಅತ್ಯುತ್ತಮವಾದ ಆಂಬ್ಯುಲೆನ್ಸ್ ಸೇವೆ ನೀಡಲೆಂದೇ ಸರ್ಕಾರ ಹೊಸ ಯೋಜನೆ ರೂಪಿಸಿದೆ.
ಬೈಕ್ ಆಂಬ್ಯುಲೆನ್ಸ್ ಸಂಬಂಧ ರಚಿಸಿದ ಸಮಿತಿಗಳು, ಇದರ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದವು. ಆದ್ದರಿಂದ ಹೊಸ ಟೆಂಡರ್ನಲ್ಲಿ ಬೈಕ್ ಆಂಬ್ಯುಲೆನ್ಸ್ ಪ್ರಸ್ತಾಪ ಇಲ್ಲ. ಆದರೂ ಅಂಗಾಂಗ ದಾನದ ಸಂದರ್ಭ, ರೋಗಿಗಳ ವರ್ಗಾವಣೆಗೆ ಏರ್ ಆಂಬ್ಯುಲೆನ್ಸ್ ಪರಿಚಯಿಸಲು ಸರ್ಕಾರ ಉದ್ದೇಶಿಸಿದೆ. ಇನ್ನೂ ರೂಪರೇಷೆ ಅಂತಿಮವಾಗಿಲ್ಲ" ಎಂದು ಡಾ. ಸುಧಾಕರ್ ಮಾಹಿತಿ ನೀಡಿದರು.

ಜಿಮ್ಗಳಲ್ಲಿ ಬಳಸುವ ಪೌಡರ್ ಬಗ್ಗೆ ನಿಗಾ
ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಮಾಡುವ ಅಭಿಯಾನ ಮಾಡಲಾಗುತ್ತಿದೆ. 30 ವರ್ಷ ಮೇಲ್ಪಟ್ಟ ಎಲ್ಲರೂ ಆರೋಗ್ಯ ತಪಾಸಣೆ ಮಾಡಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಆಹಾರ ಸುರಕ್ಷತಾ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಿಮ್ಗಳಲ್ಲಿ ಬಳಸುವ ಪೌಡರ್ ಬಗ್ಗೆ ಮಾಹಿತಿ ಕಲೆಹಾಕಲು ಸೂಚಿಸಲಾಗಿದೆ. ಆಹಾರದಲ್ಲಿ ಗುಣಮಟ್ಟ ಇಲ್ಲದಿದ್ದರೆ, ಅನುಮತಿ ಇಲ್ಲದಿದ್ದರೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.
(ಒನ್ಇಂಡಿಯಾ ಸುದ್ದಿ)












Click it and Unblock the Notifications